;Resize=(412,232))
ಬೆಂಗಳೂರು : ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನದ ನಂತರ ರಚನೆ ಆಗಲಿರುವ ಮಂತ್ರಿಮಂಡಲಕ್ಕೆ ಮಾರ್ಗದರ್ಶನ ನೀಡಲು ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಹಿರಿಯ ನಾಯಕರ ಕೋರ್ ಕಮಿಟಿ ರಚಿಸಲು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ.ಕೆ.ಶಿವಕುಮಾರ್ ಅವರನ್ನು ಒಮ್ಮತದಿಂದ ಆಯ್ಕೆ ಮಾಡುವುದರೊಂದಿಗೆ ನಾಯಕತ್ವ ಬದಲಾವಣೆ ಪ್ರಕ್ರಿಯೆ ಪೂರ್ಣಗೊಂಡಂತಾಗಿದೆ. ಆ ಮೂಲಕ ಕಾಂಗ್ರೆಸ್ ಹೈಕಮಾಂಡ್ಗಿದ್ದ ಅತಿದೊಡ್ಡ ತಲೆನೋವು ನಿವಾರಣೆ ಆದಂತಾಗಿದೆ.
ಇದೀಗ ಸಚಿವ ಸಂಪುಟ ರಚನೆ ಕಸರತ್ತು ಆರಂಭವಾಗಲಿದೆ. ಬುಧವಾರ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರದ ಸಂದರ್ಭದಲ್ಲಿ ನೂತನ ಸಚಿವ ಸಂಪುಟ ರಚನೆ ಪ್ರಕ್ರಿಯೆಯೂ ಪೂರ್ಣಗೊಳ್ಳಲಿದೆ. ಅದಾದ ನಂತರ ಶಿವಕುಮಾರ್ ನೇತೃತ್ವದ ಸರ್ಕಾರದ ಕಾರ್ಯಭಾರ ಆರಂಭವಾಗಲಿದೆ. ಈ ಸರ್ಕಾರದ ಕಾರ್ಯಗಳಿಗೆ ಸಂಬಂಧಿಸಿ ಮಾರ್ಗದರ್ಶನ, ಸಲಹೆಗಳನ್ನು ನೀಡಲು ಕೋರ್ ಕಮಿಟಿ ರಚಿಸುವ ಕುರಿತು ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆಸಲಾಗಿದೆ.
ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೋರ್ ಕಮಿಟಿ ರಚಿಸುವ ಚಿಂತನೆಯಿದ್ದು, ಅದರಲ್ಲಿ ಇತರ 9 ಮಂದಿ ಹಿರಿಯ ಶಾಸಕರು, ನಾಯಕರನ್ನು ಸೇರ್ಪಡೆ ಮಾಡುವ ಸಾಧ್ಯತೆಯಿದೆ. ಈ ಕೋರ್ ಕಮಿಟಿಯು ಸರ್ಕಾರ ಕೈಗೊಳ್ಳುವ ಕಾರ್ಯಕ್ರಮಗಳಿಗೆ ಸಲಹೆ ನೀಡುವುದು, ಸರ್ಕಾರಕ್ಕೆ ಎದುರಾಗುವ ಸವಾಲುಗಳಿಗೆ ಪರಿಹಾರ ನೀಡುವುದು ಹಾಗೂ ಪಕ್ಷ ಮತ್ತು ಸರ್ಕಾರದ ನಡುವೆ ಸಮನ್ವಯ ಸಾಧಿಸುವ ಕೆಲಸ ಮಾಡಲಿದೆ. ಸದ್ಯ ಇದು ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯ ಹಂತದಲ್ಲಿದ್ದು, ಸರ್ಕಾರ ರಚನೆ ಸೇರಿ ಇನ್ನಿತರ ಪ್ರಕ್ರಿಯೆ ಪೂರ್ಣಗೊಂಡ ನಂತರ ಕೋರ್ ಕಮಿಟಿ ರಚಿಸುವ ಕುರಿತು ಹೈಕಮಾಂಡ್ ನಾಯಕರು ಸ್ಪಷ್ಟ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.
- ಕೋರ್ ಕಮಿಟಿ ಸರ್ಕಾರ ಕೈಗೊಳ್ಳುವ ಕಾರ್ಯಕ್ರಮಗಳಿಗೆ ಸಲಹೆ
- ಸರ್ಕಾರಕ್ಕೆ ಎದುರಾಗುವ ಸವಾಲುಗಳಿಗೆ ಪರಿಹಾರ ನೀಡುವುದು
- ಪಕ್ಷ ಮತ್ತು ಸರ್ಕಾರದ ನಡುವೆ ಸಮನ್ವಯ ಸಾಧಿಸುವ ಕೆಲಸ
- ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಈ ಕುರಿತು ಚಿಂತನೆ