ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡೀಸಿ ಶಿಲ್ಪಾನಾಗ್ ಅಧ್ಯಕ್ಷತೆಯಲ್ಲಿ ಸಭೆ । ಹಕ್ಕು, ಅಕ್ಷೇಪಣೆ ಸಲ್ಲಿಸಲು ದಿನಾಂಕ ನಿಗದಿ
ಕನ್ನಡಪ್ರಭ ವಾರ್ತೆ ಚಾಮರಾಜನಗರಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯ ಕರಡು ಪಟ್ಟಿ ಪ್ರಕಟಿಸಲಾಗಿದ್ದು, ಹಕ್ಕು ಆಕ್ಷೇಪಣೆ ಸಲ್ಲಿಸಲು ದಿನಾಂಕ ನಿಗದಿ ಪಡಿಸಿ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಸುವ ಸಂಬಂಧ ರಾಷ್ಟ್ರೀಯ ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಸುವ ಸಂಬಂಧ ಕರಡು ಮತದಾರರ ಪಟ್ಟಿಯನ್ನು ಆಯಾ ತಾಲೂಕುಗಳ ಮತಗಟ್ಟೆಗಳಲ್ಲಿ ಸ್ಥಾಪಿಸಲಾಗಿರುವ ತಾಲೂಕು ಕಚೇರಿಗಳಲ್ಲಿ ಪ್ರಕಟಿಸಲಾಗಿದೆ. ಈ ಬಗ್ಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಡಿ. ೯ರವರೆಗೆ ಅವಕಾಶ ನೀಡಲಾಗಿದೆ. ನಿಗದಿಪಡಿಸಿದ ದಿನಾಂಕದವರೆಗೆ ಸ್ವೀಕರಿಸಲಾಗುವ ಹಕ್ಕು ಮತ್ತು ಆಕ್ಷೇಪಣೆಗಳನ್ನು ನಿಯಾಮಾನುಸಾರ ಪರಿಶೀಲಿಸಿ ಡಿ. ೩೦ರಂದು ಅಂತಿಮ ಮತರದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು.ಜಿಲ್ಲೆಯ ಎಲ್ಲಾ ತಾಲೂಕುಗಳ ಮತದಾರರ ಕರಡು ಪ್ರತಿಯನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ವಿತರಿಸಲಾಗಿದ್ದು, ರಾಜಕೀಯ ಪಕ್ಷಗಳು ಆಯಾ ತಾಲೂಕಿಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯಲ್ಲಿ ಲೋಪದೋಷಗಳು ಕಂಡುಬಂದಲ್ಲಿ ಆಯಾ ತಾಲೂಕು ಕಚೇರಿ ತಹಸೀಲ್ದಾರ್ ಅವರಿಗೆ ಮಾಹಿತಿ ನೀಡಿ ಹಕ್ಕು, ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದರು.
ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಚಾಮರಾಜನಗರ ತಾಲೂಕಿನಲ್ಲಿ ೫೩೭, ಗುಂಡ್ಲುಪೇಟೆ ೪೦೪, ಯಳಂದೂರು ೧೭೦, ಕೊಳ್ಳೇಗಾಲ ೭೩೦ ಹಾಗೂ ಹನೂರು ತಾಲೂಕಿನಲ್ಲಿ ೨೪೩ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ೨,೦೮೪ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಈ ಪೈಕಿ ೧,೮೧೨ ಅರ್ಜಿಗಳನ್ನು ಅಂಗೀಕರಿಸಲಾಗಿದ್ದು, ೫೫ ಅರ್ಜಿಗಳು ತಿರಸ್ಕೃತಗೊಂಡಿವೆ. ಅಲ್ಲದೆ ೨೧೭ ಅರ್ಜಿಗಳನ್ನು ಸಂಬಂಧಪಟ್ಟ ಇತರೆ ಜಿಲ್ಲೆ, ತಾಲೂಕಿಗೆ ವರ್ಗಾಯಿಸಲಾಗಿದೆ ಎಂದು ಅವರು ತಿಳಿಸಿದರು.ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಗೆ ಚಾಮರಾಜನಗರ, ಮೈಸೂರು, ಮಂಡ್ಯ ಮತ್ತು ಹಾಸನ ಜಿಲ್ಲೆಗಳು ಒಳಪಡಲಿದ್ದು, ಮತದಾರರ ಪಟ್ಟಿ ಸಂಬಂಧ ಚಟುವಟಿಕೆಗಳನ್ನು ರೋಲ್ ಅಬ್ಸರ್ವರ್ ಅವರು ವೀಕ್ಷಿಸಲಿದ್ದಾರೆ. ಅಂತಿಮ ಮತದಾರರ ಪಟ್ಟಿಯನ್ನು ದೋಷರಹಿತ ಹಾಗೂ ಪಾರದರ್ಶಕವಾಗಿ ತಯಾರಿಸಲು ಎಲ್ಲಾ ರಾಜಕೀಯ ಪಕ್ಷಗಳು ಸಹಕಾರ ನೀಡಬೇಕೆಂದು ಅವರು ಸಭೆಯಲ್ಲಿ ಮನವಿ ಮಾಡಿದರು.
ಇದೇ ವೇಳೆ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ವಿತರಿಸಿದರು.ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಚುನಾವಣಾ ತಹಸೀಲ್ದಾರ್ ಅಶೋಕ್, ಶಿರಸ್ತೇದಾರ್ ಎಸ್. ಬಸವರಾಜು, ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಎ.ಎಚ್. ನಸ್ರುಲ್ಲಾ ಖಾನ್, ಎಸ್. ಬಾಲಸುಬ್ರಮಣ್ಯ, ಎನ್. ನಾಗಯ್ಯ, ಎಸ್. ಮಹೇಶ್ಗೌಡ, ಕೆ. ಹರೀಶ್, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.
ಬಾಕ್ಸ್----ದಕ್ಷಿಣ ಶಿಕ್ಷಕರ ಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟ
ಚಾಮರಾಜನಗರ- ಕರ್ನಾಟಕದ ದಕ್ಷಿಣ ಶಿಕ್ಷಕರ ಮತ ಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮತದಾರ ನೋಂದಣಿ ಅಧಿಕಾರಿಗಳು/ ಪ್ರಾದೇಶಿಕ ಆಯುಕ್ತರು/ ಸಹಾಯಕ ಮತದಾರರ ನೋಂದಣಿ ಅಧಿಕಾರಿಗಳು/ ಜಿಲ್ಲಾ ಚುನಾವಣಾ ಅಧಿಕಾರಿಗಳ ಕಚೇರಿ ceo.karnataka.gov.in ವೆಬ್ಸೈಟ್ ಮತ್ತು ಸಂಬಂಧಪಟ್ಟ ಪ್ರಾದೇಶಿಕ ಆಯುಕ್ತರು ಮತ್ತು ಜಿಲ್ಲಾ ಚುನಾವಣಾ ಅಧಿಕಾರಿಗಳ ಕಚೇರಿ ವೆಬ್ಸೈಟ್ ಗಳಲ್ಲಿ ಪಟ್ಟಿ ಲಭ್ಯವಿದೆ. ಕರ್ನಾಟಕದ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ನವೆಂಬರ್ ೬ ರವರೆಗೆ ೧೪,೩೮೩ ಅರ್ಜಿಗಳು ಸಲ್ಲಿಯಾಗಿದ್ದು, ಈ ಪೈಕಿ ೧೭೭ ಅರ್ಜಿಗಳು ತಿರಸ್ಕೃತಗೊಂಡಿದೆ. ಇದರಲ್ಲಿ ೧೪,೨೦೬ ಅರ್ಜಿಗಳು ಸ್ವೀಕೃತಗೊಂಡಿವೆ. ಕರಡು ಮತದಾರ ಪಟ್ಟಿಯಲ್ಲಿ ೮,೦೬೧ ಪುರುಷರು, ೬,೧೪೫ ಮಹಿಳೆಯರು ಸೇರಿದಂತೆ ಒಟ್ಟು ೧೪,೨೦೬ ಮತದಾರರಿದ್ದಾರೆ. ನವೆಂಬರ್ ೬ರವರೆಗೆ ಅರ್ಜಿಗಳನ್ನು ಸಲ್ಲಿಸಿದ ಎಲ್ಲಾ ಅರ್ಜಿದಾರರು ceo.karnataka.gov.in ನಿಗದಿಪಡಿಸಿದ ಸಂಬಂಧಿತ ಶಿಕ್ಷಕರ ಕ್ಷೇತ್ರದ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲಿಸಲು ಹಾಗೂ ಹಕ್ಕುಗಳು ಮತ್ತು ಆಕ್ಷೇಪಣೆಗಳು ಇದ್ದಲ್ಲಿ ಡಿಸೆಂಬರ್ ೯ ರವರೆಗೆ ಸಂಬಂಧಪಟ್ಟ ಚುನಾವಣೆ ನೋಂದಣಿ ಅಧಿಕಾರಿಗಳಿಗೆ ಸಲ್ಲಿಸಬೇಕು. ಅರ್ಹ ಶಿಕ್ಷಕರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ನಮೂನೆ ೧೮ ಮತ್ತು ೧೯ರಲ್ಲಿ ಡಿ. ೯ ರೊಳಗೆ ಅರ್ಜಿ ಸಲ್ಲಿಸುವಂತೆ ಮತದಾರರ ನೋಂದಣಾಧಿಕಾರಿ ಹಾಗೂ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ. ಜಿ.ಸಿ ಪ್ರಕಾಶ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.----
23ಸಿಎಚ್ಎನ್18ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಸುವ ಸಂಬಂಧ ರಾಷ್ಟ್ರೀಯ ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಡೀಸಿ ಶಿಲ್ಪಾನಾಗ್.