ಸೋಲಿನಿಂದ ಬೇಸರಗೊಂಡ ಮಾಜಿ ಮಂತ್ರಿಗೆ ನಡ್ಡಾ ಭೇಟಿಯಾಗಲು ದಿಲ್ಲಿಗೆ ಬುಲಾವ್. ಯಡಿಯೂರಪ್ಪ, ಯತ್ನಾಳ್ರನ್ನೂ ಕರೆಸಿ. ತೇಪೆ ಹಚ್ಚಿ ಕಳಿಸಬೇಡಿ: ಸೋಮಣ್ಣ ಬೇಡಿಕೆ. ವಿಧಾನಸಭೆ ಚುನಾವಣೆಯಲ್ಲಿ ಸ್ವಪಕ್ಷೀಯರೇ ತಮ್ಮ ಸೋಲಿಗೆ ಕಾರಣರಾದರು ಎಂದು ಸೋಮಣ್ಣ ಬೇಸರ. ಆರು ತಿಂಗಳಿನಿಂದ ಪಕ್ಷದ ಚಟುವಟಿಕೆಗಳಿಂದ ದೂರ. ಸೋಮಣ್ಣ ಸೆಳೆಯಲು ಕಾಂಗ್ರೆಸ್ನಿಂದ ಯತ್ನ. ಪಕ್ಷದಲ್ಲೇ ಉಳಿಸಿಕೊಳ್ಳಲು ರಾಜ್ಯ ಬಿಜೆಪಿಗರ ಬೇಡಿಕೆ. ಹೀಗಾಗಿ ಮಾತುಕತೆಗೆ ಮುಂದಾಗಿರುವ ಬಿಜೆಪಿ ವರಿಷ್ಠರು.
ಕನ್ನಡಪ್ರಭ ವಾರ್ತೆ ಬೆಳಗಾವಿಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ವಪಕ್ಷೀಯರೇ ತಮ್ಮ ಸೋಲಿಗೆ ಕಾರಣರಾದರು ಎಂದು ಬೇಸರಗೊಂಡಿರುವ ಮಾಜಿ ಸಚಿವ ವಿ.ಸೋಮಣ್ಣ ಅವರೊಂದಿಗೆ ಸಂಧಾನ ಪ್ರಯತ್ನ ಆರಂಭಿಸಿರುವ ದೆಹಲಿಯ ಬಿಜೆಪಿ ವರಿಷ್ಠರು ಅವರನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ.
ಆದರೆ, ಮಾತುಕತೆ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೂ ಉಪಸ್ಥಿತರಿರಬೇಕು. ವರಿಷ್ಠರ ಸಮ್ಮುಖದಲ್ಲಿ ಮುಖಾಮುಖಿ ಮಾತುಕತೆ ಆಗಲಿ ಎಂಬ ಪಟ್ಟು ಮುಂದಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.ದೆಹಲಿಯಿಂದ ಸೋಮಣ್ಣ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಪಕ್ಷದ ಮುಖಂಡರೊಬ್ಬರು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಮಾತುಕತೆ ನಡೆಸಲು ಬರುವಂತೆ ಆಹ್ವಾನಿಸಿದ್ದಾರೆ.ಮಾತುಕತೆಗೆ ಬರಲು ಒಪ್ಪಿದ ಸೋಮಣ್ಣ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನೂ ಕರೆಸಿ. ಜತೆಗೆ ಸಾಧ್ಯವಾದರೆ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನೂ ಕರೆಸುವಂತೆ ಹೇಳಿದ್ದಾರೆ ಎನ್ನಲಾಗಿದೆ.ಕಳೆದ ಚುನಾವಣೆಯಲ್ಲಿ ತಾವು ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲಿ ಸೋಲು ಉಂಟಾಗಲು ಕಾರಣ ಏನು, ಸೋಲಿಗೆ ಯಾರು ಪ್ರಯತ್ನ ಮಾಡಿದರು ಎಂಬುದನ್ನು ಯಡಿಯೂರಪ್ಪ ಅವರ ಮುಂದೆಯೇ ವಿವರವಾಗಿ ಚರ್ಚೆ ಮಾಡಬೇಕಾಗಿದೆ. ಇಲ್ಲದಿದ್ದರೆ ಕೇವಲ ನಾನೊಬ್ಬನೇ ಬಂದು ಮಾತುಕತೆ ಮಾಡಿದರೆ ಕೇವಲ ತೇಪೆ ಹಚ್ಚುವ ಕೆಲಸ ನಡೆಯುತ್ತದೆ ಎಂಬುದಾಗಿ ತಿಳಿಸಿದರು ಎಂದು ಮೂಲಗಳು ತಿಳಿಸಿವೆ.ಸೋಮಣ್ಣ ಅವರ ಮಾತನ್ನು ಕೇಳಿಸಿಕೊಂಡ ಆ ಮುಖಂಡರು, ವರಿಷ್ಠರೊಂದಿಗೆ ಮಾತನಾಡಿ ತಿಳಿಸುವುದಾಗಿ ಹೇಳಿದ್ದಾರೆ ಎಂದು ಗೊತ್ತಾಗಿದೆ.ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದ ಬಳಿಕ ಕಳೆದ ಆರು ತಿಂಗಳಿಂದ ಪಕ್ಷದ ಚಟುವಟಿಕೆಗಳಿಂದ ಅಂತರ ಕಾಪಾಡಿಕೊಂಡಿರುವ ಸೋಮಣ್ಣ ಅವರು ಆಗಾಗ ತಮ್ಮ ಅಸಮಾಧಾನ ಹೊರಹಾಕುತ್ತಲೇ ಇದ್ದಾರೆ. ಈ ನಡುವೆ ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸೋಮಣ್ಣ ಅವರನ್ನು ಸೆಳೆಯಲು ಆಡಳಿತಾರೂಢ ಕಾಂಗ್ರೆಸ್ ಪಕ್ಷ ಪ್ರಯತ್ನ ನಡೆಯುತ್ತಿದೆ ಎಂಬ ವದಂತಿಯಿದೆ. ಹೀಗಾಗಿ ಸೋಮಣ್ಣ ಅವರನ್ನು ಪಕ್ಷದಲ್ಲೇ ಉಳಿಸಿಕೊಂಡು ಸೂಕ್ತ ಸ್ಥಾನಮಾನ ನೀಡುವ ಮೂಲಕ ಅವರ ಸಾಮರ್ಥ್ಯವನ್ನು ಬಳಸಿಕೊಳ್ಳುವಂತಾಗಬೇಕು ಎಂಬ ಕೂಗು ಬಿಜೆಪಿಯಲ್ಲಿ ಕೇಳಿಬರುತ್ತಿದೆ.
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.