ಈ ಚುನಾವಣೆ 2ನೇ ‌ಸ್ವಾತಂತ್ರ್ಯ ಹೋರಾಟ: ಸಿಎಂ

Published : May 06, 2024, 10:21 AM IST
Siddaramaiah

ಸಾರಾಂಶ

ಈ ಚುನಾವಣೆ 2ನೇ ‌ಸ್ವಾತಂತ್ರ್ಯ ಹೋರಾಟ ಇದ್ದಂತೆ. ದೇಶದಲ್ಲಿ ಸಂವಿಧಾನ ಉಳಿವಿಗಾಗಿ ಹೋರಾಟ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿ :  ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದರೆ ಸಂವಿಧಾನ ಬದಲಾವಣೆ ಮಾಡುವುದಾಗಿ ಬಿಜೆಪಿಯವರು ಹೇಳುತ್ತಿದ್ದಾರೆ. ಹೀಗಾಗಿ ಈ ಚುನಾವಣೆ 2ನೇ ‌ಸ್ವಾತಂತ್ರ್ಯ ಹೋರಾಟ ಇದ್ದಂತೆ. ದೇಶದಲ್ಲಿ ಸಂವಿಧಾನ ಉಳಿವಿಗಾಗಿ ಹೋರಾಟ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಭಾನುವಾರ ಸುದ್ದಿಗಾರರ ಜತೆಗೆ ಮಾತನಾಡಿ, ಸಂವಿಧಾನ ನಮ್ಮ ಧರ್ಮಗ್ರಂಥ ಎಂದು ಜಾಹೀರಾತು ಮೂಲಕ ಹೇಳಿದ್ದಾರೆ. ಸಂವಿಧಾನ ಜಾರಿ ಆದ ಬಳಿಕ ಸಂವಿಧಾನ ಬಗ್ಗೆ ಬಿಜೆಪಿಯವರು ಏನು ಹೇಳಿದ್ದಾರೆ, ಏನು ಬರೆದಿದ್ದಾರೆ ಎಂದು ಇತಿಹಾಸದಲ್ಲಿ ದಾಖಲಾಗಿದೆ. ಅವರ ಹಾಲಿ ನಾಯಕರು ಸಂವಿಧಾನದ ಬಗ್ಗೆ ಏನು‌ ಹೇಳಿದರು ಎಂಬುದು ಎಲ್ಲರಿಗೂ ಗೊತ್ತಿದೆ. ಮೋಹನ್ ಭಾಗವತ್ ಅವರು ಸ್ವಲ್ಪ ಕಾಯಿರಿ ನಾವು ಸಂವಿಧಾನ ಬದಲು ಮಾಡುತ್ತೇವೆ ಎಂದು ಹೇಳುತ್ತಾರೆ. ಸಂಸದ ಅನಂತಕುಮಾರ್‌ ಹೆಗಡೆ, ಸಂವಿಧಾನ ಬದಲಿಸಲು ನಾವು ಬಂದಿದ್ದೇವೆ ಎಂದಿದ್ದಾರೆ. ಆದ್ದರಿಂದ ಈ ಚುನಾವಣೆ 2ನೇ ‌ಸ್ವಾತಂತ್ರ್ಯ ಹೋರಾಟ ಇದ್ದ ಹಾಗೆ. 400 ಸ್ಥಾನಗಳಲ್ಲಿ ಗೆದ್ದರೆ ಸಂವಿಧಾನ ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್‌ಎಸ್‌ಎಸ್ ಹೇಳುತ್ತಿದೆ. ಇಗಿದೆ. ಈ ಹೋರಾಟದಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು, ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ ಎಂದು ಭವಿಷ್ಯ ನುಡಿದರು.

ರಾಜ್ಯದಲ್ಲಿ ಮೇ 7ರಂದು 2ನೇ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಇವುಗಳಲ್ಲಿ 10 ಕ್ಷೇತ್ರಗಳಲ್ಲಿ ನಾವೇ ಗೆಲುವು ಸಾಧಿಸುತ್ತೇವೆ. ಮೊದಲ ಹಂತದ ಚುನಾವಣೆಯಲ್ಲಿ 14 ಕ್ಷೇತ್ರಗಳ ಪೈಕಿ 8 ರಿಂದ 9ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲಿದ್ದೇವೆ. ಕರ್ನಾಟಕದಲ್ಲಿ ಕಾಂಗ್ರೆಸ್ ಒಟ್ಟು 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸೋಲಿನ ಭೀತಿಯಿಂದಾಗಿ ಹತಾಶರಾಗಿರುವ ನರೇಂದ್ರ ಮೋದಿ ಅವರು ತಾವು ಪ್ರಧಾನಿ ಎಂಬುದನ್ನೂ ಮರೆತು ಬಜರಂಗದಳದ ಕಾರ್ಯಕರ್ತರಂತೆ ಮಾತನಾಡುತ್ತಿದ್ದಾರೆ. 10 ವರ್ಷಗಳ ಸಾಧನೆ ಕುರಿತು ಹೇಳದ ಮೋದಿ ಅವರು ಧರ್ಮಗಳ ನಡುವೆ ಬಿರುಕು ಮೂಡುವ ರೀತಿಯಲ್ಲಿ ಭಾಷಣ ಮಾಡುತ್ತಿದ್ದಾರೆ ಎಂದರು.

ಬಿಜೆಪಿಯವರಿಗೆ ಗ್ಯಾರಂಟಿ ಅಂದರೆ ಆಗುವುದಿಲ್ಲ. ಗ್ಯಾರಂಟಿ ಅನುಷ್ಠಾನ ಸಾಧ್ಯವಿಲ್ಲ, ರಾಜ್ಯ ದಿವಾಳಿ ಆಗುತ್ತದೆ, ಅಭಿವೃದ್ಧಿ ಕುಂಠಿತವಾಗುತ್ತದೆ ಎಂದು ಹೇಳಿದ ಅವರು ಇದೀಗ ಗ್ಯಾರಂಟಿ ಜಾರಿಯಾದ ಬಳಿಕ ಗ್ಯಾರಂಟಿ ನಿಲ್ಲಿಸಿ ಬಿಡುತ್ತೇವೆ ಎಂದು ಸುಳ್ಳು ಅಪಪ್ರಚಾರ ಮಾಡುತ್ತಿದ್ದಾರೆ. ಜನರಿಗೆ ನಮ್ಮ ಮೇಲೆ ನಂಬಿಕೆ ಬರಬಾರದು ಎಂದು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.

ಮೋದಿ 10 ಜನೋಪಯೋಗಿ ಕೆಲಸದ ಪಟ್ಟಿ

ತೋರಿಸಿದ್ರೆ ರಾಜಕೀಯ ನಿವೃತ್ತಿ: ಸಿಎಂ

  ಹೊನ್ನಾಳಿ

ಪ್ರಧಾನಿ ನರೇಂದ್ರ ಮೋದಿ ತಮ್ಮ 10 ವರ್ಷಗಳ ಅಧಿಕಾರಾವಧಿಯಲ್ಲಿ ಹತ್ತೇ ಹತ್ತು ಜನೋಪಯೋಗಿ ಕೆಲಸ ಮಾಡಿದ್ದು ತೋರಿಸಿದರೆ ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ ಎಂದು ಮಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು. ಹೊನ್ನಾಳಿಯಲ್ಲಿ ಭಾನುವಾರ ಪ್ರಜಾಧ್ವನಿ ಸಮಾವೇಶ-2 ಉದ್ಘಾಟಿಸಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಪರ ಮತಯಾಚಿಸಿ ಮಾತನಾಡಿದರು. ಎರಡು ಅವಧಿಗೆ ಮುಖ್ಯಮಂತ್ರಿಯಾಗಿ ನಾನು ಜಾರಿಗೊಳಿಸಿದ ಅಭಿವೃದ್ಧಿ ಕಾರ್ಯ, ಯೋಜನೆಗಳು, ಭಾಗ್ಯಗಳ ಪಟ್ಟಿ ಸಮೇತ ನಾನು ಸಾಧನೆ ಮುಂದಿಡುತ್ತೇನೆ. ನೀವು ಪ್ರಧಾನಿಯಾಗಿ 10 ವರ್ಷದಲ್ಲಿ ಮಾಡಿದ ಸಾಧನೆಗಳ ಪಟ್ಟಿಯನ್ನು ತಾಕತ್ತಿದ್ದರೆ ಸಮಸ್ತ ಭಾರತೀಯರ ಮುಂದೆ ಹೇಳಿ ನೋಡೋಣ ಎಂದರು.

ಕುರುಬರಿಗೆ ಟಿಕೆಟ್‌ ಕೊಟ್ಟಿಲ್ಲ: ರಾಜ್ಯದಲ್ಲಿ ಶೇ.7ರಷ್ಟಿರುವ ಕುರುಬ ಸಮಾಜಕ್ಕೆ 28 ಲೋಕಸಭಾ ಕ್ಷೇತ್ರಗಳ ಪೈಕಿ ಒಂದೇ ಒಂದು ಕ್ಷೇತ್ರದಲ್ಲೂ ಬಿಜೆಪಿ ಟಿಕೆಟ್ ಕೊಟ್ಟಿಲ್ಲ. ಕುರುಬರಿಗೆ ಟಿಕೆಟ್ ಕೊಟ್ಟಿಲ್ಲವೆಂದು ನಿಮಗ್ಯಾರಿಗೂ ಸಿಟ್ಟು ಬರುವುದಿಲ್ಲವೇ? ಎಂದು ಇದೇ ವೇಳೆ ಸಿದ್ದರಾಮಯ್ಯ ಪ್ರಶ್ನಿಸಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಜಲ ನಿರ್ವಹಣೆಗೆ ಸಹಕಾರ ನೀಡಲು ಬದ್ಧ : ಸಿಎಂ
ಎತ್ತ ಸಾಗುತ್ತಿದೆ ರಾಷ್ಟ್ರದ ವಿಪಕ್ಷಗಳ ಮನೋಸ್ಥಿತಿ..?