- ನನಗೆ ಎದುರಾಗಿ ಚಲುವರಾಯಸ್ವಾಮಿ ಕಣಕ್ಕಿಳಿದರೆ ಒಳ್ಳೆಯದು
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಬೇಕೆನ್ನುವುದು ನಮ್ಮೆಲ್ಲರ ಅಭಿಲಾಷೆ. ಒಮ್ಮೆ ಅವರು ಸ್ಪರ್ಧಿಸದಿದ್ದರೆ ಅಭ್ಯರ್ಥಿಯಾಗುವುದಕ್ಕೆ ನಾನು ರೆಡಿಯಾಗಿದ್ದೇನೆ ಎಂದು ಮಾಜಿ ಶಾಸಕ ಕೆ. ಸುರೇಶ್ಗೌಡ ಹೇಳಿದರು.
ಚುನಾವಣೆಗೆ ಇನ್ನೂ ಆರು ತಿಂಗಳಿರುವಾಗಲೇ ಜೆಡಿಎಸ್ ಪಕ್ಷದೊಳಗೆ ರಾಜಕೀಯ ಗರಿಗೆದರಿದೆ. ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಲೋಕಸಭಾ ಅಖಾಡ ಪ್ರವೇಶಿಸಲು ಚಿಂತಿಸುತ್ತಿರುವ ಹೊತ್ತಿನಲ್ಲೇ ನಾಗಮಂಗಲದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರಿಗೆ ಕೆ.ಸುರೇಶ್ಗೌಡರು, ತಾವೂ ಒಬ್ಬ ಟಿಕೆಟ್ ಆಕಾಂಕ್ಷಿ ಎಂದು ಹೇಳುವುದರೊಂದಿಗೆ ರಾಜಕೀಯ ದಾಳ ಉರುಳಿಸಿದ್ದಾರೆ.ನಿಖಿಲ್ ಕುಮಾರಸ್ವಾಮಿಯೇ ಚುನಾವಣೆಗೆ ನಿಲ್ಲಬೇಕು ಎನ್ನುವುದು ಜಿಲ್ಲೆಯ ಎಲ್ಲ ನಾಯಕರ ಒಕ್ಕೊರಲ ಅಭಿಪ್ರಾಯವಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಅವರು ಕಡಿಮೆ ಮತಗಳ ಅಂತರದಿಂದ ಸೋತಿದ್ದಾರೆ. ೨೦೨೩ರ ರಾಮನಗರ ವಿಧಾನಸಭೆ ಚುನಾವಣೆಯಲ್ಲಿ ಷಡ್ಯಂತ್ರಗಳಿಂದ ಸೋಲನುಭವಿಸಿದ್ದಾರೆ. ಆದರೂ ಅವರನ್ನೇ ಅಭ್ಯರ್ಥಿಯನ್ನಾಗಿಸಿ ಗೆಲ್ಲಿಸಬೇಕು ಎಂಬುದು ನಮ್ಮೆಲ್ಲರ ಆಸೆಯಾಗಿದೆ. ಈ ವಿಷಯವನ್ನು ವರಿಷ್ಠರ ಗಮನಕ್ಕೂ ತರಲಾಗಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸಸ್ವಾಮಿ ಅವರು ಮರು ಪರಿಶೀಲನೆ ನಡೆಸಿ ಅಂತಿಮ ನಿರ್ಧಾರ ಮಾಡಬೇಕು ಎಂದರು.
ಲೋಕಸಭೆ ಚುನಾವಣೆಯಲ್ಲಿ ಜನರು ನನ್ನನ್ನು ಮತ್ತೆ ತಿರಸ್ಕಾರ ಮಾಡಿದರೆ ನಾನೂ ರಾಜಕೀಯವಾಗಿ ಒಂದು ನಿರ್ಧಾರ ತಗೆದುಕೊಳ್ಳಬಹುದು ಎಂದು ಹೇಳುವುದರೊಂದಿಗೆ ಚುನಾವಣೆಗೆ ಸ್ಪರ್ಧಿಸುವಂತೆ ಸಚಿವ ಚಲುವರಾಯಸ್ವಾಮಿ ಅವರಿಗೆ ಬಹಿರಂಗ ಆಹ್ವಾನ ನೀಡಿದರು.