;Resize=(412,232))
ಬೆಂಗಳೂರು : ವಿಧಾನ ಪರಿಷತ್ನಲ್ಲಿ ಸರ್ಕಾರದ ಮುಖ್ಯಸಚೇತಕ ಸಲೀಂ ಅಹಮದ್, ಶಾಸಕ ರಿಜ್ವಾನ್ ಅರ್ಷದ್ ಅವರ ತೀವ್ರ ಪ್ರಯತ್ನದ ಫಲವಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಉಂಟಾಗಿದ್ದ ಬಂಡಾಯ ಕೊನೆಗೂ ಶಮನ ಆಗಿದೆ.
ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸಾದಿಕ್ ಪೈಲ್ವಾನ್ ಚುನಾವಣಾ ಕಣದಿಂದ ಹಿಂದೆ ಸರಿದು ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ ಪರ ಕೆಲಸ ಮಾಡಲು ಒಪ್ಪಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಸಾದಿಕ್ ಪೈಲ್ವಾನ್ ತಮ್ಮ ನಿಲುವಿನಲ್ಲಿ ಆದ ಬದಲಾವಣೆ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲೂ ಭಾಗವಹಿಸಿದ ಸಾದಿಕ್ ಪೈಲ್ವಾನ್, ‘ಮತ್ತೆ ನನ್ನ ಮನೆಯಾದ ಕಾಂಗ್ರೆಸ್ಗೆ ಮರಳಿದ್ದೇನೆ’ ಎಂದಿದ್ದಾರೆ.
ಕಾಂಗ್ರೆಸ್ ಟಿಕೆಟ್ಗೆ ಪಟ್ಟು ಹಿಡಿದಿದ್ದ ಸಾದಿಕ್ ಪೈಲ್ವಾನ್ ಟಿಕೆಟ್ ಕೈ ತಪ್ಪಿದ್ದರಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ನಾಮಪತ್ರ ಹಿಂಪಡೆಯಲು ಅಂತಿಮ ದಿನಾಂಕವಾಗಿದ್ದ ಮಾ.26 ರಂದು ಗುರುವಾರ ರಿಜ್ವಾನ್, ಸಲೀಂ ಅಹಮದ್ ಅವರು ಮನವೊಲಿಸಲು ಯತ್ನಿಸಿದರೂ ಸಾದಿಕ್ ಒಪ್ಪಿರಲಿಲ್ಲ.
ಇದೀಗ ನಾಮಪತ್ರ ಹಿಂಪಡೆಯುವ ಕೊನೆಯ ದಿನ ಕಳೆದಿದ್ದರೂ ಅಂತಿಮವಾಗಿ ಬಂಡಾಯ ಅಭ್ಯರ್ಥಿ ಮನವೊಲಿಸಲು ಕಾಂಗ್ರೆಸ್ ನಾಯಕರು ಯಶಸ್ವಿಯಾಗಿದ್ದಾರೆ. ಹೀಗಾಗಿ ನಾಮಪತ್ರ ಹಿಂಪಡೆಯದಿದ್ದರೂ ರಿಟೈರ್ ಆಗಿ, ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡುವುದಾಗಿ ಸಾದಿಕ್ ಭರವಸೆ ನೀಡಿದ್ದಾರೆ. ಈ ಎಲ್ಲಾ ಪ್ರಹಸನಗಳ ಬಳಿಕ ಅಂತಿಮವಾಗಿ ದಾವಣಗೆರೆ ಬಂಡಾಯ ಶಮನವಾದಂತಾಗಿದೆ.
ಒಂದು ಮನೆಯಲ್ಲಿ ಒಡಕು ಬಂದರೆ ಹಿರಿಯರು ಮಧ್ಯಪ್ರವೇಶ ಮಾಡುತ್ತಾರೆ. ಅದೇ ರೀತಿ ಹಿರಿಯರ ಮಧ್ಯಪ್ರವೇಶದಿಂದ ನನ್ನ ಮನೆಯಾದ ಕಾಂಗ್ರೆಸ್ಗೆ ವಾಪಸಾಗಿದ್ದೇನೆ. ಉಪ ಚುನಾವಣಾ ಕಣದಿಂದ ಹಿಂದೆ ಸರಿದು ಪಕ್ಷದ ಅಭ್ಯರ್ಥಿ ಪರವಾಗಿ ಭುಜಕ್ಕೆ ಭುಜ ಕೊಟ್ಟು ಕೆಲಸ ಮಾಡುತ್ತೇನೆ. ಎಲ್ಲಾ ವರ್ಗದವರು ಒಂದಾಗಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸುತ್ತೇವೆ.