ಬೆಂಗಳೂರು : ತಮ್ಮ ಅನುಮತಿ ಪಡೆಯದೇ ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯ ವರ್ಗಾವಣೆಗೆ ಆಕ್ಷೇಪ ವ್ಯಕ್ತಪಡಿಸಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಇದೀಗ ಇಲಾಖೆಯ 42 ಸಹಾಯಕ ಕಾರ್ಯಪಾಲಕ ಎಂಜಿನಿಯರ್ಗಳ ವರ್ಗಾವಣೆಗೆ ಅನುಮತಿಸಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ತಮ್ಮ ಗಮನಕ್ಕೆ ತಾರದೆ ಜಲಸಂಪನ್ಮೂಲ ಸೇರಿ ತಮ್ಮ ಅಧೀನದಲ್ಲಿರುವ ಇಲಾಖೆಗಳಲ್ಲಿ ಯಾವುದೇ ವರ್ಗಾವಣೆ ಅಥವಾ ಎರವಲು ಸೇವೆಗೆ ಅಧಿಕಾರಿ, ನೌಕರರನ್ನು ನೇಮಿಸದಂತೆ ಡಿ.ಕೆ.ಶಿವಕುಮಾರ್ ಅವರು ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದು ತಾಕೀತು ಮಾಡಿದ್ದರು. ಈ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದಲ್ಲದೆ, ವಿರೋಧ ಪಕ್ಷಗಳು ಸರ್ಕಾರದಲ್ಲಿನ ಸಮನ್ವಯತೆ ಬಗ್ಗೆ ಪ್ರಶ್ನಿಸಿದ್ದವು. ಇದೀಗ ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯಲ್ಲಿ 42 ಸಹಾಯಕ ಕಾರ್ಯಪಾಲಕ ಎಂಜಿನಿಯರ್ಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.
ಜೂ.13ರಂದು ಎರಡು ಆದೇಶದ ಮೂಲಕ 42 ಸಹಾಯಕ ಕಾರ್ಯಪಾಲಕ ಎಂಜಿನಿಯರ್ಗಳನ್ನು ಇಲಾಖೆ ವ್ಯಾಪ್ತಿಯ ವಿವಿಧ ನಿಗಮಗಳಿಗೆ, ಸಣ್ಣ ನೀರಾವರಿ ಇಲಾಖೆ, ಲೋಕೋಪಯೋಗಿ ಇಲಾಖೆ, ನಗರಾಭಿವೃದ್ಧಿ ಇಲಾಖೆಗಳಿಗೆ ವರ್ಗಾವಣೆ ಮತ್ತು ಎರವಲು ಸೇವೆ ಮೂಲಕ ನಿಯೋಜಿಸಲಾಗಿದೆ. ಹೀಗೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ಗಳ ವರ್ಗಾವಣೆಗೂ ಮುನ್ನ ಡಿ.ಕೆ.ಶಿವಕುಮಾರ್ ಅವರಿಗೆ ಪಟ್ಟಿ ಸಲ್ಲಿಸಲಾಗಿದೆ. ಅವರು ಪರಿಶೀಲಿಸಿದ ನಂತರ ಜಲಸಂಪನ್ಮೂಲ ಇಲಾಖೆಯಿಂದ ವರ್ಗಾವಣೆ ಆದೇಶ ಹೊರಡಿಸಲಾಗಿದೆ. ಅಲ್ಲದೆ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರ ವರ್ಗಾವಣೆಗೆ ಉಪ ಮುಖ್ಯಮಂತ್ರಿ ಅವರು ಅನುಮೋದಿಸಿದ್ದಾರೆ ಎಂದು ಆದೇಶದಲ್ಲಿಯೇ ಉಲ್ಲೇಖಿಸಲಾಗಿದೆ.