ಕನ್ನಡಪ್ರಭ ವಾರ್ತೆ ಬೆಂಗಳೂರು
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಗುರುವಾರ ತಡರಾತ್ರಿ ಊಟದ ನೆಪದಲ್ಲಿ ಸಭೆ ಸೇರಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚರ್ಚೆ ನಡೆಸಿದ್ದು, ಈ ವೇಳೆ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸಬೇಕು ಎಂದು ಹೈಕಮಾಂಡ್ ಮೇಲೆ ಮತ್ತೆ ಒತ್ತಡ ಸೃಷ್ಟಿಸುವ ಬಗ್ಗೆ ವಿಸ್ತೃತ ಚರ್ಚೆ ನಡೆದಿದೆ.
ಮೂಲಗಳ ಪ್ರಕಾರ ಈಗ ಮತ್ತೆ ಡಿಸಿಎಂ ಪದವಿ ಸೃಷ್ಟಿ ಚರ್ಚೆ ಹುಟ್ಟುಹಾಕುವುದರ ಹಿಂದೆ ಎರಡು ಉದ್ದೇಶಗಳಿವೆ. 1- ಲೋಕಸಭಾ ಚುನಾವಣೆಯಲ್ಲಿ ಸಚಿವರನ್ನು ಕಣಕ್ಕೆ ಇಳಿಸಬೇಕು ಎಂದು ರಾಜ್ಯ ನಾಯಕತ್ವ ಹೈಕಮಾಂಡ್ ಮೂಲಕ ಹೇಳಿಸುವ ಗುಮಾನಿ ಇರುವ ಕಾರಣ ನಾಯಕತ್ವಕ್ಕೆ ಈ ಮೂಲಕ ತಿರುಗೇಟು ನೀಡುವುದು.2- ಹಾಲಿ ಇರುವ ಏಕೈಕ ಉಪ ಮುಖ್ಯಮಂತ್ರಿ ಹುದ್ದೆಯ ಮಹತ್ವವನ್ನು ಕಡಿಮೆ ಮಾಡುವ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಾಗಾಲೋಟಕ್ಕೆ ಬ್ರೇಕ್ ಹಾಕುವ ಪ್ರಯತ್ನ ನಡೆಸುವುದು.
ವಿಧಾನಸಭೆ ಚುನಾವಣೆಯಂತೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸಮರ್ಥವಾಗಿ ಎದುರಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲು ಅಲ್ಪಸಂಖ್ಯಾತ, ಲಿಂಗಾಯತ ಮತ್ತು ನಾಯಕ ಸಮುದಾಯದಿಂದ ಮೂರು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಬೇಕು.
ರಾಮಮಂದಿರ ಉದ್ಘಾಟನೆ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ 2024ರ ಸಾರ್ವತ್ರಿಕ ಚುನಾವಣೆಯನ್ನು ಎದುರಿಸುತ್ತಿದೆ. ಇದಕ್ಕೆ ಪ್ರತಿಯಾಗಿ ಸಚಿವರನ್ನು ಕಣಕ್ಕೆ ಇಳಿಸುವ ತಂತ್ರಗಾರಿಕೆ ಸೂಕ್ತ ಎಂದು ಪಕ್ಷದ ಒಂದು ವರ್ಗ ಹೈಕಮಾಂಡ್ಗೆ ಪರೋಕ್ಷವಾಗಿ ತಿಳಿಸಿದೆ ಎಂಬ ಗುಮಾನಿ ಕಾಂಗ್ರೆಸ್ ವಲಯದಲ್ಲಿ ಮೂಡಿದೆ.
ಆದರೆ, ಸಚಿವರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಆಸಕ್ತಿಯಿಲ್ಲ. ಹೀಗಾಗಿ ತಮ್ಮನ್ನು ಲೋಕಸಭೆ ಚುನಾವಣೆ ಕಣಕ್ಕೆ ಇಳಿಸುವ ಪ್ರಯತ್ನಕ್ಕೆ ಬದಲಾಗಿ ಡಿಸಿಎಂ ಹುದ್ದೆ ಸೃಷ್ಟಿಯನ್ನು ಪ್ರತಿತಂತ್ರವಾಗಿ ಮಂಡಿಸುವ ಪ್ರಯತ್ನ ನಡೆದಿದೆ ಎನ್ನಲಾಗಿದೆ.