ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಪರಿಶಿಷ್ಟ ಜಾತಿ ವಿಭಾಗದ ತಾಲೂಕು ಕಾಂಗ್ರೆಸ್ ಮುಖಂಡ ರಾಜಯ್ಯ ಅಧ್ಯಕ್ಷತೆಯಲ್ಲಿ ನಡೆದ ತಾಲೂಕು ಅಹಿಂದಾ ಮುಖಂಡರ ಸಭೆಯಲ್ಲಿ ಮುಖಂಡರು ಅಧಿಕಾರ ವಿಕೇಂದ್ರೀಕರಣಕ್ಕೆ ಒತ್ತಾಯಿಸಿದರು.
ಪುರಸಭಾ ಸದಸ್ಯ ಡಿ.ಪ್ರೇಂಕುಮಾರ್ ಮಾತನಾಡಿ, ರಾಜ್ಯದಲ್ಲಿ ಯಾವುದೇ ಪಕ್ಷದ ಸರ್ಕಾರ ಅಧಿಕಾರದಲ್ಲಿದ್ದರೂ ಅಹಿಂದಾ ವರ್ಗವನ್ನು ಕಡೆಗಣಿಸುತ್ತಿವೆ. ಅಹಿಂದಾ ವರ್ಗ ಕೇವಲ ಮತ ಹಾಕುವ ಯಂತ್ರಗಳಾಗಿದ್ದಾರೆ. ರಾಜಕೀಯ ಪಕ್ಷಗಳಿಗೆ ನಮ್ಮ ಓಟ್ ಬೇಕು. ಆದರೆ, ನಮಗೆ ಅಧಿಕಾರ ಮಾತ್ರ ಬೇಡ ಎನ್ನುವ ಮನಸ್ಥಿತಿಯಿದೆ ಎಂದು ದೂರಿದರು.ನಾನು ಕಾಂಗ್ರೆಸ್ಸಿಗ. ಕಾಂಗ್ರೆಸ್ನಿಂದ ಮೂರು ಅವಧಿಗೆ ಪುರಸಭಾ ಸದಸ್ಯನಾಗಿ ಆಯ್ಕೆಯಾಗಿದ್ದೇನೆ. ಚುನಾವಣೆ ವೇಳೆ ಮಾತ್ರ ನಮ್ಮ ಪಕ್ಷದ ಮುಖಂಡರು ನನ್ನನ್ನು ಒಂದು ಸಮುದಾಯದ ನಾಯಕನೆಂದು ಗುರುತಿಸಿ ಪಕ್ಷದ ಪರ ಪ್ರಚಾರಕ್ಕೆ ಬಳಕೆ ಮಾಡುತ್ತಾರೆ. ಆದರೆ, ಚುನಾವಣೆ ಮುಗಿದ ನಂತರ ನನ್ನನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ದಲಿತರು ಮತ್ತು ಹಿಂದುಳಿದವರನ್ನು ನಡೆಸಿಕೊಳ್ಳುತ್ತಿರುವ ರೀತಿ ಸರಿಯಲ್ಲ. ದಲಿತ ಮಂತ್ರಿಗಳು ದಲಿತ ಕಾರ್ಯಕರ್ತರನ್ನು ಬೆಳೆಸಬೇಕು. ಕಾಂಗ್ರೆಸ್ ಪಕ್ಷ ದಲಿತರಿಗೆ ನಿಗಮ ಮಂಡಳಿಗಳಲ್ಲಿ ಅಧಿಕಾರ ನೀಡಿ ರಾಜಕೀಯ ಶಕ್ತಿ ನೀಡಬೇಕು. ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ದಲಿತರ ಕಷ್ಟ ಸುಖಗಳನ್ನು ಕೇಳಬೇಕು ಎಂದು ಒತ್ತಾಯಿಸಿದರು.