ಬೆಲೆ ಏರಿಕೆ ಬಿಸಿ ತಗ್ಗಿಸಿದ ಗ್ಯಾರಂಟಿ

KannadaprabhaNewsNetwork |  
Published : Apr 07, 2024, 01:50 AM ISTUpdated : Apr 07, 2024, 04:50 AM IST
೬ಕೆಎಲ್‌ಆರ್-೧೦ಮುಳಬಾಗಿಲು ತಾಲೂಕಿನ ಕುರುಡುಮಲೆ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು. | Kannada Prabha

ಸಾರಾಂಶ

ಮೊದಲಿಗೆ ಗ್ಯಾರಂಟಿಗಳ ಜಾರಿ ಸಾಧ್ಯವೇ ಇಲ್ಲ ಎನ್ನುವ ಸುಳ್ಳನ್ನು ಬಿಜೆಪಿ ಹುಟ್ಟಿಸಿತು. ಈಗ ಗ್ಯಾರಂಟಿಗಳು ನಿಂತು ಹೋಗುತ್ತವೆ ಎನ್ನುತ್ತಿದ್ದಾರೆ. ಯಾವುದೇ ಕಾರಣಕ್ಕೂ ನಮ್ಮ ಗ್ಯಾರಂಟಿಗಳು ನಿಲ್ಲುವುದಿಲ್ಲ ಎನ್ನುತ್ತಾರೆ ಸಿಎಂ ಸಿದ್ದರಾಮಯ್ಯ

 ಕೋಲಾರ/ಮುಳಬಾಗಿಲು :  ಈ ಬಾರಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವು ಖಚಿತ ಎಂದು ಸಿ.ಎಂ.ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಮುಳಬಾಗಿಲಿನ ದರ್ಗಾ ಮತ್ತು ಚರ್ಚ್‌ಗೆ ಭೇಟಿ ನೀಡಿದ ಬಳಿಕ ರೋಡ್ ಶೋನಲ್ಲಿ ಮಾತನಾಡಿದರು. ಬೆಲೆ ಏರಿಕೆ ಬಿಸಿ ತಗ್ಗಿಸಿದ ಗ್ಯಾರಂಟಿ

ಮೋದಿ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಗ್ಯಾಸ್, ರಸಗೊಬ್ಬರ, ಅಡುಗೆ ಎಣ್ಣೆ, ಬೇಳೆ-ಕಾಳು, ತರಕಾರಿ ಸೇರಿ ಪ್ರತಿಯೊಂದರ ಬೆಲೆಯನ್ನು ವಿಪರೀತ ಏರಿಸಿದೆ. ಇದರಿಂದ ನಾಡಿನ ಪ್ರತೀ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಈ ಸಂಕಷ್ಟವನ್ನು ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯ ಕಾಂಗ್ರೆಸ್‌ ಸರ್ಕಾರ ಐದು ಗ್ಯಾರಂಟಿ ಭರವಸೆಗಳನ್ನು ಘೋಷಿಸಿದೆವು. ಅಧಿಕಾರಕ್ಕೆ ಬಂದು ೮ ತಿಂಗಳಲ್ಲಿ ಐದನ್ನೂ ಜಾರಿ ಮಾಡಿದ್ದೇವೆ ಎಂದರು.

ಮೊದಲಿಗೆ ಗ್ಯಾರಂಟಿಗಳ ಜಾರಿ ಸಾಧ್ಯವೇ ಇಲ್ಲ ಎನ್ನುವ ಸುಳ್ಳನ್ನು ಬಿಜೆಪಿ ಹುಟ್ಟಿಸಿತು. ಈಗ ಗ್ಯಾರಂಟಿಗಳು ನಿಂತು ಹೋಗುತ್ತವೆ ಎನ್ನುತ್ತಿದ್ದಾರೆ. ಯಾವುದೇ ಕಾರಣಕ್ಕೂ ನಮ್ಮ ಗ್ಯಾರಂಟಿಗಳು ನಿಲ್ಲುವುದಿಲ್ಲ. ಕಾಂಗ್ರೆಸ್ ಗ್ಯಾರಂಟಿಗಳಿಗೆ ಐದು ವರ್ಷ ವಾರಂಟಿ ಇದೆ ಎಂದರು. ಬಿಜೆಪಿ ಸುಳ್ಳಿನ ಕಾರ್ಖಾನೆ

ಸೋಲುವ ಭೀತಿಯಿಂದ ಬಿಜೆಪಿ ಸೃಷ್ಟಿಸುವ ಸುಳ್ಳುಗಳಿಗೆ ಸೊಪ್ಪುಹಾಕಬೇಡಿ. ಬಿಜೆಪಿ ಸುಳ್ಳಿನ ಕಾರ್ಖಾನೆ. ನಾವು ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಮತಕ್ಕೆ ಘನತೆ ತಂದಿದ್ದೇವೆ. ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲ್ಲಿಸಿ ನಿಮ್ಮ ಮತಕ್ಕೆ ಮೌಲ್ಯ ತಂದು ಕೊಡುವ ರೀತಿಯಲ್ಲಿ ಸರ್ಕಾರ ಕೆಲಸ ಮಾಡುತ್ತದೆ ಎಂದರು. ಮೋದಿಯವರು ಪ್ರಧಾನಿಯಾದರೆ ದೇಶ ಬಿಡುತ್ತೇನೆಂದು ಮಿಸ್ಟರ್ ದೇವೇಗೌಡರು ಹೇಳಿದ್ದರು, ಮುಂದೆ ಹುಟ್ಟಿದ್ದರೆ ಮುಸ್ಲಿಂ ಆಗಿ ಹುಟ್ಟುತ್ತೇನೆಂದೂ ಸಹ ದೇವೇಗೌಡರು ಹೇಳಿದ್ದರು, ಈಗ ಮೋದಿಯನ್ನು ಪ್ರೀತಿಸುತ್ತಿದ್ದಾರೆಂದು ಗೇಲಿ ಮಾಡಿದರು. ಜೆಡಿಎಸ್ ಅಭ್ಯರ್ಥಿ ಮಲ್ಲೇಶ, ಬಾಬು ಅವರನ್ನು ನಮ್ಮ ಕಾಂಗ್ರೆಸ್ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಎರಡು ಬಾರಿ ಸೋಲಿಸಿದ್ದಾರೆ, ಈಗ ಅವರನ್ನೇ ಮತ್ತೆ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ, ದುಡಿಯುವ ಎತ್ತಿಗೆ ಹುಲ್ಲು ಹಾಕಬೇಕಲ್ಲವೇ. ಅದಕ್ಕಾಗಿ ಕಾಂಗ್ರೆಸ್‌ಗೆ ಆಶೀರ್ವಾದ ಮಾಡಿ ಎಂದರು.

ನಮ್ಮ ಗ್ಯಾರಂಟಿ ನಮ್ಮ ವಿಜಯ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ರೈತರ ಆದಾಯ ದ್ವಿಗುಣಗೊಳಿಸುವ ಪ್ರಣಾಳಿಕೆಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ, ಆರೋಗ್ಯ, ಉದ್ಯೋಗ, ಮಹಿಳೆಯರಿಗೆ ನ್ಯಾಯ ಮತ್ತು ಶಿಕ್ಷಣ ಮತ್ತು ರೈತರಿಗೆ ನ್ಯಾಯ ಒದಗಿಸುವ ಗ್ಯಾರಂಟಿಗಳನ್ನು ನೀಡಿದೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್‌ಗಾಂಧಿ ಅವರು ಗ್ಯಾರಂಟಿಗಳಿಗೆ ಸಹಿ ಮಾಡಿದ್ದಾರೆ. ನಮ್ಮ ಗ್ಯಾರಂಟಿ ನಮ್ಮ ವಿಜಯ ನಿಶ್ಚಿತವಾಗಿದೆ ಎಂದರು.ರಾಜ್ಯದಲ್ಲಿ ೨೦ಕ್ಕೂ ಹೆಚ್ಚು ಸ್ಥಾನಗಳು ಕಾಂಗ್ರೆಸ್ ಜಯಗಳಿಸಲಿದೆ, ರಾಜ್ಯದ ಗ್ಯಾರಂಟಿಗಳಂತೆ ಕೇಂದ್ರದ ಗ್ಯಾರಂಟಿಗಳಿಗೆ ಶಕ್ತಿ ಕೊಡುವಂತೆ ಕುರುಡುಮಲೆ ಗಣಪತಿಗೆ ಪ್ರಾರ್ಥನೆ ಮಾಡಲಾಗಿದೆ. ಇಂಡಿಯಾ ಒಕ್ಕೂಟದ ಚುನಾವಣೆ ಇದಾಗಿದ್ದು, ರಾಜ್ಯದಲ್ಲಿ ನಾನು ಮತ್ತು ಸಿದ್ದರಾಮಯ್ಯ ಹೇಗೆ ಗ್ಯಾರಂಟಿಗಳಿಗೆ ಸಹಿ ಮಾಡಿದ್ದೇವೋ ಅದೇ ರೀತಿ ಇಂಡಿಯಾ ಒಕ್ಕೂಟವು ಗ್ಯಾರಂಟಿಗಳಿಗೆ ಸಹಿ ಮಾಡಿದೆ ಎಂದರು.

ಕಮಲ ಮುದುಡುತ್ತದೆ

ಸೂರ್ಯ ಹೇಗೆ ಹುಟ್ಟುತ್ತದೆಯೋ ಹಾಗೆ ಕೈ ಹುಟ್ಟುತ್ತದೆ, ಸೂರ್ಯ ಹೇಗೆ ಅಂಸ್ತಗತವಾಗುತ್ತದೆಯೋ ಹಾಗೆಯೇ ಕಮಲ ಮುದೂಡುತ್ತದೆ, ತೆನೆ ಬೀಳುತ್ತದೆ. ದಾನಧರ್ಮ ಮಾಡುವ ಕೈ ಅಧಿಕಾರಕ್ಕೆ ಬಂದಿದ್ದಕ್ಕೆ ರಾಜ್ಯದಲ್ಲಿ ಗ್ಯಾರಂಟಿಗಳನ್ನು ಕೊಟ್ಟಿದ್ದೇವೆ, ಕೇಂದ್ರದಲ್ಲಿ ಇಂಡಿಯಾ ಸರ್ಕಾರ ಅಧಿಕಾರಕ್ಕೆ ಬಂದರೆ ಇನ್ನೂ ಹೆಚ್ಚಿನ ಗ್ಯಾರಂಟಿಗಳನ್ನು ಕೊಡುತ್ತೇವೆ, ಕೋಲಾರದ ಗೌತಮ್‌ರನ್ನು ಗೆಲ್ಲಿಸಬೇಕೆಂದು ಕೋರಿದರು.

ಸಚಿವ ಮುನಿಯಪ್ಪ ಗೈರು

ಕಾರ್ಯಕ್ರಮದಲ್ಲಿ ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಕೆಜಿಎಫ್ ಶಾಸಕಿ ರೂಪಕಲಾ ಗೈರುಹಾಜರಿ ಎದ್ದು ಕಾಣುತ್ತಿತ್ತು, ಉಳಿದಂತೆ ಲೋಕಸಭಾ ಅಭ್ಯರ್ಥಿ ಕೆ.ವಿ.ಗೌತಮ್‌, ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್, ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮಾಜಿ ಸ್ವೀಕರ್ ರಮೇಶ್‌ಕುಮಾರ್, ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ, ಕೊತ್ತೂರು ಮಂಜುನಾಥ್, ಕೆ.ವೈ.ನಂಜೇಗೌಡ, ಎಂಎಲ್‌ಸಿ ಎಂ.ಎಲ್.ಅನಿಲ್‌ಕುಮಾರ್, ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ಮಾಜಿ ಶಾಸಕ ವೈ.ಸಂಪಂಗಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ, ದಳಸನೂರು ಗೋಪಾಲಕೃಷ್ಣ, ಮಾಜಿ ಶಾಸಕ ಎ.ನಾಗರಾಜು ಸೇರಿದಂತೆ ಜಿಲ್ಲೆಯ ಎಲ್ಲ ಕಾಂಗ್ರೆಸ್ ಮುಖಂಡರು ಹಾಜರಿದ್ದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಚಾಟ್‌ ಜಿಪಿಟಿಯಲ್ಲಿ ಐದು ಪ್ರಶ್ನೆ ಕೇಳಿದರೆ 500 ಲೀ. ನೀರು ಬಳಕೆ
ಕಾರಂತ ಬಡಾವಣೆ ರೈತರಿಗೆ ನಿವೇಶನ ನೀಡಲು ಕ್ರಮ: ಡಿ.ಕೆ.ಶಿವಕುಮಾರ್‌ ಭರವಸೆ