;Resize=(412,232))
ಬೆಂಗಳೂರು : ಜನಗಣತಿ ನೆಪ ಮುಂದು ಮಾಡಿ ಗ್ರೇಟರ್ ಬೆಂಗಳೂರು ಪ್ರದೇಶ ವ್ಯಾಪ್ತಿಯ ಐದು ನಗರ ಪಾಲಿಕೆ ಚುನಾವಣೆ ನಡೆಸುವ ಕಾಲಾವಧಿಯನ್ನು ಸೆ.30ರವರೆಗೆ ವಿಸ್ತರಿಸುವಂತೆ ರಾಜ್ಯ ಸರ್ಕಾರವು ರಾಜ್ಯ ಚುನಾವಣಾ ಆಯೋಗವನ್ನು ಕೋರಿದೆ.
ರಾಷ್ಟ್ರೀಯ ಜನಗಣತಿ ಪ್ರಕ್ರಿಯೆ ಆರಂಭವಾಗಿದ್ದು, ಅದಕ್ಕೆ ಹೆಚ್ಚಿನ ಸಿಬ್ಬಂದಿ, ಅಧಿಕಾರಿಗಳನ್ನು ನಿಯೋಜಿಸಬೇಕಿರುವ ಕಾರಣದಿಂದಾಗಿ ಚುನಾವಣೆಯನ್ನು ಮುಂದೂಡುವಂತೆ ಕೋರಲಾಗಿದೆ.
ಗ್ರೇಟರ್ ಬೆಂಗಳೂರು ಪ್ರದೇಶ ವ್ಯಾಪ್ತಿಯ ಐದು ನಗರ ಪಾಲಿಕೆ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ. ಆ ಹಿನ್ನೆಲೆಯಲ್ಲಿ ಈಗಾಗಲೇ ವಾರ್ಡ್ ಮೀಸಲಾತಿಯನ್ನು ಸರ್ಕಾರ ಅಂತಿಮಗೊಳಿಸಿದ್ದು, ರಾಜ್ಯ ಚುನಾವಣಾ ಆಯೋಗವು ಅಂತಿಮ ಮತದಾರರ ಪಟ್ಟಿ ಪ್ರಕಟಿಸಬೇಕಿದೆ. ನಿರೀಕ್ಷೆಯಂತೆ ಮೇ ತಿಂಗಳ ಅಂತ್ಯ ಅಥವಾ ಜೂನ್ ಎರಡನೇ ವಾರದೊಳಗೆ ನಗರ ಪಾಲಿಕೆಗಳ ಚುನಾವಣೆ ನಡೆಯಲಿದೆ ಎಂದು ನಿರೀಕ್ಷೆ ಹೊಂದಲಾಗಿತ್ತು. ಆದರೆ, ಇದೀಗ ಚುನಾವಣೆ ನಡೆಸುವ ಅವಧಿಯನ್ನು ಸೆ.30ರವರೆಗೆ ವಿಸ್ತರಿಸುವಂತೆ ಸರ್ಕಾರವೇ ಕೋರಿದೆ.
ಪ್ರಮುಖವಾಗಿ ರಾಷ್ಟ್ರೀಯ ಜನಗಣತಿ ಪ್ರಕ್ರಿಯೆ ಆರಂಭವಾಗಿದ್ದು, ಅದರಲ್ಲಿ ವ್ಯಾಪಕ ಸಿಬ್ಬಂದಿ, ಅಧಿಕಾರಿಗಳು ಭಾಗಿಯಾಗಿದ್ದಾರೆ. ಅದರ ಜತೆಗೆ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಯೂ (ಎಸ್ಐಆರ್) ಆರಂಭವಾಗುವ ನಿರೀಕ್ಷೆಯಿದೆ. ಅಲ್ಲದೆ, ಮೇ ಮತ್ತು ಜೂನ್ ತಿಂಗಳಲ್ಲಿ ಶೈಕ್ಷಣಿಕ ಪರೀಕ್ಷಾ ಕೆಲಸಗಳು ನಡೆಯಲಿವೆ. ಈ ಮೂರು ಪ್ರಕ್ರಿಯೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ನೇಮಿಸಬೇಕಿದೆ.
ಹೀಗಿರುವಾಗ ಈಗ ಚುನಾವಣಾ ಪ್ರಕ್ರಿಯೆ ಆರಂಭಿಸಿದರೆ ಸಿಬ್ಬಂದಿ ಮತ್ತು ಅಧಿಕಾರಿ ಕೊರತೆ ಉಂಟಾಗಲಿದೆ. ಅಲ್ಲದೆ, ಸಿಬ್ಬಂದಿ ಮೇಲೆ ಕಾರ್ಯದೊತ್ತಡವೂ ಹೆಚ್ಚಲಿದೆ. ಈ ಕಾರಣದಿಂದಾಗಿ ಚುನಾವಣಾ ಪ್ರಕ್ರಿಯೆ ಸಮರ್ಪಕವಾಗಿ ಸಿದ್ಧವಾಗಲೂ ಸಾಧ್ಯವಾಗುವುದಿಲ್ಲ. ಹೀಗಾಗಿ ಚುನಾವಣೆ ನಡೆಸುವ ಕಾಲಾವಧಿಯನ್ನು ಸೆ.30ರವರೆಗೆ ವಿಸ್ತರಿಸುವುದನ್ನು ಪರಿಶೀಲಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಾ.ಕೆ.ಜಿ. ಜಗದೀಶ್ ಅವರು ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಎಸ್.ಹೊನ್ನಾಂಬ ಅವರಿಗೆ ಬರೆದಿರುವ ಪತ್ರದಲ್ಲಿ ಕೋರಿದ್ದಾರೆ.
* ರಾಜ್ಯ ಸರ್ಕಾರದಿಂದ ವಾರ್ಡ್ಗಳ ಮೀಸಲಾತಿಯೂ ಅಂತಿಮ
* ಚುನಾವಣಾ ಆಯೋಗದಿಂದ ಮತದಾರರ ಪಟ್ಟಿ ಪ್ರಕಟ ಬಾಕಿ
* ಈ ಮಧ್ಯೆ ಜನಗಣತಿ ಆರಂಭ, ಎಸ್ಐಆರ್ ಶುರು ಸಾಧ್ಯತೆ
* ಅಲ್ಲದೇ, ಮೇ, ಜೂನ್ ತಿಂಗಳಲ್ಲಿ ಶೈಕ್ಷಣಿಕ ಪರೀಕ್ಷಾ ಕೆಲಸ
* ಹಾಗಾಗಿ ಜಿಬಿಎ ಚುನಾವಣೆಗೆ ಸಿಬ್ಬಂದಿ ಕೊರತೆ ಆಗಲಿದ್ದು
* ಸೆ.30ರವರೆಗೆ ಮುಂದೂಡಲು ಆಯೋಗಕ್ಕೆ ಸರ್ಕಾರ ಪತ್ರ