ಮಂಡ್ಯ: ಗಣೇಶೋತ್ಸವ ಮೆರವಣಿಗೆ ನಡೆಯುವ ಸಂದರ್ಭದಲ್ಲಿ ಮಸೀದಿ ಕಡೆಯಿಂದ ಕಲ್ಲುಗಳನ್ನು ಎಸೆದಿರುವ ಬಗ್ಗೆ ಮಾಹಿತಿ ಇದೆ. ಈ ಬಗ್ಗೆ ವಿಚಾರಣೆ ನಡೆಸಿ ಇಪ್ಪತ್ತೊಂದು ಜನರನ್ನು ಈಗಾಗಲೇ ಬಂಧಿಸಲಾಗಿದೆ. ಯಾವ ಹಿಂದೂಗಳ ಮೇಲೂ ಕೇಸ್ ದಾಖಲಾಗಿಲ್ಲ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.
ಪಟ್ಟಣದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಸೃಷ್ಟಿಯಾದ ಹಿಂಸಾತ್ಮಕ ಘಟನೆ ಕುರಿತು ಪ್ರತಿಕ್ರಿಯಿಸಿರುವ ಅವರು, ಗಲಭೆ ನಡೆದ ಕೆಲವೇ ಗಂಟೆಗಳಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಘಟನೆ ನಡೆದ ತಕ್ಷಣ ಇಷ್ಟು ಬೇಗ ಕ್ರಮ ತೆಗೆದು ಕೊಂಡ ಪ್ರಕರಣ ಬೇರೆ ಯಾವುದೂ ಇಲ್ಲ. ಆದರೆ, ಬಿಜೆಪಿ ಹಾಗೂ ಕೆಲವು ಜೆಡಿಎಸ್ ನಾಯಕರು ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂಷಿಸಿದ್ದಾರೆ.
ಇನ್ನಷ್ಟು ಬಿಗಿ ಕ್ರಮಗಳನ್ನು ತೆಗೆದುಕೊಳ್ಳಲು ಹೇಳಬಹುದಿತ್ತು, ಅದು ಬಿಟ್ಟು ಕೋಮುಗಲಭೆಗೆ ಪ್ರಚೋದನೆ ಕೊಡಬಾರದಿತ್ತು. ಮದ್ದೂರಿನಲ್ಲಿ ಹಿಂದೆ ಎಂದೂ ಈ ರೀತಿಯ ಘಟನೆ ನಡೆದಿಲ್ಲ, ಹೊರಗಡೆಯಿಂದ ಬಂದು ಯಾರೋ ಗಲಭೆ ಮಾಡಿರಬಹುದು ಎಂಬ ಬಗ್ಗೆ ವಿಚಾರಣೆ ಮಾಡುತ್ತಿದ್ದೇವೆ. ಘಟನೆ ಹಿಂದೆ ಯಾವುದೇ ಸಮುದಾಯ ಇದ್ದರೂ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದಾರೆ.
ಯಾರೇ ಇದ್ದರೂ ನಿರ್ದಾಕ್ಷಿಣ್ಯ ಕ್ರಮ: ಕೆ.ಎಂ.ಉದಯ್
ಭಾನುವಾರ ರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಅಹಿತಕರ ಘಟನೆಯಿಂದ ಮನಸ್ಸಿಗೆ ತುಂಬಾ ನೋವುಂಟಾಗಿದೆ. ಈ ಘಟನೆಯನ್ನು ನಾನು ಖಂಡಿಸುತ್ತೇನೆ. ಘಟನೆ ಹಿಂದೆ ಯಾರೇ ಇದ್ದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ. ಯಾರು ಆತಂಕಕ್ಕೆ ಒಳಗಾಗುವುದು ಬೇಡ. ಉದ್ವೇಗಕ್ಕೂ ಒಳಗಾಗಬೇಡಿ ಎಂದು ಶಾಸಕ ಕೆ.ಎಂ.ಉದಯ್ ಪ್ರತಿಭಟಕಾರರಲ್ಲಿ ಮನವಿ ಮಾಡಿದ್ದಾರೆ.
ವಿದೇಶದಲ್ಲಿರುವ ಅವರು ಮದ್ದೂರು ಪಟ್ಟಣದಲ್ಲಿ ನಡೆದಿರುವ ಅಹಿತಕರ ಘಟನೆ ಕುರಿತು ಪ್ರತಿಕ್ರಿಯಿಸಿದ್ದು, ನಮ್ಮ ತಾಲೂಕಿನ ಜನತೆ ಶಾಂತಿ ಪ್ರಿಯರು. ಆಗಿರುವ ಘಟನೆಯನ್ನು ಸರಿಪಡಿಸಿಕೊಳ್ಳೋಣ. ತಪ್ಪಿತಸ್ಥರನ್ನ ಸೆದೆಬಡಿದು ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ. ನಿಮ್ಮ ಜೊತೆ ನಾವು ಯಾವಾಗಲೂ ಇರುತ್ತೇವೆ. ಎಲ್ಲರೂ ಶಾಂತಿಯನ್ನು ಕಾಪಾಡುವಂತೆ ಕೈ ಮುಗಿದು ಮನವಿ ಮಾಡಿದ್ದಾರೆ.