ಕನ್ನಡಪ್ರಭ ವಾರ್ತೆ ಮಳವಳ್ಳಿ
ಸ್ವಕ್ಷೇತ್ರದ 20 ಗ್ರಾಪಂಗಳಲ್ಲಿ ಭಾನುವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರವಾಸ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಪಟ್ಟಣದ ಪ್ರವಾಸಿ ಮಂದಿರದ ಬಳಿಯಿಂದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ನೂರಾರು ಬೆಂಬಲಿಗರು ಕನಕಪುರ ತಾಲೂಕಿನ ಹೇರಂದ್ಯಾಪನಹಳ್ಳಿ ಬಳಿ ಸಿಎಂ ಅವರನ್ನು ಭೇಟಿಯಾಗಿ ಶುಭ ಕೋರಿ ಸಚಿವ ಸ್ಥಾನಕ್ಕೆ ಮನವಿ ಮಾಡಿದರು.
ನರೇಂದ್ರಸ್ವಾಮಿ ಅವರು ಮೂರು ಬಾರಿ ಕ್ಷೇತ್ರದ ಶಾಸಕರಾಗಿದ್ದಾರೆ. ಒಮ್ಮೆ ಸಚಿವರಾಗಿಯೂ ಆಡಳಿತ ನಡೆಸಿದ ಅನುಭವವಿದೆ. ಶಾಸಕರಾಗಿಯೂ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡಿದರೆ ಇನ್ನಷ್ಟು ಹೆಚ್ಚಿನ ಅಭಿವೃದ್ಧಿ ಹಾಗೂ ಪಕ್ಷ ಸಂಘಟನೆಗೆ ಬೆಂಬಲ ನೀಡಿದಂತಾಗುತ್ತದೆ ಎಂದು ನರೇಂದ್ರ ಸ್ವಾಮಿ ಸಚಿವ ಸ್ಥಾನ ನೀಡುವಂತೆ ಟಿಎಪಿಸಿಎಂಎಸ್ ನಿರ್ದೇಶಕ ಕೆ.ಜೆ.ದೇವರಾಜು ನಾಯಕರಲ್ಲಿ ಮನವಿ ಮಾಡಿದರು.2013ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೇ ಪಿ.ಎಂ.ನರೇಂದ್ರಸ್ವಾಮಿ ಅವರಿಗೆ ಸಚಿವ ಸ್ಥಾನ ಸಿಗಬೇಕಿತ್ತು. ಆದರೆ, ದಲಿತ ಕೋಟಾದಲ್ಲಿ ಅವರಿಗೆ ಸಿಗಲಿಲ್ಲ. 2023ರಲ್ಲಿ ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾದಾಗಲೂ ನಿರೀಕ್ಷೆ ಹುಸಿಯಾಯಿತು. ಈಗ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿದ್ದಾರೆ. ಎಲ್ಲರೊಂದಿಗೂ ಉತ್ತಮ ಒಡನಾಟವಿಟ್ಟುಕೊಂಡು, ಆಡಳಿತದ ಅನುಭವವನ್ನು ಹೊಂದಿರುವ ನರೇಂದ್ರಸ್ವಾಮಿ ಅವರಿಗೆ ಮಂತ್ರಿಸ್ಥಾನ ದೊರಕಿಸಿಕೊಡುವಂತೆ ಕೋರಿದರು.