;Resize=(412,232))
ಬೆಂಗಳೂರು : ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳದ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಡಾ.ಬಿ.ಡಿ.ಭೂಕಾಂತ್ ಅವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿದ್ದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕಳೆದ ಶನಿವಾರ 54 ನಿಗಮ-ಮಂಡಳಿ ಅಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಅದರಲ್ಲಿ 53 ನಿಗಮ-ಮಂಡಳಿಗಳಿಗೆ ಅಧ್ಯಕ್ಷರಾಗಿ ನೇಮಕವಾಗಿರುವವರು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರಾಗಿದ್ದಾರೆ. ಇನ್ನು, ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳದ ಅಧ್ಯಕ್ಷರಾಗಿರುವ ಡಾ. ಬಿ.ಡಿ.ಭೂಕಾಂತ್ ಅವರು ಬಿಜೆಪಿ ಮುಖಂಡರಾಗಿದ್ದು, ಶಿವಮೊಗ್ಗ ಹಾಪ್ಕಾಮ್ಸ್ನ ಅಧ್ಯಕ್ಷರಾಗಿ ನಂತರ ಮಹಾಮಂಡಳದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅದನ್ನು ಗಮನಿಸದ ರಾಜ್ಯ ಸರ್ಕಾರ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳದ ಅಧ್ಯಕ್ಷರಿಗೂ ರಾಜ್ಯ ಸಚಿವ ಸ್ಥಾನಮಾನ ನೀಡಿ ಆದೇಶಿಸಿದೆ.
ಆದರೆ, ಈ ಆದೇಶ ಕಾಂಗ್ರೆಸ್ ಕಾರ್ಯಕರ್ತರ ಅಸಮಧಾನಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರದಿಂದ ನೇಮಕವಾಗದ ರಾಜ್ಯದ 19 ಹಾಪ್ಕಾಮ್ಸ್ ಅಧ್ಯಕ್ಷರಿಂದ ಆಯ್ಕೆಯಾಗಿ ಮಹಾಮಂಡಳದ ಅಧ್ಯಕ್ಷರಾಗಿರುವ ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಡಾ.ಬಿ.ಡಿ.ಭೂಕಾಂತ್ ಅವರಿಗೂ ರಾಜ್ಯ ಸಚಿವ ಸ್ಥಾನಮಾನ ನೀಡಿರುವುದು ಸರಿಯಲ್ಲ. ಇದರಿಂದ ಕಾಂಗ್ರೆಸ್ ಕಾರ್ಯಕರ್ತರ ಮನೋಸ್ಥೈರ್ಯ ಕುಗ್ಗಲಿದೆ. ಈ ಕೂಡಲೇ ಡಾ.ಬಿ.ಡಿ.ಭೂಕಾಂತ್ ಅವರಿಗೆ ನೀಡಿರುವ ಸ್ಥಾನಮಾನ ಹಿಂಪಡೆಯುವಂತೆ ಆಗ್ರಹಿಸುತ್ತಿದ್ದಾರೆ.