ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು
ಶೋಭ ಕರಂದ್ಲಾಜೆ ವಿರುದ್ಧದ ಅಭಿಯಾನ ಒಂದು ಷಡ್ಯಂತ್ರ. ಅದನ್ನ ಯಾರು ಮಾಡಿಸುತ್ತಿದ್ದಾರೆ ಎಂಬುದು ಗೊತ್ತಿದೆ. ಆದರೆ, ಅವರು ಯಾವುದಕ್ಕೂ ಧೃತಿಗೆಡಲ್ಲ.
ಕೇಂದ್ರ ಸಚಿವೆಯಾಗಿ ಅವರು ಒಳ್ಳೆಯ ಕೆಲಸ ಮಾಡಿದ್ದಾರೆ. ಅವರು ಗೆದ್ದೇ ಗೆಲ್ಲುತ್ತಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.
ಖಾಸಗಿ ಕಾರ್ಯಕ್ರಮದ ನಿಮಿತ್ತ ಚಿಕ್ಕಮಗಳೂರಿಗೆ ಆಗಮಿಸಿದ್ದ ಅವರು, ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು.
ಉಡುಪಿ-ಚಿಕ್ಕಮಗಳೂರು ಸಂಸದೆ ಹಾಗೂ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಕಳೆದ ಬಾರಿ 3.50 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಬಾರಿ ಅದೇ ಅಂತರ ಅಥವಾ ಅದಕ್ಕೂ ಹೆಚ್ಚಿನ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಹೇಳಿದರು.
ಈ ಬಾರಿ ಶೋಭಾ ಕರಂದ್ಲಾಜೆ ಗೆದ್ದೇ ಗೆಲ್ಲುತ್ತಾರೆ. ಅದರ ಬಗ್ಗೆ ಯಾವುದೇ ಅನುಮಾನ ಬೇಡ. ಮೋದಿಯಿಂದಾಗಿ ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣವಿದೆ. ನಾವು ರಾಜ್ಯದಲ್ಲಿ 28ಕ್ಕೆ 28 ಸ್ಥಾನ ಗೆಲ್ಲಬೇಕೆಂದು ಪ್ರಯತ್ನ ಮಾಡುತ್ತಿ ದ್ದೇವೆ. ರಾಜ್ಯದಲ್ಲೂ ಕೂಡ ಅದೇ ವಾತಾವರಣವಿದೆ ಎಂದರು.
ಮಂಡ್ಯ ಟಿಕೆಟ್ ಬಗ್ಗೆ ಚರ್ಚೆಯಾಗಿಲ್ಲ: ಇದೇ ವೇಳೆ ಮಂಡ್ಯ ಟಿಕೆಟ್ ಗೊಂದಲದ ವಿಚಾರವಾಗಿ ಮಾತನಾಡಿದ ಯಡಿಯೂರಪ್ಪ, ‘ಮಂಡ್ಯ ಟಿಕೆಟ್ ಕುರಿತು ಯಾವುದೇ ಚರ್ಚೆಯಾಗಿಲ್ಲ.
ಮುಂದಿನ ಎರಡು ಮೂರು ದಿನಗಳಲ್ಲಿ ಗೊತ್ತಾಗಲಿದೆ. ಬಿಜೆಪಿ ಮೊದಲ ಪಟ್ಟಿ ಮುಂದಿನ ಮೂರು ದಿನಗಳಲ್ಲಿ ಬಿಡುಗಡೆಯಾಗಬಹುದು ಎಂದು ಹೇಳಿದರು.