ರಾಜ್ಯಾಧ್ಯಕ್ಷನಾಗಿ ನಾನೇ ಮುಂದುವರಿವೆ : ಬಿವೈವಿ

KannadaprabhaNewsNetwork |  
Published : Nov 23, 2025, 02:30 AM ISTUpdated : Nov 23, 2025, 06:05 AM IST
BY Vijayendra

ಸಾರಾಂಶ

ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಸದ್ಯಕ್ಕೆ ಇಲ್ಲ ಎಂದು ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತ ಉಹಾಪೋಹಗಳಿಗೆ ತೆರೆ ಎಳೆದಿದ್ದಾರೆ. 

  ನವದೆಹಲಿ :  ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಸದ್ಯಕ್ಕೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತ ಉಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಬಿಹಾರ ಚುನಾವಣೆ ಫಲಿತಾಂಶದ ಬಳಿಕ ರಾಜ್ಯಾಧ್ಯಕ್ಷರ ಆಯ್ಕೆ ಬಾಕಿ ಉಳಿದ ರಾಜ್ಯಗಳ ಬಗ್ಗೆ ಬಿಜೆಪಿ ಗಮನ ಹರಿಸಲಿದೆ ಎಂಬ ವರದಿಗಳ ಬೆನ್ನಲ್ಲೇ ಅವರು ಈ ಸ್ಪಷ್ಟನೆ ನೀಡಿದ್ದಾರೆ.

ಬಿ.ಎಲ್. ಸಂತೋಷ್ ಅವರನ್ನು ಭೇಟಿಯಾಗಿ ಮಾತುಕತೆ

ದೆಹಲಿಯಲ್ಲಿ ಶನಿವಾರ ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ರಾಜ್ಯಾಧ್ಯಕ್ಷರ ಬದಲಾವಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ‘ಬಿಜೆಪಿ ರಾಜ್ಯಾಧ್ಯಕ್ಷನಾಗಿ ನಾನೇ ಮುಂದುವರಿಯುತ್ತೇನೆ. ಪಕ್ಷ ಸಂಘಟನೆಯ ಉದ್ದೇಶದಿಂದ ಎಲ್ಲರನ್ನೂ ಭೇಟಿಯಾಗುತ್ತಿದ್ದೇನೆ. ಏನೇ ಸಮಸ್ಯೆ, ಕಷ್ಟ ಬಂದರೂ ಸಹಿಸಿಕೊಂಡು ಪಕ್ಷ ಸಂಘಟಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತೇನೆ. ಕಾರ್ಯಕರ್ತರ ಮಧ್ಯೆ ದುಡಿಯುತ್ತಿದ್ದೇನೆ. ಸಣ್ಣ, ಪುಟ್ಟ ಸಮಸ್ಯೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ನನ್ನ ಕೆಲಸವನ್ನು ನಾನು ಮಾಡಿಕೊಂಡು ಹೋಗುತ್ತೇನೆ’ ಎಂದರು.

ಸಂಘರ್ಷದ ಲಾಭ ಬಿಜೆಪಿ ಪಡೆಯುತ್ತಿದೆ ಎಂಬ ಆರೋಪ ತಿರಸ್ಕರಿಸಿದ ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಗಾದಿಗೆ ನಡೆಯುತ್ತಿರುವ ಸಂಘರ್ಷದ ಲಾಭವನ್ನು ಬಿಜೆಪಿ ಪಡೆಯುತ್ತಿದೆ ಎಂಬ ಆರೋಪವನ್ನು ಸಾರಾಸಗಟಾಗಿ ತಿರಸ್ಕರಿಸಿದ ವಿಜಯೇಂದ್ರ, ಇದೊಂದು ಆಧಾರರಹಿತ ಹೇಳಿಕೆ. ಕಾಂಗ್ರೆಸ್‌ನಲ್ಲಿನ ಆಂತರಿಕ ಸಂಘರ್ಷದ ಬಗ್ಗೆ ನಮಗೆ ಆಸಕ್ತಿಯಿಲ್ಲ. ನಮಗೆ ಬೇಕಿರುವುದು ರಾಜ್ಯದ ಜನರ ಅಭಿವೃದ್ಧಿ ಮಾತ್ರ. ಜನರ ಅಣತಿಯಂತೆ ಪ್ರತಿಪಕ್ಷ ಸ್ಥಾನದಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ‘ನವೆಂಬರ್ ಕ್ರಾಂತಿ’ ಹೇಳಿಕೆ ನೀಡಿರುವುದು ಕಾಂಗ್ರೆಸ್‌ ಶಾಸಕರೇ ಹೊರತು, ಬಿಜೆಪಿಯಲ್ಲ ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ ಸಂಪರ್ಕದಲ್ಲಿದ್ದಾರೆ ಎಂಬ ವದಂತಿಯನ್ನು ನಿರಾಕರಿಸಿದ ವಿಜಯೇಂದ್ರ, ಇದು ಸತ್ಯಕ್ಕೆ ದೂರವಾದ ಮಾತು ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ, ಯಡಿಯೂರಪ್ಪ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್‌ ನಡೆಸಿದ ವಾಗ್ಧಾಳಿ ಕುರಿತು ಪ್ರತಿಕ್ರಿಯಿಸಿ, ಯತ್ನಾಳ್‌ ಹೇಳಿಕೆಯನ್ನು ಗಮನಿಸಿದ್ದೇನೆ. ಯತ್ನಾಳ್‌ ಅವರು ಯಡಿಯೂರಪ್ಪ ಬಗ್ಗೆ ಏಕವಚನದಲ್ಲಿ ಮಾತನಾಡುವುದನ್ನು ಬಿಡಬೇಕು. ಬಿಎಸ್‌ವೈ ವಿರುದ್ಧ ಏಕವಚನದಲ್ಲಿ ಮಾತನಾಡಲು ಇವರು ಯಾರು?. ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಇವರಿಗೆ ಏನು ಯೋಗತ್ಯೆ ಇದೆ?. ನಮ್ಮ ವಿರುದ್ಧ ಭ್ರಷ್ಟಾಚಾರ ಆರೋಪ, ಬಿಎಸ್‌ವೈ ಬಗ್ಗೆ ಮಾತನಾಡುವ ಮುನ್ನ ಎಚ್ಚರಿಕೆ ಇರಲಿ ಎಂದರು.

ಅವರು ಪ್ರತ್ಯೇಕ ಪಕ್ಷ ಕಟ್ಟುವುದಾದರೆ ಕಟ್ಟಲಿ, ಪಕ್ಷದ ಚಿಹ್ನೆಯನ್ನು ರೆಡಿ ಮಾಡಿಕೊಂಡಿದ್ದಾರಲ್ಲ. 500 ಜನರನ್ನು ಸೇರಿಸಿ ಗಣಪತಿ ಮೆರವಣಿಗೆ ಮಾಡಿದರೆ ಅಲ್ಲಿಗೆ ಜನ ಬರ್ತಾರೆ ಎಂದು ವ್ಯಂಗ್ಯವಾಡಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಸರ್ಕಾರದ ಒಳ್ಳೆ ಯೋಜನೆ ಪರವಾಗಿ ಫಲಾನುಭವಿಗಳು ನಿಲ್ಲಬೇಕು: ಸಿಎಂ ಸಿದ್ದರಾಮಯ್ಯ
ಮುಂಬೈ ಮೇಯರ್‌ ಹುದ್ದೆ ಅವಧಿ ಹಂಚಿಕೆಗೆ ಸೇನೆ ಸದಸ್ಯರ ಪಟ್ಟು