ಕನ್ನಡಪ್ರಭ ವಾರ್ತೆ ಬೆಂಗಳೂರು
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರ ನೇತೃತ್ವದಲ್ಲಿ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ಭಾನುವಾರ ಸಂಜೆ ದೆಹಲಿಯಲ್ಲಿ ನಡೆಯಲಿದ್ದು, ರಾಜ್ಯದ ಸುಮಾರು 18 ರಿಂದ 20 ಕ್ಷೇತ್ರಗಳು ಸೇರಿದಂತೆ ಅಭ್ಯರ್ಥಿಗಳ ಎರಡನೇ ಪಟ್ಟಿ ಅಂತಿಮಗೊಳ್ಳುವ ಸಾಧ್ಯತೆ ಇದೆ.
ಅಭ್ಯರ್ಥಿಗಳ ಪಟ್ಟಿ ಆಯ್ಕೆ ಪ್ರಕ್ರಿಯೆ ಭಾನುವಾರವೇ ನಡೆದರೂ ಅದೇ ದಿನ ಪಟ್ಟಿ ಬಿಡುಗಡೆಗೊಳ್ಳುವ ಬಗ್ಗೆ ಅನುಮಾನವಿದೆ.
ಪಟ್ಟಿ ಪ್ರಕಟಿಸುವ ಮೊದಲು ರಾಜ್ಯದಲ್ಲಿ ಜೆಡಿಎಸ್ ಜೊತೆಗಿನ ಸ್ಥಾನ ಹೊಂದಾಣಿಕೆ ಬಗ್ಗೆ ಅಧಿಕೃತವಾಗಿ ಉಭಯ ಪಕ್ಷಗಳ ನಾಯಕರ ನಡುವೆ ಚರ್ಚೆ ನಡೆಯಬಹುದು.
ಈ ಹಿನ್ನೆಲೆಯಲ್ಲಿ ಭಾನುವಾರದ ಸಭೆಯ ಬಳಿಕ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ.ಕುಮಾರಸ್ವಾಮಿ ಅವರನ್ನು ದೆಹಲಿಗೆ ಕರೆಸಿಕೊಂಡು ಅಂತಿಮಗೊಳಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಇದೇ ವೇಳೆ ಬಿಜೆಪಿಯ ಸಂಸದೀಯ ಮಂಡಳಿ ಸದಸ್ಯರಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರದೊಳಗಾಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದಿದ್ದಾರೆ.
ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾನುವಾರ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳ್ಳಲಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಸ್ಪಷ್ಟ ಚಿತ್ರಣ ಹೊರಬೀಳಲಿದೆ ಎಂದು ಹೇಳಿದ್ದಾರೆ.
ಕಳೆದ ವಾರ ಬಿಡುಗಡೆಗೊಂಡ ಮೊದಲ ಪಟ್ಟಿಯಲ್ಲಿ 195 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಬಿಜೆಪಿ ಅಂತಿಮಗೊಳಿಸಿತ್ತು. ಆದರೆ ಆ ಮೊದಲ ಪಟ್ಟಿಯಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರವೂ ಇರಲಿಲ್ಲ.
ಇದೀಗ ಎರಡನೇ ಪಟ್ಟಿಯಲ್ಲಿ ರಾಜ್ಯದ 18ರಿಂದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಘೋಷಿಸುವ ನಿರೀಕ್ಷೆಯಿದೆ.
ಈ ಹಿನ್ನೆಲೆಯಲ್ಲಿ ವರಿಷ್ಠರೊಂದಿಗೆ ಅಂತಿಮ ಹಂತದ ಮಾತುಕತೆ ನಡೆಸಿ ಗೊಂದಲಗಳನ್ನು ಬಗೆಹರಿಸುವ ಸಂಬಂಧ ಯಡಿಯೂರಪ್ಪ, ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮತ್ತಿತರರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಈಗಾಗಲೇ ಕಳೆದ ಬುಧವಾರ ಮತ್ತು ಗುರುವಾರ ಎರಡೂ ದಿನಗಳ ಕಾಲ ರಾಜ್ಯದ ನಾಯಕರು ಕೇಂದ್ರದ ನಾಯಕರೊಂದಿಗೆ ಸುದೀರ್ಘ ಸಭೆ ನಡೆಸಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೆಸಿದ್ದರು.
ಈ ವೇಳೆ ಹಲವು ಕ್ಷೇತ್ರಗಳಿಗೆ ಹೊಸಬರನ್ನು ಕಣಕ್ಕಿಳಿಸುವ ಬಗ್ಗೆ ಕೇಂದ್ರದ ನಾಯಕರು ಪ್ರಸ್ತಾಪ ಮಾಡಿದ್ದರಿಂದ ಒಮ್ಮತಾಭಿಪ್ರಾಯ ಮೂಡಿಲ್ಲ ಎನ್ನಲಾಗುತ್ತಿದೆ.
ಇದೀಗ ಭಾನುವಾರ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯುವ ಮೊದಲು ರಾಜ್ಯ ನಾಯಕರು ರಾಷ್ಟ್ರೀಯ ನಾಯಕರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ.