ಬೆಂಗಳೂರು : ಬೆಂಗಳೂರು: ನಗರದ ಚಾಮರಾಜಪೇಟೆಯಲ್ಲಿ ದುಷ್ಕರ್ಮಿಗಳು ಮೂರು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಅಮಾನವೀಯ ಕೃತ್ಯದ ವಿರುದ್ಧ ರಾಜ್ಯಾದ್ಯಂತ ಹಿಂದೂಪರ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತೆರಳಿದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕಿಡಿಕಾರಿದ್ದಾರೆ.
ಇದು ಜಿಹಾದಿ ಷಡ್ಯಂತ್ರ. ಕೆಲ ತಿಂಗಳ ಹಿಂದೆ ಚಾಮರಾಜಪೇಟೆ ಪಶು ಆಸ್ಪತ್ರೆ ಜಾಗವನ್ನು ಅಲ್ಪಸಂಖ್ಯಾತ ಇಲಾಖೆಗೆ ವರ್ಗಾಯಿಸುವ ವಿರುದ್ಧ ನಡೆದ ಪ್ರತಿಭಟನೆಗೆ ಪ್ರತೀಕಾರವಾಗಿ ಈ ಕೃತ್ಯ ನಡೆದಿರುವ ಸಾಧ್ಯತೆ ಇದೆ ಎಂದು ಬಜರಂಗದಳ ಮುಖಂಡ ಗೋವರ್ಧನ್ ಆರೋಪಿಸಿದ್ದು, ಸರ್ಕಾರ ಈ ಸಂಬಂಧ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರನ್ನು ಪತ್ತೆ ಮಾಡಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಆಗ್ರಹಿಸಿದರು.
ಇದೊಂದು ಭಯೋತ್ಪಾದನೆಗೆ ಸಮಾನವಾದ ಕೃತ್ಯ ಎಂದು ಹಿಂದೂ ಜನಜಾಗೃತಿ ಸಮಿತಿ ವ್ಯಾಖ್ಯಾನಿಸಿದ್ದು, ಇದರ ಹಿಂದೆ ಗೋಮಾತೆಯನ್ನು ಪೂಜಿಸುವ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡುವ ದುರುದ್ದೇಶ ಅಡಗಿದೆ. ಇಂಥ ಕೃತ್ಯಗಳು ಮರುಕಳಿಸದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.
ಜಮೀರ್ ವಿರುದ್ಧ ಹೋರಾಟ: ಮುತಾಲಿಕ್
ಈ ಕೃತ್ಯ ಎಸಗಿರುವವರು ಮನುಷ್ಯರಾಗಿರಲು ಸಾಧ್ಯವೇ ಇಲ್ಲ. ಇದು ರಾಕ್ಷಸೀ ಕೃತ್ಯ. ರಾಕ್ಷಸೀ ಮಾನಸಿಕತೆ ಹೇಗಿರುತ್ತದೆ ಎನ್ನುವುದಕ್ಕೆ ಇದೊಂದು ಜ್ವಲಂತ ಉದಾಹರಣೆ ಎಂದು ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.
ಸ್ಥಳೀಯ ಶಾಸಕರೂ ಸಚಿವ ಜಮೀರ್ ಅಹಮದ್ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಅವರಿಗೆ ಮುಸ್ಲಿಮರು ಮಾತ್ರ ಮತ ಹಾಕಿಲ್ಲ, ಹಿಂದೂಗಳೂ ಮತ ಹಾಕಿ ಗೆಲ್ಲಿಸಿದ್ದಾರೆ ಎನ್ನುವುದು ನೆನಪಿರಲಿ. ತಪ್ಪು ಮಾಡಿರುವವರನ್ನು ಸಿಸಿಟಿವಿ, ಪೊಲೀಸ್ ತನಿಖೆ ಮೂಲಕ ಪತ್ತೆ ಹಚ್ಚಿ ತಕ್ಕ ಉತ್ತರ ಕೊಡದೆ ಹೋದರೆ ಜಮೀರ್ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.