ಸೋಮಣ್ಣ ಮುನಿಸು ಶಮನಕ್ಕೆ ಎಚ್‌ಡಿ ದೇವೇಗೌಡ ಮಧ್ಯಸ್ಥಿಕೆ

KannadaprabhaNewsNetwork |  
Published : Jan 06, 2024, 02:00 AM ISTUpdated : Jan 06, 2024, 02:35 PM IST
HDD and  V Somanna | Kannada Prabha

ಸಾರಾಂಶ

ಎರಡು ವಿಧಾನಸಭೆ ಕ್ಷೇತ್ರಗಳಲ್ಲಿ ಹೀನಾಯವಾಗಿ ಸೋಲು ಕಂಡ ಮಾಜಿ ಸಚಿವ ವಿ ಸೋಮಣ್ಣನವರನ್ನು ಜೆಡಿಎಸ್‌ ವರಿಷ್ಠ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ತಮ್ಮ ನಿವಾಸಕ್ಕೆ ಕರೆಸಿ ಸಮಾಧಾನ ಮಾಡಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಕಳೆದ ವಿಧಾನಸಭಾ ಚುನಾವಣೆಯ ಸೋಲಿನ ಬಳಿಕ ಪಕ್ಷದ ರಾಜ್ಯ ಘಟಕದ ಕೆಲ ನಾಯಕರ ವಿರುದ್ಧ ಮುನಿಸಿಕೊಂಡಿರುವ ಮಾಜಿ ಸಚಿವ ವಿ.ಸೋಮಣ್ಣ ಅವರನ್ನು ಸಮಾಧಾನಪಡಿಸುವ ಸಂಬಂಧ ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಮಧ್ಯಸ್ಥಿಕೆ ವಹಿಸಲು ಮುಂದಾಗಿದ್ದಾರೆ.

ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವಂಥ ಕಠಿಣ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಸಲಹೆ ನೀಡಿರುವ ದೇವೇಗೌಡ, ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ರಾಷ್ಟ್ರೀಯ ನಾಯಕರೊಂದಿಗೆ ಮಾತುಕತೆ ನಡೆಸುವ ಭರವಸೆಯನ್ನೂ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಶುಕ್ರವಾರ ಸಂಜೆ ಸೋಮಣ್ಣ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸಮಾಲೋಚನೆ ನಡೆಸಿದ ದೇವೇಗೌಡ, ವಿಧಾನಸಭೆ ಚುನಾವಣೆಯಿಂದ ಇದುವರೆಗೆ ಆಗಿರುವ ಬೆಳವಣಿಗೆಗಳ ಮಾಹಿತಿ ಪಡೆದರು. ಇದೇ ವೇಳೆ ಗೌಡರ ಪುತ್ರರೂ ಆಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರೂ ಉಪಸ್ಥಿತರಿದ್ದರು.

ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟಿದೆ. ರಾಜ್ಯದಲ್ಲಿನ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲು ಇದೊಂದು ಸುಸಂದರ್ಭ ಇಂಥ ಸನ್ನಿವೇಶದಲ್ಲಿ ನೀವು ಬಿಜೆಪಿಯಲ್ಲಿನ ಕೆಲವು ಅಹಿತಕರ ಬೆಳವಣಿಗೆ ಹಿನ್ನೆಲೆಯಲ್ಲಿ ಪಕ್ಷ ತೊರೆಯುವಂಥ ನಿರ್ಧಾರಕ್ಕೆ ಬರಬಾರದು. 

ಏನೇ ಭಿನ್ನಾಭಿಪ್ರಾಯ ಇದ್ದರೂ ಅದನ್ನು ಸರಿಪಡಿಸೋಣ. ನಿಮ್ಮ ಸಂಘಟನಾ ಸಾಮರ್ಥ್ಯ ಬಳಕೆಯಾಗಬೇಕು ಎಂಬ ಮಾತುಗಳನ್ನು ದೇವೇಗೌಡ ಮತ್ತು ಕುಮಾರಸ್ವಾಮಿ ಆಡಿದ್ದಾರೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ತಾವು ಸಂಕ್ರಾಂತಿ ಬಳಿಕ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ರಾಷ್ಟ್ರೀಯ ನಾಯಕರೊಂದಿಗೆ ಮಾತುಕತೆ ನಡೆಸುತ್ತೇನೆ. ನಿಮಗೆ ಅನ್ಯಾಯ ಆಗಿದ್ದರೆ ಅದನ್ನು ಸರಿ ಮಾಡೋಣ. ಪಕ್ಷ ತೊರೆಯುವ ಚಿಂತನೆ ಏನಾದರೂ ಇದ್ದರೆ ಅದನ್ನು ತೊಡೆದು ಹಾಕಿ. ಬಿಜೆಪಿಯಲ್ಲೇ ಮುಂದುವರೆಯುವ ಬಗ್ಗೆ ಗಮನಹರಿಸಿ ಎಂಬ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದೇ ವೇಳೆ ಸೋಮಣ್ಣ ಅವರು ತಾವು ಈ ತಿಂಗಳ 8 ಅಥವಾ 9ರಂದು ದೆಹಲಿಗೆ ತೆರಳಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸುವ ಉದ್ದೇಶವನ್ನು ಗೌಡರಿಗೆ ತಿಳಿಸಿದ್ದಾರೆ. ಅದಕ್ಕೆ ಗೌಡರು ಹೋಗಿ ಬನ್ನಿ ಎಂಬ ಮಾತನ್ನೂ ಹೇಳಿದ್ದಾರೆ ಎನ್ನಲಾಗಿದೆ.

PREV

Recommended Stories

ರಾಹುಲ್‌ ವಿರುದ್ಧ 5ಕ್ಕೆ ಬಿಜೆಪಿ ಧರಣಿ : ಬಿವೈವಿ
ಸಂಘರ್ಷ ಬಿಟ್ಟು ಒಳಮೀಸಲು ಜಾರಿ : ಪರಂ ನೇತೃತ್ವದ ಸಭೆ