ರಿಜಿಜು ವರ್ಸಸ್ ಡಿಕೆಶಿ : ಮಹಿಳಾ ಪ್ರಾತಿನಿಧ್ಯವೇ ಇಲ್ಲ - ಮಹಿಳೆಗೆ ಸಂಪುಟದಲ್ಲಿ ಸ್ಥಾನ ಇದ್ದೇ ಇರುತ್ತೆ

Published : Aug 09, 2026, 07:32 AM IST
DK Shivakumar

ಸಾರಾಂಶ

ಕರ್ನಾಟಕದ ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಕೊಡದ ವಿಚಾರವಾಗಿ ಕೇಂದ್ರ ಸಚಿವ ಕಿರಣ್‌ ರಿಜಿಜು ವಾಗ್ದಾಳಿ ನಡೆಸಿದ್ದಾರೆ. ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ. ನಾವು ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ನವದೆಹಲಿ: ಕರ್ನಾಟಕದ ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಕೊಡದ ವಿಚಾರವಾಗಿ ಕೇಂದ್ರ ಸಚಿವ ಕಿರಣ್‌ ರಿಜಿಜು ವಾಗ್ದಾಳಿ ನಡೆಸಿದ್ದಾರೆ.

ಮಹಿಳೆಯರಿಗೆ ಮೀಸಲಾತಿ ಒದಗಿಸುವ ನಿಯಮವಿದೆ

ಟ್ವೀಟ್‌ ಮಾಡಿರುವ ಅವರು, ‘ಸಂವಿಧಾನದ (106ನೇ ತಿದ್ದುಪಡಿ) ಕಾಯ್ದೆ 2023ರ ಅಡಿಯಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಒದಗಿಸುವ ನಿಯಮವಿದೆ. ಕರ್ನಾಟಕದ ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಮಹಿಳೆಯರಿಲ್ಲ, ಇದು ಶೇ.33 ಮಹಿಳಾ ಕೋಟಾ ಕುರಿತು ಕಾಂಗ್ರೆಸ್‌ನ ನಿಲುವಿನ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತುತ್ತದೆ’ ಎಂದು ವಾಗ್ದಾಳಿ ನಡೆಸಿದ್ದಾರೆ,

‘ಮಹಿಳಾ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್‌ನ ಸಂಪೂರ್ಣ ಬೆಂಬಲದೊಂದಿಗೆ 3 ವರ್ಷ ಹಿಂದೆಯೇ ಸರ್ವಾನುಮತದಿಂದ ಅಂಗೀಕರಿಸಲಾಗಿತ್ತು. 3 ವರ್ಷಗಳಾಗಿದ್ದರೂ ಇನ್ನೂ ಏಕೆ ಜಾರಿಗೆ ತಂದಿಲ್ಲ? ಅದನ್ನು ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ಅನಗತ್ಯವಾಗಿ ಏಕೆ ಜೋಡಿಸುತ್ತಿದ್ದೀರಿ?’ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದರು. ಅದಕ್ಕೆ ರಿಜಿಜು ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಮಹಿಳೆಗೆ ಸಂಪುಟದಲ್ಲಿ ಸ್ಥಾನಮಾನ ಇದ್ದೇ ಇರುತ್ತೆ: ಡಿಕೆಶಿ ತಿರುಗೇಟು

 ಬೆಂಗಳೂರು : ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ. ನಾವು ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ. ಕೇಂದ್ರ ಸಂಸದೀಯ ಸಚಿವ ಕಿರಣ್ ರಿಜಿಜು ಅವರು ಕಾಂಗ್ರೆಸ್‌ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಸಾಮಾಜಿಕ ಜಾಲತಾಣದಲ್ಲಿ ಮಹಿಳಾ ಮೀಸಲಾತಿ ವಿಚಾರ ಪ್ರಸ್ತಾಪಿಸಿದ್ದಕ್ಕೆ ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಕರ್ನಾಟಕ ಸರ್ಕಾರದ ಸಚಿವ ಸಂಪುಟದಲ್ಲಿ ಮಹಿಳೆಯರೇ ಇಲ್ಲ ಎಂದಿದ್ದರು. ಈ ಬಗ್ಗೆ ಶಿವಕುಮಾರ್‌ ಶನಿವಾರ ತಿರುಗೇಟು ನೀಡಿದ್ದಾರೆ.

ಮಹಿಳಾ ಮೀಸಲಾತಿ ಮಸೂದೆ ರೂಪಿಸಿ, ಲೋಕಸಭೆಯಲ್ಲಿ ಪಾಸ್ ಮಾಡಿದವರು ಕಾಂಗ್ರೆಸ್‌ನವರು. ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ನಾವು ಮಹಿಳೆಯರಿಗೆ ಹೆಚ್ಚು ಸ್ಥಾನ ನೀಡಿದ್ದೆವು. ಸದ್ಯದಲ್ಲೇ ಸಂಪುಟ ವಿಸ್ತರಣೆ ವಿಚಾರ ಬಗೆಹರಿಯಲಿದೆ. ರಿಜಿಜು ಅವರು ಕಾಂಗ್ರೆಸ್ ಪಕ್ಷದ ಬಗ್ಗೆ ಚಿಂತೆ ಮಾಡುವುದು ಬೇಡ, ಅವರು ತಮ್ಮ ಪಕ್ಷ ಹಾಗೂ ಸರ್ಕಾರದ ಬಗ್ಗೆ ಆಲೋಚಿಸಲಿ’ ಎಂದು ತಿರುಗೇಟು ನೀಡಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಕೋರ್ಟ್‌ ಷರತ್ತು ಮೀರಿ ನಾಗೇಂದ್ರ ದಿಲ್ಲಿ ಭೇಟಿ : ತನಿಖೆ
ಹುದ್ದೆಗಾಗಿ ಹಣ: ಕೆಪಿಎಸ್‌ಸಿ ಮಾಜಿ ಸದಸ್ಯೆ ವಿರುದ್ಧ ಕೇಸ್‌