ರಾಜೀನಾಮೆಗೆ ಸಿದ್ದು ಸಿದ್ಧತೆ: ಬೊಮ್ಮಾಯಿ - ಮಾನಸಿಕವಾಗಿ ಸಜ್ಜಾಗುತ್ತಿದ್ದಾರೆ: ಸಂಸದ ಬೊಮ್ಮಾಯಿ

Published : Oct 08, 2024, 05:20 AM IST
Basavaraj Bommai

ಸಾರಾಂಶ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಬೇಕು ಎನ್ನುವ ಚಟುವಟಿಕೆಗಳು ಕಾಂಗ್ರೆಸ್ ಪಕ್ಷದಲ್ಲಿ ಚುರುಕಾಗಿ ನಡೆಯುತ್ತಿವೆ.

ಗದಗ :  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಬೇಕು ಎನ್ನುವ ಚಟುವಟಿಕೆಗಳು ಕಾಂಗ್ರೆಸ್ ಪಕ್ಷದಲ್ಲಿ ಚುರುಕಾಗಿ ನಡೆಯುತ್ತಿವೆ. ಹೀಗಾಗಿ, ಸಿದ್ದರಾಮಯ್ಯ ಕೂಡ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮಾನಸಿಕವಾಗಿ ಸಿದ್ಧರಾಗುತ್ತಿದ್ದಾರೆ ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಪ್ರತಿಪಾದಿಸಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ದಸರಾ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆ ಖಚಿತ ಎಂದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ವಿಜಯೇಂದ್ರ ಅವರು ಸರಿಯಾದ ಲೆಕ್ಕಾಚಾರದಲ್ಲಿಯೇ ಹೇಳಿದ್ದಾರೆ. ನನ್ನ ಪ್ರಕಾರ ಸಿದ್ದರಾಮಯ್ಯನವರು ರಾಜೀನಾಮೆ ನೀಡಲು ಮಾನಸಿಕವಾಗಿ ಸಿದ್ಧರಾಗುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಸಿದ್ಧರಾಮಯ್ಯ ಅವರನ್ನು ಬದಲಾವಣೆ ಮಾಡಬೇಕು ಎನ್ನುವ ಚಟುವಟಿಕೆಗಳು ಕಾಂಗ್ರೆಸ್ ಪಕ್ಷದಲ್ಲಿ ಚುರುಕಾಗಿ ನಡೆಯುತ್ತಿವೆ. ಹಿರಿಯ ಸಚಿವರ ದೆಹಲಿ ಭೇಟಿ, ರಾಜ್ಯದಲ್ಲಿನ ಕೆಲ ಸಚಿವರ ಪರಸ್ಪರ ಭೇಟಿಯ ವಿಚಾರಗಳನ್ನು ನೋಡಿದರೆ ಈ ಸಂಗತಿ ಗೊತ್ತಾಗುತ್ತದೆ. ವಿರೋಧ ಪಕ್ಷಕ್ಕಿಂತ ಹೆಚ್ಚಾಗಿ ಆಡಳಿತ ಪಕ್ಷದವರೇ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ ಎಂದರು.

ಮುಂದಿನ ಬಾರಿ ಹೇಗಿದ್ದರೂ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ. ಅದಕ್ಕಾಗಿ ಈಗಲೇ ಸಿದ್ದರಾಮಯ್ಯನವರನ್ನು ಬದಲಾವಣೆ ಮಾಡಿ ತಾವು ಸಿಎಂ ಆಗಬೇಕು ಎನ್ನುವ ತವಕ ಕಾಂಗ್ರೆಸ್‌ ನಾಯಕರದು. ಆ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಮಾಡುತ್ತಲೇ ಇದ್ದಾರೆ. ರಾಜ್ಯ ಸರ್ಕಾರವನ್ನು ಅಭದ್ರಗೊಳಿಸುವ ಕೆಲಸವನ್ನು ವಿರೋಧ ಪಕ್ಷಗಳು ಮಾಡುತ್ತಿಲ್ಲ. ಬದಲಾಗಿ, ಆ ಕೆಲಸವನ್ನು ಕಾಂಗ್ರೆಸ್ ಪಕ್ಷದವರೇ ಮಾಡುತ್ತಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ ಎಂದರು.

ಸತೀಶ್ ಜಾರಕಿಹೊಳಿ ಹಾಗೂ ಬಿ.ವೈ.ವಿಜಯೇಂದ್ರ ಭೇಟಿ ವಿಚಾರ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಬೇರೆ ಯಾವುದೋ ಕೆಲಸಕ್ಕೆ ಭೇಟಿಯಾಗಿರಬಹುದು. ಈ ಸರ್ಕಾರವನ್ನು ಅಭದ್ರಗೊಳಿಸುವ ಕೆಲಸಕ್ಕೆ ನಾವು ಮುಂದಾಗುವುದಿಲ್ಲ. ಈ ಬಗ್ಗೆ ನಮ್ಮ ಹೈಕಮಾಂಡ್‌ ನಿಲುವು ಸ್ಪಷ್ಟವಾಗಿದೆ. ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ, ಅದನ್ನಷ್ಟೆ ನಾವು ಮಾಡುತ್ತೇವೆ ಎಂದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ವಾಹನ ಚಾಲನೆ ವೇಳೆ ಅವಸರ ಬೇಡ, ಜಾಗ್ರತೆ ಇರಲಿ: ರಾಮಲಿಂಗಾರೆಡ್ಡಿ
ಬೆಂಗಳೂರು ಜಿಬಿಎ ಚುನಾವಣೆಯಲ್ಲಿ ಮತ ಕಳವು ಬಗ್ಗೆ ಭಯ ಬಿಡಿ: ಬೈರತಿ ಸುರೇಶ್