ಎಚ್ಚರಿಕೆ- ಅಪ್ರಚಾರ ಮಾಡಿದರೇ ವಿಪಕ್ಷಗಳಿಗೆ ಕಂಠಕ- ಮೋದಿ ಟೀಕಿಸಿ ಏನು ಸಾಧಿಸ್ತೀರಿ
ಮತಚೋರಿ ಹೆಸರಲ್ಲಿ ಮೋದಿ ಸರ್ಕಾರದ ವಿರುದ್ಧ ವಿಪಕ್ಷಗಳಿಂದ ಅಪಪ್ರಚಾರ ಸರಿಯಲ್ಲ
ನಿರಂತರವಾಗಿ ಹೀಗೆ ಸುಳ್ಳಿನ ಪ್ರಚಾರ ಮಾಡಿದರೆ ಭವಿಷ್ಯದಲ್ಲಿ ಪ್ರತಿಪಕ್ಷಗಳಿಗೇ ಕಂಠಕನೆಹರೂ ಕಾಲದಲ್ಲೂ ಮತಪಟ್ಟಿಯಲ್ಲಿ ದೋಷವಿತ್ತು. ಸುಳ್ಳ ಹೇಳಿ ಚುನಾವಣೆ ಗೆಲ್ಲಲಾಗಲ್ಲ
ಮತಪಟ್ಟಿ ಪರಿಷ್ಕರಣೆ ಕುರಿತು ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಮಾತು---ನವದೆಹಲಿ: ವೋಟ್ ಚೋರಿ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಹಾಗೂ ಸಾಂವಿಧಾನಿಕ ಸಂಸ್ಥೆಗಳ ವಿರುದ್ಧ ಸುಳ್ಳಿನ ಸಂಕಥನ ಸೃಷ್ಟಿಸುತ್ತಿರುವ ಪ್ರತಿಪಕ್ಷಗಳು ಭವಿಷ್ಯದಲ್ಲಿ ಘೋರ ಪರಿಣಾಮ ಅನುಭವಿಸುತ್ತವೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಗಂಭೀರ ಎಚ್ಚರಿಕೆ ನೀಡಿದ್ದಾರೆ.
ರಾಜ್ಯಸಭೆಯಲ್ಲಿ ಸೋಮವಾರ ಈ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಪ್ರಧಾನಿ, ‘ಪ್ರತಿಪಕ್ಷಗಳು ನಿರಂತರವಾಗಿ ಸುಳ್ಳಿನ ಕಥೆಗಳನ್ನು ಪ್ರಚಾರ ಮಾಡುತ್ತಾ ಹೋದರೆ, ಮತದಾರರ ಮನಸ್ಸಿನಲ್ಲಿ ಅನುಮಾನಗಳನ್ನು ಹುಟ್ಟು ಹಾಕಿದರೆ ಅದರಿಂದ ಪ್ರತಿಪಕ್ಷಗಳಿಗೆ ಒಳ್ಳೆಯದು ಮಾಡುವುದಿಲ್ಲ. ನಮ್ಮದು ಬಹಳ ದೊಡ್ಡ ರಾಷ್ಟ್ರ. ಕಾಂಗ್ರೆಸ್ ಪಕ್ಷವು ಮೂರು ರಾಜ್ಯಗಳಲ್ಲಿ ಅಧಿಕಾರದಲ್ಲಿ ಇರಬಹುದು. ನನ್ನ ಪ್ರತಿಪಕ್ಷ ಸ್ನೇಹಿತರೇ ದಯವಿಟ್ಟು ನೆನಪಿಡಿ ''''ವೋಟ್ ಚೋರಿ'''' ಎಂಬ ಪದಗಳನ್ನು ಬಳಸುವುದರಿಂದ ನೀವು ಮುಂಬರುವ ದಿನಗಳಲ್ಲಿ ತೊಂದರೆ ಅನುಭವಿಸುತ್ತೀರಿ. ನೀವು ಯುದ್ಧದಲ್ಲಿ ಗೆಲ್ಲಲು ಸಾಧ್ಯವಿಲ್ಲ’ ಎಂದು ಕಟುವಾದ ಶಬ್ದಗಳಲ್ಲಿ ಎಚ್ಚರಿಸಿದರು.ʼವೋಟ್ ಚೋರಿʼ ಎಂಬ ಅಪಪ್ರಚಾರದ ಮೂಲಕ ನರೇಂದ್ರ ಮೋದಿ ಅವರ ನಾಯಕತ್ವವನ್ನು ದೂಷಿಸುವ ಮೂಲಕ ಮತ್ತು ಮತದಾರರ ಮನಸ್ಸಿನಲ್ಲಿ ಅನುಮಾನವನ್ನು ಸೃಷ್ಟಿಸುವ ಮೂಲಕ ಪ್ರತಿಪಕ್ಷಗಳು ಏನು ಗಳಿಸಲಿವೆ ಎಂದು ಪ್ರಶ್ನಿಸಿದ ಮಾಜಿ ಪ್ರಧಾನಿ; ನಿಮ್ಮ ಮನಸ್ಸಿಗೆ ಏನಾಗಿದೆ? ಏನಾದರೂ ಸಮಸ್ಯೆ ಇದ್ದರೆ ಸರಿಪಡಿಸಿಕೊಳ್ಳಿ ಎಂದು ಪ್ರತಿಪಕ್ಷದವರಿಗೆ ಕಿವಿಮಾತು ಹೇಳಿದರು.
ನಾನು ಏಳು ದಶಕಗಳಿಗೂ ಹೆಚ್ಚಿನ ಸಾರ್ವಜನಿಕ ಜೀವನದಲ್ಲಿ ಚುನಾವಣೆಯಲ್ಲಿ ಸೋಲು ಗೆಲುವನ್ನು ಎದುರಿಸಿದ್ದೇನೆ. ನಾನು ಎಂದಿಗೂ ಮತಗಳ್ಳತನದ ಅಂತಹ ವಿಷಯಗಳನ್ನು ಹೇಳಲಿಲ್ಲ ಎಂದು ಮಾಜಿ ಪ್ರಧಾನಿ ಒತ್ತಿ ಹೇಳಿದರು.ಕೇರಳದಲ್ಲಿ 18,000 ಮತದಾರರ ಸೇರ್ಪಡೆಗೆ ಸಂಬಂಧಿಸಿದಂತೆ ಅಂದಿನ ಪ್ರಧಾನಿ ಜವಾಹರಲಾಲ್ ನೆಹರು ಬರೆದ ಪತ್ರ ಉಲ್ಲೇಖಿಸಿದ, ದೇವೇಗೌಡ, ‘ನಾನು ಇದನ್ನು ಏಕೆ ಹೇಳುತ್ತಿದ್ದೇನೆಂದರೆ ನೆಹರು ಅವಧಿಯಲ್ಲಿಯೂ ಸಹ ಚುನಾವಣಾ ವ್ಯವಸ್ಥೆಯಲ್ಲಿ ಕೆಲವು ಲೋಪಗಳು ಇದ್ದವು’ ಎಂಬುದಾಗಿ ಜೂನ್ 1, 1996 ಮತ್ತು ಏಪ್ರಿಲ್ 21, 1997ರ ನಡುವೆ ಪ್ರಧಾನಿಯಾಗಿದ್ದ ದೇವೇಗೌಡರು ಹೇಳಿದರು.
ಮತದಾರರ ಪಟ್ಟಿಯಲ್ಲಿನ ಲೋಪಗಳನ್ನು ಪ್ರಸ್ತಾಪಿಸಿಯೂ ಕಾಂಗ್ರೆಸ್ ಪಕ್ಷವು ಇತ್ತೀಚಿಗೆ ಬಿಹಾರ ಚುನಾವಣೆಯಲ್ಲಿ ಸೋಲು ಎದುರಿಸಿತು . ಮತದಾರರ ಪಟ್ಟಿಯ ಕೂಲಂಕಶ ಪರಿಶೀಲನೆಯ ನಂತರವೂ ಆ ರಾಜ್ಯದಲ್ಲಿ ಏನಾಯಿತು ಎಂಬುದನ್ನು ಸ್ವತಃ ಪ್ರತಿಪಕ್ಷ ನಾಯಕರು ಆಲೋಚಿಸಬೇಕು. ಆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆರು ಶಾಸಕರು ಸಿಕ್ಕಿದ್ದಾರೆ ಎಂದು ಮಾಜಿ ಪ್ರಧಾನಿ ಕಟುವಾಗಿ ಟೀಕಿಸಿದರು.ಮತದಾರರ ಪಟ್ಟಿಯ ಪರಿಷ್ಕರಣೆ ಬಗ್ಗೆ ಪ್ರಧಾನಿಗಳ ವಿರುದ್ಧ ಪ್ರತಿಪಕ್ಷಗಳು ಆರೋಪಗಳನ್ನು ಮಾಡಲು ಅವರು ಏಕೆ ಬಯಸುತ್ತಾರೆ ಎಂದು ಖಾರವಾಗಿ ಪ್ರಶ್ನಿಸಿದ ದೇವೇಗೌಡರು; ದೇಶದಲ್ಲಿ ಚುನಾವಣಾ ಆಯೋಗವಿದೆ, ಸುಪ್ರೀಂ ಕೋರ್ಟ್ ಇದೆ. ಈ ಎಲ್ಲ ವಿಷಯಗಳನ್ನು ಸರಿಪಡಿಸಲು ಚುನಾವಣಾ ಆಯೋಗವು ಎಲ್ಲಾ ರಾಜ್ಯ ಘಟಕಗಳಿಗೆ ನಿರ್ದೇಶನ ನೀಡಿದೆ ಎಂದು ಅವರು ಒತ್ತಿ ಹೇಳಿದರು.
ರಾಷ್ಟ್ರದ ಜನರು ನರೇಂದ್ರ ಮೋದಿ ಅವರ ಸರಕಾರದ ಮೇಲೆ ಸಂಪೂರ್ಣ ವಿಶ್ವಾಸ ಹೊಂದಿದ್ದಾರೆ ಮತ್ತು ಮುಂದಿನ ಲೋಕಸಭೆ ಚುನಾವಣೆಯ ನಂತರವೂ ಅವರು ಮತ್ತೆ ಅಧಿಕಾರಕ್ಕೆ ಬರುತ್ತಾರೆ ಎಂದು ದೇವೇಗೌಡರು ಭವಿಷ್ಯ ನುಡಿದರು.