;Resize=(412,232))
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಜನಪರ ಆಡಳಿತ ನಮ್ಮೆಲ್ಲರಿಗೂ ಮಾದರಿ. ಮುಂದೆ ನಾನು ಅವರ ಮಾರ್ಗದರ್ಶನದಲ್ಲೇ ನಡೆಯುತ್ತೇನೆ ಎಂದು ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರಿಗೆ ಆಯೋಜಿಸಿದ್ದ ಉಪಹಾರ ಕೂಟದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಆಡಳಿತವನ್ನು ಕೊಂಡಾಡಿದರಲ್ಲದೆ, ಅವರ ಮಾರ್ಗದರ್ಶನದಲ್ಲೇ ನಡೆಯುವುದಾಗಿ ಘೋಷಿಸಿದರು. ಅಲ್ಲದೆ, ಸಿದ್ದರಾಮಯ್ಯ ಅವರಿಗೆ ನೀಡಿದಂತೆ ತಮಗೂ ಸಹಕಾರ ನೀಡುವಂತೆ ಸಚಿವರಲ್ಲಿ ಮನವಿ ಮಾಡಿದರು ಎಂದು ಖಚಿತ ಮೂಲಗಳು ತಿಳಿಸಿವೆ.
‘ಸಿದ್ದರಾಮಯ್ಯ ಅವರು ಜೆಡಿಎಸ್ನಿಂದ ಹೊರಬಂದಾಗ ಕಾಂಗ್ರೆಸ್ಗೆ ಬರುವಂತೆ ಮೊದಲು ಆಹ್ವಾನಿಸಿದವನು. ಅವರು ನಮ್ಮ ಪಕ್ಷಕ್ಕೆ ಬಂದಾಗಿನಿಂದಲೂ ಅವರು ನಮ್ಮ ನಾಯಕರು. ನಿರಂತರವಾಗಿ ನಮಗೆ ಮಾರ್ಗದರ್ಶನ ನೀಡುತ್ತಾ ಬಂದಿದ್ದಾರೆ. ಮುಂದೆಯೂ ಅವರ ಆಶೀರ್ವಾದ ನನ್ನ ಮೇಲಿರಲಿ. ಅವರ ವಿಚಾರಧಾರೆಗಳನ್ನು ಗಮನದಲ್ಲಿಟ್ಟುಕೊಂಡು ನಾನು ಕೆಲಸ ಮಾಡುತ್ತೇನೆ. ಎರಡು ಬಾರಿ ಮುಖ್ಯಮಂತ್ರಿಯಾಗಿ ಅವರು ನೀಡಿರುವ ಜನಪರ ಆಡಳಿತ ನನಗೆ ಮಾದರಿ. ಅದನ್ನೇ ನಾನೂ ಅನುಸರಿಸಿಕೊಂಡು ಅವರ ಮಾರ್ಗದರ್ಶನದಲ್ಲಿ ನಡೆಯುತ್ತೇನೆ’ ಎಂದು ಹೇಳಿದ್ದಾಗಿ ತಿಳಿದು ಬಂದಿದೆ.
- ನಮ್ಮ ಪಕ್ಷಕ್ಕೆ ಬಂದಾಗಿನಿಂದಲೂ ಅವರು ನಮ್ಮ ನಾಯಕರು
- ಅವರಿಂದ ನಿರಂತರ ಮಾರ್ಗದರ್ಶನ, ಸದಾ ನಮಗೆ ಉತ್ತೇಜನ
- ಮುಂದೆಯೂ ಅವರ ಆಶೀರ್ವಾದ ನನ್ನ ಮೇಲಿರಲಿ ಎಂದು ಕೋರುವೆ