ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ : ಚಲುವರಾಯಸ್ವಾಮಿ

KannadaprabhaNewsNetwork |  
Published : May 25, 2024, 12:49 AM ISTUpdated : May 25, 2024, 04:25 AM IST
೨೪ಕೆಎಂಎನ್‌ಡಿ-೧ಮಂಡ್ಯದ ಕರ್ನಾಟಕ ಸಂಘದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯ ಕಾರ್ಯಕರ್ತರ ಸಭೆಯಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ಮಾತನಾಡಿದರು. | Kannada Prabha

ಸಾರಾಂಶ

ಫಲಿತಾಂಶದ ಬಗ್ಗೆ ಜೆಡಿಎಸ್‌ನವರ ವಾಯ್ಸ್ ಜಾಸ್ತಿ ಇದೆ. ನಮಗೂ ಚುನಾವಣೆ ನಡೆಸಿರುವ ಅನುಭವವಿದೆ. ಚುನಾವಣೆ ಹೇಗೆ ನಡೆದಿದೆ ಎಂಬ ಬಗ್ಗೆ ನಮಗೂ ಮಾಹಿತಿ ಇದೆ. ಅದರ ಆಧಾರದ ಮೇಲೆ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ.  

 ಮಂಡ್ಯ :  ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ. ಅದರಲ್ಲಿ ಯಾವ ಅನುಮಾನವೂ ಇಲ್ಲ. ನೂರಕ್ಕೆ ನೂರು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಗೆಲ್ಲುವುದು ಖಚಿತ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಕರ್ನಾಟಕ ಸಂಘದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾ ಸಂಬಂಧ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಫಲಿತಾಂಶದ ಬಗ್ಗೆ ಜೆಡಿಎಸ್‌ನವರ ವಾಯ್ಸ್ ಜಾಸ್ತಿ ಇದೆ. ಗಟ್ಟಿಯಾಗಿ ಹೇಳುವುದಕ್ಕೆ ಕಾಂಗ್ರೆಸ್‌ನವರಿಗೆ ಹಿಂಜರಿಕೆ, ಭಯ. ನಮಗೂ ಚುನಾವಣೆ ನಡೆಸಿರುವ ಅನುಭವವಿದೆ. ಚುನಾವಣೆ ಹೇಗೆ ನಡೆದಿದೆ ಎಂಬ ಬಗ್ಗೆ ನಮಗೂ ಮಾಹಿತಿ ಇದೆ. ಅದರ ಆಧಾರದ ಮೇಲೆ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ ಎಂದರು.

ಚುನಾವಣೆ ಮುಗಿದ ಬಳಿಕ ಜೆಡಿಎಸ್ ಪರ ಒಂದು ಲಕ್ಷಕ್ಕೆ ಎರಡು ಲಕ್ಷ ರು. ಬೆಟ್ಟಿಂಗ್ ಕಟ್ಟುತ್ತಿದ್ದವರು ಆನಂತರ ಒಂದು ಲಕ್ಷಕ್ಕೆ ಬಂದರು. ಈಗ ಬೆಟ್ಟಿಂಗ್ ಕಟ್ಟುವುದಕ್ಕೆ ಯಾರೂ ಮುಂದೆ ಬರುತ್ತಿಲ್ಲ. ಗೆಲುವಿನ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದರು.

ಜೆಡಿಎಸ್ ಅಭ್ಯರ್ಥಿಗೂ ಶಿಕ್ಷಕರ ಕ್ಷೇತ್ರಕ್ಕೂ ಸಂಬಂಧವಿಲ್ಲ:  ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಕೆ.ಟಿ. ಶ್ರೀಕಂಠೇಗೌಡರಿಗೆ ಟಿಕೆಟ್ ತಪ್ಪಿಸಿ ಬೇರೆಯವರಿಗೆ ನೀಡಿದೆ. ಅವರಿಗೂ ಶಿಕ್ಷಕರ ಕ್ಷೇತ್ರಕ್ಕೂ ಯಾವುದೇ ಸಂಬಂಧ ಇಲ್ಲ. ಆ ಅಭ್ಯರ್ಥಿಯಲ್ಲಿರುವ ಬೇರೆ ಶಕ್ತಿ ನೋಡಿ ಟಿಕೆಟ್ ನಿರ್ಧಾರ ಮಾಡಿದ್ದಾರೆ. ಆದರೆ, ಕೇವಲ ದುಡ್ಡಿದ್ದ ಮಾತ್ರಕ್ಕೆ ಚುನಾವಣೆ ಗೆಲ್ಲುವುದಕ್ಕೆ ಸಾಧ್ಯವಿಲ್ಲ. ಶಿಕ್ಷಕರೊಂದಿಗೆ ನಿರಂತರ ಒಡನಾಟ, ಸಂಪರ್ಕವಿರಬೇಕು. ಅವರ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಸಾಮರ್ಥ್ಯವಿರಬೇಕು ಎಂದರು.

ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರಿಗೆ ಆ ಎಲ್ಲಾ ಗುಣಲಕ್ಷಣಗಳಿವೆ. ನಾಲ್ಕು ವರ್ಷಗಳಿಂದ ಸತತವಾಗಿ ಶಿಕ್ಷಕರ ಸಂಪರ್ಕದಲ್ಲಿದ್ದಾರೆ. ಅವರೊಂದಿಗೆ ಉತ್ತಮ ಸಂಬಂಧವಿಟ್ಟುಕೊಂಡಿದ್ದಾರೆ. ಅವರು ಕಾಂಗ್ರೆಸ್‌ಗೆ ಹೊಸಬರೇನಲ್ಲ. ಹಿಂದೊಮ್ಮೆ ಕಾಂಗ್ರೆಸ್‌ನಿಂದಲೇ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಆಯ್ಕೆಯಾಗಿದ್ದರು. ಅನಿವಾರ್ಯ ಕಾರಣಗಳಿಂದ ಕಾಂಗ್ರೆಸ್ ಬಿಟ್ಟು ಜೆಡಿಎಸ್ ಸೇರಿದ್ದರು. ಈಗ ಜೆಡಿಎಸ್‌ನವರ ಸಹವಾಸ ಹೇಗಿದೆ ಎನ್ನುವುದರ ಬಗ್ಗೆ ಜ್ಞಾನೋದಯವಾಗಿ ಮರಳಿ ಕಾಂಗ್ರೆಸ್ ಸೇರಿದ್ದಾರೆ. ಅವರ ಗೆಲುವಿಗೆ ಎಲ್ಲರೂ ಕೈಜೋಡಿಸುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಬ್ಲಾಕ್ ಮಟ್ಟದ ಕಾಂಗ್ರೆಸ್ ಅಧ್ಯಕ್ಷರು ಜವಾಬ್ದಾರಿ ವಹಿಸಿಕೊಂಡು ಮತದಾರರನ್ನು ಭೇಟಿಯಾಗಿ ಕಾಂಗ್ರೆಸ್ ಅಭ್ಯರ್ಥಿ ಪರ ಮನವೊಲಿಸಬೇಕು. ಚುನಾವಣೆ ದಿನ ೧೦೦ ಜನರು ಮತಗಟ್ಟೆಗಳ ಬಳಿ ಇರಬೇಕು. ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಕಾರ್ಯಕರ್ತರಿಗೆ ಸೂಚಿಸಿದರು.

ಕಾಂಗ್ರೆಸ್ ಕಾರ್ಯಕರ್ತರು ಸಕ್ರಿಯರಾಗಿಲ್ಲ:

ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಮರ್ಥಿಸುವ, ಬೆಂಬಲಿಸುವವರು ಜೆಡಿಎಸ್‌ನೊಳಗೆ ಇದ್ದಾರೆ ಎನ್ನುವುದು ದೊಡ್ಡ ದುರಂತ. ಈ ವಿಚಾರವಾಗಿ ಎಚ್.ಡಿ. ಕುಮಾರಸ್ವಾಮಿ ಏನೇ ಮಾತನಾಡಿದರೂ ಅದನ್ನು ಬೆಂಬಲಿಸಿ ಆ ಪಕ್ಷದ ಕಾರ್ಯಕರ್ತರು ಸಾಮಾಜಿಕ ಜಾಲ ತಾಣಗಳಲ್ಲಿ ಹಾಕುತ್ತಾರೆ. ಇನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಏನೇ ಮಾತನಾಡಿದರೂ ಸಾಮಾಜಿಕ ಜಾಲ ತಾಣಗಳಲ್ಲಿ ಬೆಂಬಲಿಸುವ ಪ್ರಕ್ರಿಯೆ ಮಂಡ್ಯ ಸೇರಿದಂತೆ ರಾಜ್ಯದ ಯಾವ ಜಿಲ್ಲೆಗಳಲ್ಲೂ ನಡೆಯುತ್ತಿಲ್ಲ. ಕಾಂಗ್ರೆಸ್ ಕಾರ್ಯಕರ್ತರೂ ಸಾಮಾಜಿಕ ಜಾಲ ತಾಣಗಳಲ್ಲಿ ಸಕ್ರಿಯರಾಗುವಂತೆ ತಿಳಿಸಿದರು.

ಮಾಜಿ ಶಾಸಕ ಎಚ್.ಬಿ. ರಾಮು ಮಾತನಾಡಿ, ಒಕ್ಕಲಿಗ ನಾಯಕನಾಗಿ ಡಿ.ಕೆ. ಶಿವಕುಮಾರ್ ಬೆಳವಣಿಗೆ ಕಾಣುವುದನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಹಿಸುತ್ತಿಲ್ಲ. ಅದಕ್ಕಾಗಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಹಿಂದೆಲ್ಲಾ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧಿಸುತ್ತಿದ್ದ ಕುಮಾರಸ್ವಾಮಿ ಈಗ ದ್ವೇಷದ ಕಾರಣಕ್ಕಾಗಿಯೇ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ ಎಂದು ಟೀಕಿಸಿದರು.

ಸಭೆಯಲ್ಲಿ ಶಾಸಕ ಪಿ. ರವಿಕುಮಾರ್, ಮಾಜಿ ಶಾಸಕರಾದ ಎಂ. ಶ್ರೀನಿವಾಸ್, ಎಚ್.ಬಿ.ರಾಮು, ಕೆ.ಬಿ. ಚಂದ್ರಶೇಖರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಗಂಗಾಧರ್, ಮಹಿಳಾಧ್ಯಕ್ಷೆ ಅಂಜನಾ ಶ್ರೀಕಾಂತ್, ಮುಖಂಡ ವಿಜಯ್‌ರಾಮೇಗೌಡ, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಎಸ್. ಚಿದಂಬರ್, ತಾಪಂ ಮಾಜಿ ಅಧ್ಯಕ್ಷ ಸಿ.ತ್ಯಾಗರಾಜು, ಕುರುಬರ ಸಂಘದ ಜಿಲ್ಲಾಧ್ಯಕ್ಷ ಸುರೇಶ್, ರುದ್ರಪ್ಪ ಇತರರಿದ್ದರು.

PREV

Recommended Stories

ರಾಹುಲ್‌ ವಿರುದ್ಧ 5ಕ್ಕೆ ಬಿಜೆಪಿ ಧರಣಿ : ಬಿವೈವಿ
ಸಂಘರ್ಷ ಬಿಟ್ಟು ಒಳಮೀಸಲು ಜಾರಿ : ಪರಂ ನೇತೃತ್ವದ ಸಭೆ