ಕರ್ನಾಟಕದಲ್ಲಿ ಅತ್ಯಂತ ಭ್ರಷ್ಟ ಸರ್ಕಾರ ಇದೆ : ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ

Published : Feb 07, 2025, 05:56 AM IST
HD Devegowda birthday

ಸಾರಾಂಶ

ರಾಜ್ಯಸಭೆಯಲ್ಲಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು, ಕರ್ನಾಟಕದಲ್ಲಿ ಇರುವುದು ಅತ್ಯಂತ ಭ್ರಷ್ಟ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

 ನವದೆಹಲಿ  : ರಾಜ್ಯಸಭೆಯಲ್ಲಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು, ಕರ್ನಾಟಕದಲ್ಲಿ ಇರುವುದು ಅತ್ಯಂತ ಭ್ರಷ್ಟ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ಗುರುವಾರ ಮಾತನಾಡಿ, ಲೋಕಸಭೆಯಲ್ಲಿ ಬಿಜೆಪಿಗೆ ಸಿಕ್ಕಿರುವುದು 240 ಸ್ಥಾನಗಳಷ್ಟೇ ಎಂದು ಕಾಂಗ್ರೆಸ್‌ ನಾಯಕರು ಲೇವಡಿ ಮಾಡುತ್ತಿದ್ದಾರೆ. ಆದರೆ, ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್‌ 136 ಸ್ಥಾನ ಗೆದ್ದುಕೊಂಡಿದೆ. ಅದರಿಂದ ಉಪಯೋಗವೇನು? ಎಂದರು. ಕಾಂಗ್ರೆಸ್‌ ಯಾವ ರೀತಿ ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿದೆ ಎಂಬುದು ಎಲ್ಲರಿಗೂ ಗೊತ್ತು. ಅಲ್ಲಿರುವುದು ಕಡು ಭ್ರಷ್ಟ ಸರ್ಕಾರ. ಪ್ರಗತಿಶೀಲ ರಾಜ್ಯ ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ಹಾಳು ಮಾಡುತ್ತಿದೆ. ಪರಿಶಿಷ್ಟ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಹಣವನ್ನೂ ಚುನಾವಣೆಗೆ ಬಳಸಿಕೊಂಡಿದೆ. ಯಾವುದೇ ಅಂಜಿಕೆ ಇಲ್ಲದೆ ಭ್ರಷ್ಟಾಚಾರದಲ್ಲಿ ತೊಡಗಿರುವ ಈ ಸರ್ಕಾರದ ಕೆಟ್ಟ ಆಡಳಿತದಿಂದ ಅನೇಕ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡರು ಎಂದು ದೇವೇಗೌಡರು ಗುಡುಗಿದರು. ಇದಕ್ಕೆ ಬೆಂಬಲ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು, ಕಾಂಗ್ರೆಸ್ ಪಕ್ಷದ ಬಗ್ಗೆ ''ಶೇಮ್‌ ಶೇಮ್‌'' ಎಂದು ಘೋಷಣೆ ಕೂಗಿದರು.

ಕರ್ನಾಟಕದ ಸಚಿವರ ಕಾರ್ಯವೈಖರಿ ಬಗ್ಗೆಯೂ ಅಸಮಾಧಾನ ಹೊರಹಾಕಿದ ದೇವೇಗೌಡರು, ಸಚಿವರ ಕಾರ್ಯವೈಖರಿ ಬಗ್ಗೆ ಸ್ವತಃ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತ ಪತ್ರಿಕಾ ವರದಿಗಳನ್ನು ನಾನು ಈ ಸದನದಲ್ಲಿ ಓದಲೇ? ಎಂದರು. ಈ ಸಂದರ್ಭದಲ್ಲಿ ಕಾಂಗ್ರೆಸ್‌ ಸದಸ್ಯರು ಮಾಜಿ ಪ್ರಧಾನಿ ಭಾಷಣಕ್ಕೆ ಅಡ್ಡಿಪಡಿಸಲು ಯತ್ನಿಸಿದರು. ಬೆಂಗಳೂರಲ್ಲಿ ಕುಡಿಯುವ ನೀರು ಬಿಕ್ಕಟ್ಟು:

ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ದಿನೇದಿನೆ ನೀರಿನ ಸಮಸ್ಯೆ ಬಿಗಡಾಯಿಸುತ್ತಿದೆ. ನಗರದ ಜನಸಂಖ್ಯೆ 1.45 ಕೋಟಿ ದಾಟಿದೆ. ನಗರಕ್ಕೆ ಕಾವೇರಿ ನ್ಯಾಯಮಂಡಳಿಯು 20 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿದ್ದು, ಅಷ್ಟು ಪ್ರಮಾಣದ ನೀರು ಏನೇನಕ್ಕೂ ಸಾಲದು. ಕನಿಷ್ಠ 50 ಟಿಎಂಸಿ ಅಡಿ ನೀರು ಹಂಚಿಕೆ ಮಾಡಬೇಕು ಎಂದು ದೇವೇಗೌಡರು ಒತ್ತಾಯ ಮಾಡಿದರು. ಬೆಂಗಳೂರಿನ ನೀರಿನ ಸಮಸ್ಯೆ ಬಗೆಹರಿಸಲು ಹಿಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಮನವಿ ಮಾಡಿದ್ದೆ. ಆಗ ಖರ್ಗೆ ಸಚಿವರಾಗಿದ್ದರು. ಆದರೆ ಸಿಂಗ್ ಅವರು ಕೈ ಚೆಲ್ಲಿದ್ದರು. ಆದರೆ, ಈ ನೀರಿನ ಬಿಕ್ಕಟ್ಟನ್ನು ಬಗೆಹರಿಸಲು ಮೋದಿ ಅವರಿಂದ ಸಾಧ್ಯ. ಇದು ನನ್ನ ಬಲವಾದ ನಂಬಿಕೆ ಎಂದು ಪ್ರತಿಪಾದಿಸಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ನನ್ನದೇನಿದ್ರೂ 2028ಕ್ಕೆ ಸಿಎಂ ಸ್ಥಾನದ ಕ್ಲೇಮು : ಸತೀಶ್‌
ಬಿಜೆಪಿ ಎಷ್ಟು ಕೇಸ್‌ ಸಿಬಿಐಗೆ ನೀಡಿದೆ? : ಸಿಎಂ