;Resize=(412,232))
ನವದೆಹಲಿ : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಸಿಬಿಎಸ್ಇ 12ನೇ ತರಗತಿಯ ಮೌಲ್ಯಮಾಪನ ಅವ್ಯವಸ್ಥೆ ಸೇರಿದಂತೆ ಪರೀಕ್ಷಾ ಅಕ್ರಮ, ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ವಿರುದ್ಧ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರುವ ಉದ್ದೇಶದಿಂದ ಜೂ.17ರಿಂದ ರಾಷ್ಟ್ರವ್ಯಾಪಿ ಹೋರಾಟ ಆರಂಭಿಸಲು ಕಾಂಗ್ರೆಸ್ ನಿರ್ಧರಿಸಿದೆ. ಈ ವೇಳೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಲಾಗುತ್ತದೆ.
ಜೂ.17ರಂದು, ದೇಶದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವಾದ ರಾಜಸ್ಥಾನದ ಕೋಟಾದಲ್ಲಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅಭಿಯಾನದ ಮೊದಲ ಹಂತಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ವಿದ್ಯಾರ್ಥಿಗಳ ಜತೆ ಸಂವಾದ ನಡೆಸಲಿದ್ದಾರೆ. ಜು.10ರಂದು ಅಲಹಾಬಾದ್, ಜು.11ರಂದು ಪಟನಾ ಹಾಗೂ ಜು.14ರಂದು ದೆಹಲಿಯಲ್ಲಿ ಪ್ರತಿಭಟನೆಗಳು ನಡೆಯಲಿವೆ. ಕೇಂದ್ರ ಸರ್ಕಾರ ಪರೀಕ್ಷಾ ಪ್ರಕ್ರಿಯೆಯಲ್ಲಿ ಸುಧಾರಣೆ ಮತ್ತು ಮರುಪರೀಕ್ಷೆಯ ಭರವಸೆ ನೀಡಿದ ಹೊರತಾಗಿಯೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಶನಿವಾರ ಹೇಳಿದ್ದಾರೆ.
ವಿದ್ಯಾರ್ಥಿಗಳ ಅನುಭವ ಹಂಚಿಕೊಳ್ಳಲು ಅವಕಾಶ ಕಲ್ಪಿಸುವುದು, ಪರೀಕ್ಷಾ ಶುಲ್ಕ ರದ್ದತಿ, ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಕಾನೂನು ಕ್ರಮ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ ಪ್ರತಿಭಟನೆಯ ಉದ್ದೇಶವಾಗಿದೆ ಎಂದು ಅವರು ಹೇಳಿದರು.
- ಪ್ರಶ್ನೆಪತ್ರಿಕೆ ಸೋರಿಕೆ, ಮೌಲ್ಯಮಾಪನದಲ್ಲಿ ವ್ಯತ್ಯಾಸ
- ಇದಕ್ಕೆ ಶಿಕ್ಷಣ ಸಚಿವ ಪ್ರಧಾನ್ ಹೊಣೆ: ಕಾಂಗ್ರೆಸ್ ಆರೋಪ
- ಹೀಗಾಗಿ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ
- ರಾಜಸ್ಥಾನದ ಕೋಟಾದಲ್ಲಿ ರಾಹುಲ್ ಗಾಂಧಿ ಚಾಲನೆ
- ಬಳಿಕ ಅಲಹಾಬಾದ್, ಪಟನಾ, ದಿಲ್ಲಿಯಲ್ಲಿ ಹೋರಾಟ