ಲೋಕ ಕ್ಷೇತ್ರ ಮರು ವಿಂಗಡಣೆಗೆ ಮಲ್ಲಿಕಾರ್ಜುನ ಖರ್ಗೆ ವಿರೋಧ : ನಮಗೆ ಹಲವು ಕ್ಷೇತ್ರ ಖೋತಾ

Published : Mar 17, 2025, 10:40 AM IST
Congress President Mallikarjun Kharge (File Photo/ANI)

ಸಾರಾಂಶ

ಕೇಂದ್ರ ಸರ್ಕಾರ ಜನಸಂಖ್ಯೆ ಆಧಾರದಲ್ಲಿ ಲೋಕಸಭಾ ಕ್ಷೇತ್ರಗಳನ್ನು ಮರು ವಿಂಗಡಣೆ ಮಾಡಲು ಮುಂದಾಗಿದ್ದು, ಇದರ ವಿರುದ್ಧ ನಾವೆಲ್ಲ ಒಗ್ಗಟ್ಟಾಗಿ ಹೋರಾಡಬೇಕು ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು.

ಗದಗ : ಕೇಂದ್ರ ಸರ್ಕಾರ ಜನಸಂಖ್ಯೆ ಆಧಾರದಲ್ಲಿ ಲೋಕಸಭಾ ಕ್ಷೇತ್ರಗಳನ್ನು ಮರು ವಿಂಗಡಣೆ ಮಾಡಲು ಮುಂದಾಗಿದ್ದು, ಇದರ ವಿರುದ್ಧ ನಾವೆಲ್ಲ ಒಗ್ಗಟ್ಟಾಗಿ ಹೋರಾಡಬೇಕು ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು.

ನಗರದಲ್ಲಿ ಭಾನುವಾರ ಆಯೋಜಿಸಿದ್ದ ಕೆ.ಎಚ್.ಪಾಟೀಲ ಜನ್ಮ ಶತಮಾನೋತ್ಸವ ಉದ್ಘಾಟಿಸಿ ಮಾತನಾಡಿ, ಜನಸಂಖ್ಯೆಯ ಆಧಾರದ ಮೇಲೆ ಕೇಂದ್ರ ಸರ್ಕಾರ ಕ್ಷೇತ್ರಗಳನ್ನು ಮರು ವಿಂಗಡಣೆ ಮಾಡುವ ಕಾರ್ಯಕ್ಕೆ ಕೈ ಹಾಕಿದ್ದು, ಇದರಿಂದಾಗಿ ನಾವೆಲ್ಲ ಹಲವಾರು ಕ್ಷೇತ್ರಗಳನ್ನು ಕಳೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಲಿದೆ. ಈಗಿನಿಂದ ನಾವೆಲ್ಲ ಪಕ್ಷ, ಪಂಗಡ, ಜಾತಿ ಭೇದ ಮರೆತು ಒಗ್ಗಟ್ಟಾಗಿ ಹೋರಾಟ ನಡೆಸಬೇಕಿದೆ. ಯಾರೂ ಈ ವಿಷಯದಲ್ಲಿ ಒಡಕಿನ ಮಾತನ್ನು ಆಡದೇ ಒಗ್ಗಟ್ಟಾಗಿ ಇದ್ದಾಗ ಮಾತ್ರ ನಮ್ಮ ನಾಡು, ನಮ್ಮ ಹಕ್ಕುಗಳ ರಕ್ಷಣೆಯಾಗಲು ಸಾಧ್ಯ ಎಂದರು.

ದೇಶದ ಶಿಕ್ಷಣ ವ್ಯವಸ್ಥೆ ಆತಂಕದಲ್ಲಿದೆ. ಕೇಂದ್ರ ಸರ್ಕಾರ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿಲ್ಲ. ಅದರಲ್ಲಿಯೂ ಸರ್ಕಾರಿ ಶಾಲೆಗಳ ಬಗ್ಗೆ ತೀರಾ ನಿರ್ಲಕ್ಷ್ಯವಹಿಸುತ್ತಿದ್ದು, ದೇಶದ ಬಡ ಮಕ್ಕಳ ಭವಿಷ್ಯ ಮುಂದಿನ ದಿನಗಳಲ್ಲಿ ಮತ್ತಷ್ಟು ಮಂಕಾಗಲಿದೆ. ಪ್ರಾಥಮಿಕ ಶಿಕ್ಷಣಕ್ಕಾಗಿ ಕೇಂದ್ರ ಸರ್ಕಾರ ಸೂಕ್ತ ಅನುದಾನ ನೀಡುತ್ತಿಲ್ಲ. ನವೋದಯ, ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಶೇ.50 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಈ ಹಿಂದೆ ಜವಾಹರಲಾಲ್ ನೆಹರು, ಡಾ.ಬಿ.ಆರ್.ಅಂಬೇಡ್ಕರ್, ಮಹಾತ್ಮ ಗಾಂಧೀಜಿ ಶಿಕ್ಷಣಕ್ಕೆ ಒತ್ತು ನೀಡುತ್ತಿದ್ದರು. ಆದರೆ, ಇಂದು ಆ ವ್ಯವಸ್ಥೆ ಕುಸಿಯುತ್ತಿರುವುದು ದುರ್ದೈವದ ಸಂಗತಿ ಎಂದು ಕಳವಳ ವ್ಯಕ್ತಪಡಿಸಿದರು.

90000 ಶಾಲೆ ಬಂದ್, ವಿವಿಗಳಲ್ಲಿ

5400 ಹುದ್ದೆ ಖಾಲಿ: ಖರ್ಗೆ ಕಿಡಿ

ದೇಶಾದ್ಯಂತ ಕೇಂದ್ರ ಸರ್ಕಾರದ ಅಧೀನದಲ್ಲಿರುವ 90 ಸಾವಿರ ಸರ್ಕಾರಿ ಶಾಲೆಗಳು ಮುಚ್ಚಿವೆ. ಅದರಲ್ಲಿ 50 ಸಾವಿರಕ್ಕೂ ಅಧಿಕ ಶಾಲೆಗಳು ಉತ್ತರ ಪ್ರದೇಶ, ಬಿಹಾರದಲ್ಲಿಯೇ ಬಂದ್ ಆಗಿವೆ. ಇನ್ನುಳಿದ ರಾಜ್ಯಗಳಲ್ಲಿ 40 ಸಾವಿರ ಶಾಲೆಗಳು ಸ್ಥಗಿತಗೊಂಡಿವೆ. ದೇಶದ ವಿವಿಧ ವಿವಿಗಳಲ್ಲಿ 5400 ಹುದ್ದೆಗಳು ಖಾಲಿ ಇದ್ದು, ಭರ್ತಿ ಮಾಡಲು ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳುತ್ತಿಲ್ಲ. ಗುಣಮಟ್ಟದ ಶಿಕ್ಷಣ ಸಿಗದೆ ಕಳೆದ ವರ್ಷ 13 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವಿವಿಗಳಿಂದ ಹೊರ ಬಂದಿದ್ದಾರೆ. ಇದು ಕೂಡಾ ದೇಶದ ಬೆಳವಣಿಗೆ ದೃಷ್ಟಿಯಿಂದ ಅತ್ಯಂತ ಅಪಾಯಕಾರಿ ಎಂದು ಖರ್ಗೆ ಕಿಡಿ ಕಾಡಿದರು.

ಕೆಎಚ್‌ಪಿ ಹೆಸರಿನಲ್ಲಿ

ಶಿಷ್ಯವೇತನ ನೀಡಿ

ಬಡವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಕೆ.ಎಚ್‌.ಪಾಟೀಲ ಅವರ ಹೆಸರಿನಲ್ಲಿ ಶಿಷ್ಯವೇತನ ಆರಂಭಿಸಿ ಬಡವರ ಮಕ್ಕಳ ಓದಿಗೆ ನೆರವಾಗುವ ಮೂಲಕ ಆ ಮಹಾನ್‌ ನಾಯಕನಿಗೆ ಗೌರವ ನೀಡಿ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಸಚಿವ ಎಚ್‌.ಕೆ. ಪಾಟೀಲರಿಗೆ ಸಲಹೆ ನೀಡಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಸರ್ವಜನಾಂಗ ಶಾಂತಿಯ ತೋಟ ಆಗಲು ಈ ಮಸೂದೆ ಬೇಕೇಬೇಕು
ಒಬ್ಬ ವ್ಯಕ್ತಿಯ ಮಾತನ್ನು ದ್ವೇಷಭಾಷಣ ಅಂತ ಹೇಗೆ ಸಾಬೀತು ಮಾಡುತ್ತೀರಿ?