ನೌಕರರ ಸೇವಾ ಭದ್ರತೆಗೆ ಕ್ರಮ: ಸಚಿವ ಕೆ.ಎನ್.ರಾಜಣ್ಣ
- ಪೌರಾಡಳಿತ ಸಚಿವ ರಹೀಂ ಖಾನ್ ಭರಸವೆಕನ್ನಡಪ್ರಭ ವಾರ್ತೆ ಮಂಡ್ಯ
ರಾಜ್ಯದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಸೇವಾ ಭದ್ರತೆ ಒದಗಿಸಲು ಪೂರಕವಾದ ನಿಯಮಗಳನ್ನು ರೂಪಿಸಿ ಜಾರಿಗೊಳಿಸಲು ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.ಬೆಳಗಾವಿಯ ವಿಧಾನಸಭಾ ಅಧಿವೇಶನದ ಪರಿಷತ್ನಲ್ಲಿ ಸದಸ್ಯ ಮಧು ಜಿ.ಮಾದೇಗೌಡ ಅವರು ಸಹಕಾರ ಸಂಘಗಳ ನೌಕರರಿಗೆ ಸೇವಾ ಭದ್ರತೆ ಒದಗಿಸುವ ಕುರಿತು ಕೇಳಿದ ಪ್ರಶ್ನೆಗೆ ಸಚಿವರು ಲಿಖಿತ ಉತ್ತರ ನೀಡಿದರು.
ಪ್ರತಿ ಗ್ರಾಪಂಗೊಂದರಂತೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತೆರೆಯುವ ಬಗ್ಗೆಯೂ ಪ್ರಕ್ರಿಯೆಗಳು ನಡೆದಿವೆ. ಪ್ರಸ್ತುತ ಪ್ರತಿ ಗ್ರಾಪಂಗೆ ಒಂದರಂತೆ ಒಟ್ಟು 4,733 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿವೆ. ರಾಜ್ಯದಲ್ಲಿ ಒಟ್ಟು 6,084 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ 15,617 ಹಾಲು ಉತ್ಪಾದಕರ ಸಹಕಾರ ಸಂಘಗಳಿವೆ ಎಂದು ಮಾಹಿತಿ ನೀಡಿದರು.
ಬಾಕ್ಸ್ ಮಾಡಿ...ಮಂಡ್ಯ ನಗರಸಭೆ ಮೇಲ್ದರ್ಜೆಗೆ ಪರಿಶೀಲನೆ
ಮಂಡ್ಯ ನಗರಸಭೆಯನ್ನು ನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸುವ ಕುರಿತು ಪರಿಷತ್ ಸದಸ್ಯ ಮಧು ಜಿ.ಮಾದೇಗೌಡರು ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಪೌರಾಡಳಿತ ಸಚಿವ ರಹೀಂ ಖಾನ್, ಅಂತಹ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ತಿಳಿಸಿದ್ದಾರೆ.ಆದರೆ, ಮಂಡ್ಯ ಜಿಲ್ಲಾಧಿಕಾರಿಗಳು ನಗರಸಭೆಯನ್ನು ಮೇಲ್ದರ್ಜೆಗೇರಿಸುವುದಕ್ಕಾಗಿ ಅಗತ್ಯ ದಾಖಲೆಗಳೊಂದಿಗೆ ಪ್ರಸ್ತಾವನೆಯನ್ನು ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯರವರಿಗೆ ಸಲ್ಲಿಸಿದಲ್ಲಿ ಮತ್ತು ಪೌರಾಡಳಿತ ನಿರ್ದೇಶಕರಿಂದ ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ರನ್ವಯ ಅರ್ಹ ಪ್ರಸ್ತಾವನೆಯು ಸೂಕ್ತ ಶಿಫಾರಸ್ಸಿನೊಂದಿಗೆ ಸರ್ಕಾರದಲ್ಲಿ ಸ್ವೀಕೃತವಾದಲ್ಲಿ ನಿಯಮಾನುಸಾರ ಅರ್ಹತೆಯನ್ನು ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.