ರಾಜ್ಯ ಬಿಜೆಪಿಯಲ್ಲಿ ತಾರಕಕ್ಕೇರಿದ ಭಿನ್ನಮತ- ಬಣಜಗಳ ನಡುವೆ ಅಖಾಡಕ್ಕಿಳಿದ ಯಡಿಯೂರಪ್ಪ!

Published : Jan 11, 2025, 08:17 AM IST
BS Yediyurappa

ಸಾರಾಂಶ

ರಾಜ್ಯ ಬಿಜೆಪಿಯಲ್ಲಿ ತಾರಕಕ್ಕೇರಿದ ಭಿನ್ನಮತ, ಬಣ ರಾಜಕೀಯದ ನಡುವೆ ಮಾಜಿ ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ಅವರು ಅಖಾಡಕ್ಕೆ ಇಳಿದಿದ್ದು, ಶೀಘ್ರದಲ್ಲೇ ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ. 

ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ತಾರಕಕ್ಕೇರಿದ ಭಿನ್ನಮತ, ಬಣ ರಾಜಕೀಯದ ನಡುವೆ ಮಾಜಿ ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ಅವರು ಅಖಾಡಕ್ಕೆ ಇಳಿದಿದ್ದು, ಶೀಘ್ರದಲ್ಲೇ ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ. ಮುಂದಿನ ವಾರದಿಂದ ಪಕ್ಷದ ಮುಖಂಡರೊಂದಿಗೆ ರಾಜ್ಯ ಪ್ರವಾಸ ಕೈಗೊಳ್ಳುತ್ತೇನೆ ಎಂದು ಅಧಿಕೃತವಾಗಿ ಹೇಳಿದ್ದಾರೆ.

ಶುಕ್ರವಾರ ನಗರದ ಹೋಟೆಲ್‌ವೊಂದರಲ್ಲಿ ಪಕ್ಷದ ಮಾಜಿ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳೊಂದಿಗೆ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವ ದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಬಲವರ್ಧನೆ ಕುರಿತು ಸಮಾಲೋಚನೆ ನಡೆಸಲಾಗಿದೆ. ಮುಂದಿನ ವಾರದಿಂದ ರಾಜ್ಯದ ಪ್ರತಿಯೊಂದು ಜಿಲ್ಲೆಗೆ ಭೇಟಿ ನೀಡಲಾಗುವುದು. ಪ್ರತಿ ದಿನ 2 ಜಿಲ್ಲೆಯಂತೆ ಪ್ರವಾಸ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಾರ್ವಜನಿಕ ಸಭೆ ಇಲ್ಲ:

ಪ್ರವಾಸದ ವೇಳೆ ಸಾರ್ವಜನಿಕ ಸಭೆ ನಡೆಸುವುದಿಲ್ಲ. ಬದಲಿಗೆ ಕಾರ್ಯಕರ್ತರನ್ನು ಸೇರಿಸಿ ಚರ್ಚೆ ನಡೆಸಲಾಗುವುದು. ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆಗೆ ಪಕ್ಷದ ಕಾರ್ಯಕರ್ತರನ್ನು ಸನ್ನದ್ದಗೊಳಿಸುವ ನಿಟ್ಟಿನಲ್ಲಿ ಸಮಾಲೋಚನೆ ನಡೆಸಲಾಗುವುದು ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಯಡಿಯೂರಪ್ಪ, ಮಾಜಿ ಶಾಸಕರ ಸಭೆಯಲ್ಲಿ ಪಕ್ಷದ ಸಂಘಟನೆ ಕುರಿತು ಚರ್ಚೆ ನಡೆಸಲಾಗಿದೆಯೇ ಹೊರತು ಬೇರಾವುದೇ ವಿಷಯ ಸಮಾಲೋಚನೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರು: ಪಕ್ಷದ ಮಾಜಿ ಶಾಸಕರು, ಪರಾಜಿತ ಅಭ್ಯರ್ಥಿಗಳ ಸಭೆ ನಡೆಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪರೋಕ್ಷವಾಗಿ ಪಕ್ಷದ ಭಿನ್ನಮತೀಯರಿಗೆ ಮತ್ತು ವರಿಷ್ಠರಿಗೆ ಸಂದೇಶ ರವಾನಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶುಕ್ರವಾರ ನಗರದ ಹೋಟೆಲ್‌ವೊಂದರಲ್ಲಿ ಕರೆದ ಸಭೆಯಲ್ಲಿ ಸುಮಾರು ನೂರಕ್ಕೂ ಹೆಚ್ಚು ಮಾಜಿ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳು ಪಾಲ್ಗೊಂಡಿದ್ದರು. ಪಕ್ಷದ ಸಂಘಟನೆ ಬಲಪಡಿಸುವ ಹಾಗೂ ಮುಂದೆ ಮುಂದೆ ಬರಬ ಹುದಾದ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆ ಗಳನ್ನು ಎದುರಿಸುವ ಉದ್ದೇಶದಿಂದ ಈ ಸಭೆ ಕರೆಯಲಾಗಿದೆ ಎಂಬಂತೆ ಬಿಂಬಿತವಾದರೂ ಪರೋಕ್ಷವಾಗಿ ಇದು ಶಕ್ತಿ ಪ್ರದರ್ಶನಕ್ಕೂ ವೇದಿಕೆಯಾಗಿ ಪರಿವರ್ತನೆಗೊಂಡಿತು. ಸಭೆಯಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊರತುಪಡಿಸಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ ಭಾಗವಹಿಸಿದರು.

ಜೊತೆಗೆ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು. ಸುಮಾರು 2.5 ಗಂಟೆ ನಡೆದ ಸಭೆಯಲ್ಲಿ ಪ್ರಮುಖ ನಾಯಕರು ಭಾಷಣ ಮಾಡಿದ್ದೇ ಹೆಚ್ಚು. ಬಳಿಕ ಕೆಲ ಮಾಜಿ ಶಾಸಕರು ಮಾತನಾಡಿ ಪ್ರಸಕ್ತ ಬೆಳವಣಿಗೆಗಳ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಪಕ್ಷದಲ್ಲಿನ ಭಿನ್ನಮತ ಚಟುವಟಿಕೆ ಕುರಿತು ಕಳವಳ ವ್ಯಕ್ತಪಡಿಸಿದ ಹಲವರು ಹೈಕಮಾಂಡ್ ಇದಕ್ಕೆ ಕಡಿವಾಣ ಹಾಕಬೇಕು, ಭಿನ್ನಮತೀಯರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮಾತನಾಡಿ, ಪಕ್ಷದಲ್ಲಿನ ಭಿನ್ನಮತ ಚಟುವಟಿಕೆಗಳಿಗೆ ಕಡಿವಾಣ ಹಾಕ ಬೇಕು. ಶಾಸಕ ಯತ್ನಾಳ ನೇತೃತ್ವದಲ್ಲಿ ಹಲವರು ಮನಸೋ ಇಚ್ಛೆ ನಡೆದುಕೊಳ್ಳುತ್ತಿದ್ದಾರೆ. ಇಂಥವರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳದಿದ್ದರೆ ಪಕ್ಷ ಸಂಘಟನೆಗೆ ಧಕ್ಕೆ ಉಂಟಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು ಎನ್ನಲಾಗಿದೆ.

ಮಾಜಿ ಶಾಸಕರ ಅಭಿಪ್ರಾಯಗಳಿಗೆ ಸ್ಪಂದಿಸಿದ ಯಡಿಯೂರಪ್ಪ, ಪಕ್ಷದಲ್ಲಿನ ಕೆಲವರ ಚಟುವಟಿಕೆಗಳ ಬಗ್ಗೆ ವರಿಷ್ಠರು ಗಮನಿಸುತ್ತಿದ್ದಾರೆ. ನಾವೆಲ್ಲರೂ ಮುಂಬರುವ ಸ್ಥಳೀಯಸಂಸ್ಥೆಗಳ ಚುನಾವಣೆಗೆ ಸಜ್ಜಾಗೋಣ ಎಂದು ಕರೆ ನೀಡಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಮೈತ್ರಿ ಬಗ್ಗೆ ಹಾದಿ-ಬೀದಿಯಲ್ಲಿ ಚರ್ಚಿಸೋಲ್ಲ: ಪ್ರೀತಂಗೌಡ
ಜ। ನರವಣೆ ಆತ್ಮಚರಿತ್ರೆ ಬಗ್ಗೆ ರಾಹುಲ್‌ ವರ್ಸಸ್ ಪೆಂಗ್ವಿನ್‌