ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ಚಿತ್ರದುರ್ಗದಲ್ಲಿ ಆಯೋಜಿಸಲಾದ ಪ್ರಚಾರ ಸಭೆಯಲ್ಲಿ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಪರ ಮತಯಾಚಿಸಿ ಅವರು ಮಾತನಾಡಿದರು. ನಿಯತ್ತು ಹಾಗೂ ಶುದ್ಧ ಹೃದಯದಿಂದ ಮೋದಿ ಕಾರ್ಯ ನಿರ್ವಹಿಸುತ್ತಿಲ್ಲ. ಅವರಿಗೆ ಎಲ್ಲಿ ರಾಜಕೀಯವಾಗಿ ಲಾಭ ಆಗಿದೆಯೋ ಅಲ್ಲಿಗೆ ಅನುದಾನ ಕೊಡುತ್ತಾರೆ ಎಂದು ದೂರಿದರು.
ಬರ ಹಿನ್ನೆಲೆಯಲ್ಲಿ ಅನುದಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನೇಕ ಬಾರಿ ಕೇಂದ್ರದ ಮುಂದೆ ಪ್ರಸ್ತಾವ ಸಲ್ಲಿಸಿ ಅನುದಾನ ಕೋರಿದರು. ಈವರೆಗೂ ಒಂದು ಪೈಸೆ ನೀಡಲಿಲ್ಲ. ಭದ್ರಾ ಮೇಲ್ದಂಡೆಗೆ ಬಜೆಟ್ ನಲ್ಲಿ ಹಣ ಕಾಯ್ದಿರಿಸಿದರೂ ಅನುದಾನ ಬಿಡುಗಡೆ ಮಾಡಲಿಲ್ಲ. ಮೋದಿ ದೇಶದ ಕೆಲ ಬಂಡವಾಳಶಾಹಿಗಳಿಗೆ ಅನುಕೂಲಕರ ವಾತಾವರಣ ಸೃಷ್ಟಿಸಿದ್ದಾರೆ. ಬಂಡವಾಳಶಾಹಿಗಳ 16 ಲಕ್ಷ ಕೋಟಿ ರು. ಸಾಲ ಮನ್ನಾ ಮಾಡಿದ್ದಾರೆ. ದೇಶದ ಆಸ್ತಿಗಳನ್ನು ತಮ್ಮ ಸ್ನೇಹಿತರಿಗೆ ಮಾರಾಟ ಮಾಡುತ್ತಿದ್ದಾರೆ. ರೈತರು ಸಾಲದಲ್ಲಿ ಮುಳುಗಿದ್ದರೆ ಅವರತ್ತ ಕಣ್ಣೆತ್ತಿಯೂ ನೋಡುತ್ತಿಲ್ಲ, ಆದರೆ, ಉದ್ಯೋಗಪತಿಗಳ ಸಾಲ ಮಾತ್ರ ಮನ್ನಾ ಆಗುತ್ತಿದೆ ಎಂದು ಪ್ರಿಯಾಂಕಾ ಆರೋಪಗಳ ಸುರಿಮಳೆಗೈದರು.ಯಾರು ಜನಪರವಾಗಿ ಮಾತಾಡುತ್ತಾರೋ ಅವರ ಬಾಯಿ ಮುಚ್ಚಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಇಬ್ಬರು ಸಿಎಂಗಳನ್ನು ಬಂಧಿಸಿ ಜೈಲಲ್ಲಿ ಇಡಲಾಗಿದೆ. ವಿಪಕ್ಷ ನಾಯಕರ ಮೇಲೆ ದಾಳಿ ಮಾಡಿಸಿ ಅವರ ಧ್ವನಿ ಅಡಗಿಸುವ ಕೆಲಸ ಮಾಡಲಾಗುತ್ತಿದೆ. ಎಲೆಕ್ಟೋರಲ್ ಬಾಂಡ್ ಮೂಲಕ ಮೋದಿ ಹಣ ಲೂಟಿ ಮಾಡಿದ್ದಾರೆ. ದಾನ ಮಾಡಿದವರ ಹೆಸರನ್ನು ಯಾರಿಗೂ ತಿಳಿಯದಂತೆ ಮುಚ್ಚಿಡಲಾಗಿತ್ತು. ಆದರೆ, ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ದುಡ್ಡು ಕೊಟ್ಟವರ ಹೆಸರು ಬಹಿರಂಗವಾಗಿದೆ. ಯಾವ ಕಂಪನಿಗಳ ಮೇಲೆ ಕೇಸು ಮಾಡಲಾಗಿತ್ತೋ ಅವೆಲ್ಲ ಕಂಪನಿಗಳು ಚಂದಾ ನೀಡಿವೆ. ಭ್ರಷ್ಟ ಕಂಪನಿಗಳಿಂದ ಹಣ ಪಡೆದು ಪ್ರಕರಣವನ್ನು ಮುಚ್ಚಿ ಹಾಕುವ ಕೆಲಸ ನಡೆದಿದೆ. ವಿಪಕ್ಷ ನಾಯಕರಿಗೆ ಭ್ರಷ್ಟರು ಎಂದು ದೂರುವ ಮೋದಿಯೇ ಖುದ್ದು ತಾವೇ ಭ್ರಷ್ಟರಾಗಿದ್ದಾರೆ ಎಂದು ಪ್ರಿಯಾಂಕಾ ಕಿಡಿಕಾರಿದರು.
ರಾಜ್ಯದ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಜಾರಿಗೊಳಿಸಿದೆ. ಇದು ಜನರ ಜೀವನದ ಮೇಲೆ ಪರಿಣಾಮ ಬೀರಿಲ್ಲವೇ? ಗೃಹಲಕ್ಷ್ಮೀ ಯೋಜನೆಯಿಂದ ಪ್ರತಿ ಮಹಿಳೆಗೆ 2 ಸಾವಿರ ರು. ಹಣ ಬರುತ್ತಿದೆ. ಉಚಿತ ವಿದ್ಯುತ್, ಅನ್ನಭಾಗ್ಯ, ಶಕ್ತಿ ಯೋಜನೆಯಿಂದ ಉಚಿತ ಪ್ರಯಾಣ, ಯುವನಿಧಿ ಯೋಜನೆಗಳು ಗ್ರಾಮೀಣರಿಗೆ ಪೂರಕವಾಗಿವೆ. ಗ್ಯಾರಂಟಿಗಳು ಇಂದು ಕರ್ನಾಟಕದಿಂದ ಆರಂಭವಾಗಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಪೂರ್ಣ ದೇಶದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಗೆ ಬರಲಿವೆ. ಪ್ರತಿ ಕುಟುಂಬದ ಮಹಿಳೆಗೆ 1 ಲಕ್ಷ ಸೇರಿ ಹಲವು ಗ್ಯಾರಂಟಿಗಳನ್ನು ನೀಡಲಾಗುವುದು ಎಂದು ಪ್ರಿಯಾಂಕಾ ಭರವಸೆ ನೀಡಿದರು.