ಅರಮನೆಯಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ- ಅ.15 ರಿಂದ 24 ರವರೆಗೆ ಅರಮನೆಯಲ್ಲಿ ಖಾಸಗಿ ದರ್ಬಾರ್

KannadaprabhaNewsNetwork |  
Published : Oct 10, 2023, 01:01 AM IST
11 | Kannada Prabha

ಸಾರಾಂಶ

ಅರಮನೆಯಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ

- ದಸರಾ ಖಾಸಗಿ ದರ್ಬಾರ್‌ಗೆ ಸಕರ ಸಿದ್ಧತೆ - 24 ರವರೆಗೆ ಅರಮನೆಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಫೋಟೋ- 9ಎಂವೈಎಸ್11 ಮೈಸೂರು ಅರಮನೆಯ ಖಾಸಗಿ ದರ್ಬಾರ್ ಹಾಲ್ ನಲ್ಲಿ ಜೋಡಿಸಲಾಗಿರುವ ರತ್ನಖಚಿತ ಸಿಂಹಾಸನ. ---- ಕನ್ನಡಪ್ರಭ ವಾರ್ತೆ ಮೈಸೂರು ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಮೈಸೂರು ಅರಮನೆಯ ಖಾಸಗಿ ದರ್ಬಾರ್ ಹಾಲ್ ನಲ್ಲಿ ಸೋಮವಾರ ರತ್ನಖಚಿತ ಸಿಂಹಾಸನವನ್ನು ಸಾಂಪ್ರದಾಯಿಕವಾಗಿ ಜೋಡಿಸಲಾಯಿತು. ಸಂಪ್ರದಾಯದಂತೆ ಮೈಸೂರು ತಾಲೂಕಿನ ಗೆಜ್ಜಗಳ್ಳಿ ಗ್ರಾಮದ ವೀರಶೈವರು ಮಡಿ ಬಟ್ಟೆ ತೊಟ್ಟು ದೇವರಿಗೆ ಕೈಮುಗಿದು, ಸಿಂಹಾಸನವನ್ನು ಜೋಡಿಸಿದರು. ಅ.15 ರಿಂದ 24 ರವರೆಗೆ ಅರಮನೆಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಲಿದ್ದು, ಪ್ರತಿ ದಿನ ಸಂಜೆ ಖಾಸಗಿ ದರ್ಬಾರ್ ನಡೆಯಲಿದೆ. ಈ ಹಿನ್ನೆಲೆಯಲ್ಲಿ ದಸರಾ ಮಹೋತ್ಸವದ ಆರಂಭಕ್ಕೆ ಕೇವಲ 6 ದಿನಗಳಷ್ಟೇ ಬಾಕಿ ಇರುವುದರಿಂದ ಶಾಸ್ತ್ರೋಕ್ತವಾಗಿ ವಿಧಿ ವಿಧಾನದಂತೆ ಸಿಂಹಾಸನ ಜೋಡಿಸಿ ಖಾಸಗಿ ದರ್ಬಾರ್ ಗೆ ಸಿದ್ಧತೆ ಮಾಡಲಾಯಿತು. ಇದುವರೆಗೆ ಅರಮನೆಯ ಸುಪರ್ಧಿನಲ್ಲಿದ್ದ ಸಿಂಹಾಸನವನ್ನು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ಜಿಲ್ಲಾಡಳಿತದ ವಶಕ್ಕೆ ನೀಡಿದರು. ಬಿಗಿ ಭದ್ರತೆಯಲ್ಲಿ ಸ್ಟ್ರಾಂಗ್ ರೂಂನಿಂದ ಹೊರ ತೆಗೆದು ಅರಮನೆ ಪಂಚಾಂಗದಂತೆ ಬೆಳಗ್ಗೆ 10.05 ರಿಂದ 10.35 ರವರೆಗೆ ಸಲ್ಲುವ ಶುಭ ಲಗ್ನದಲ್ಲಿ ಸಿಂಹಾಸನ ಜೋಡಣೆ ಮಾಡಲಾಯಿತು. ಇದಕ್ಕಾಗಿ ಬೆಳಗ್ಗೆ 7 ರಿಂದಲೇ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯ ಜರುಗಿದವು. ಅರಮನೆಯ ನೆಲಮಾಳಿಗೆಯಲ್ಲಿರುವ ಸ್ಟ್ರಾಂಗ್ ರೂಮ್ ತೆರೆದು ಸಿಂಹಾಸನ ಹಾಗೂ ಭದ್ರಾಸನದ ಬಿಡಿ ಭಾಗಗಳನ್ನು ಪ್ರತ್ಯೇಕಿಸಲಾಯಿತು. ಶಸ್ತ್ರಸಜ್ಜಿತ ಪೊಲೀಸರ ಕಣ್ಗಾವಲಿನಲ್ಲಿ ಒಂದೊಂದೆ ಬಿಡಿ ಭಾಗವನ್ನು ದರ್ಬಾರ್ ಹಾಲ್ ಗೆ ತಂದು ಸಿಂಹಾಸನವನ್ನು ಜೋಡಿಸಿ, ಪರದೆ ಬಿಡಲಾಯಿತು. ದರ್ಬಾರ್ ಹಾಲ್ ನಲ್ಲಿ ಸಿಂಹಾಸನ, ಕನ್ನಡಿ ತೊಟ್ಟಿಯಲ್ಲಿ ಭದ್ರಾಸನ ಜೋಡಿಸಲಾಯಿತು. ಅರಮನೆ ಪುರೋಹಿತರ ನೇತೃತ್ವದಲ್ಲಿ ನವಗ್ರಹ ಹೋಮ, ಗಣಪತಿ ಹೋಮ, ಶ್ರೀ ಚಾಮುಂಡಿ ಪೂಜೆ ನಂತರ ಪೂರ್ಣಾಹುತಿ ನೆರವೇರಿಸಲಾಯಿತು. ಅಂತಿಮವಾಗಿ ಶಾಂತಿ ಪೂಜೆ ಮಾಡಲಾಯಿತು. ಬಳಿಕ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳ ಸಮ್ಮುಖದಲ್ಲಿ ಸಿಂಹಾಸನದ ಜೋಡಣೆ ಕಾರ್ಯ ಜರುಗಿತು. ನಂತರ ಪಟ್ಟದ ಕುದುರೆ, ಪಟ್ಟದ ಹಸುವನ್ನು ಕಲ್ಯಾಣಮಂಟಪದ ಸಮೀಪ ಇರುವ ಅಂಗಳಕ್ಕೆ ಕರೆತಂದು ಪೂಜಿ ಸಲ್ಲಿಸಲಾಯಿತು. ಬೆಳಗ್ಗೆ ಶಾಂತಿಹೋಮದೊಂದಿಗೆ ಪೂಜಾ ಕಾರ್ಯಕ್ರಮಗಳನ್ನು ಆರಂಭ ಮಾಡಿ ಕಳಶ ಸ್ಥಾಪನೆ, ಪವಿತ್ರ ಜಲ ಪ್ರೋಕ್ಷಣೆ, ಹೋಮ ಸೇರಿದಂತೆ ಪೂರ್ವ ನಿರ್ಧರಿತ ಮುಹೂರ್ತದಲ್ಲಿ ಸಿಂಹಾಸನ ಜೋಡಣಾ ಕಾರ್ಯ ಸಂಪನ್ನಗೊಳಿಸಲಾಯಿತು. ಅರಮನೆಯಲ್ಲಿ ನೆರವೇರುತ್ತಿದ್ದ ಸಿಂಹಾಸನಾ ಜೋಡಣಾ ಕಾರ್ಯದಿಂದಾಗಿ ಸಾರ್ವಜನಿಕರಿಗೆ ಅರಮನೆಗೆ ಮಧ್ಯಾಹ್ನದವರೆಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಈ ಎಲ್ಲಾ ಕಾರ್ಯಗಳನ್ನು ಪೊಲೀಸರ ಬಿಗಿ ಭದ್ರತೆಯಲ್ಲಿ ಜರುಗಿತು. ಅರಮನೆ ಪ್ರವೇಶಕ್ಕೆ ನಿರ್ಬಂಧ ನವರಾತ್ರಿ ಮೊದಲ ದಿನವಾದ ಅ.15 ರಂದು ರತ್ನಖಚಿತ ಸಿಂಹಾಸನಕ್ಕೆ ಸಿಂಹ ಜೋಡಣಾ ಕಾರ್ಯ ನಡೆದ ನಂತರ ಖಾಸಗಿ ದರ್ಬಾರ್ ನಡೆಯುತ್ತದೆ. ಅಂದು ಮಧ್ಯಾಹ್ನದವರೆಗೆ ಮೈಸೂರು ಅರಮನೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಆಯುಧ ಪೂಜೆ ದಿನವಾದ ಅ.23 ರಂದು ಮಧ್ಯಾಹ್ನದವರೆಗೆ ಹಾಗೂ ವಿಜಯದಶಮಿ ದಿನವಾದ ಅ.24 ರಂದು ದಿನವಿಡೀ ಅರಮನೆಗೆ ಪ್ರವಾಸಿಗರು, ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ದಸರಾ ಮುಗಿದ ಬಳಿಕವೂ ಕೆಲವು ದಿನಗಳು ಸಾರ್ವಜನಿಕ ವೀಕ್ಷಣೆಗೆ ರತ್ನಖಚಿತ ಸಿಂಹಾಸನ ದರ್ಬಾರ್ ಹಾಲ್ ನಲ್ಲಿ ಇರಲಿದ್ದು, ನ.8 ರಂದು ತೆರವು (ವಿಸರ್ಜನೆ) ಮಾಡಲಾಗುತ್ತದೆ. ----- ಬಾಕ್ಸ್... ಖಾಸಗಿ ದರ್ಬಾರ್- ಸಿಂಹಾಸನ ನವರಾತ್ರಿಗೂ ಮುನ್ನ ಅರಮನೆಯ ಭದ್ರತಾ ಕೊಠಡಿಯಲ್ಲಿರಿಸಿದ್ದ ಸಿಂಹಾಸನದ ಬಿಡಿ ಭಾಗಗಳನ್ನು ಹೊರತಂದು ಅದನ್ನು ಜೋಡಿಸಿ ಸಂಪ್ರದಾಯಬದ್ಧ ಪೂಜೆ ಬಳಿಕ ವಿಜಯದಶಮಿಯ ಎಲ್ಲಾ ಕಾರ್ಯಕ್ರಮಗಳನ್ನು ನೆರವೇರಿಸುವುದು ಮೈಸೂರು ಅರಮನೆಯ ರಾಜವಂಶಸ್ಥರ ವಾಡಿಕೆ ಆಗಿದೆ. ಅದರಂತೆ ಖಾಸಗಿ ದರ್ಬಾರ್ ಮೈಸೂರಿನ ರಾಜವಂಶಸ್ಥರ ಪ್ರಮುಖ ಧಾರ್ಮಿಕ ಕಾರ್ಯವಾಗಿದ್ದು, ಅರಮನೆಯ ದರ್ಬಾರ್ ಹಾಲ್ ನಲ್ಲಿ ರತ್ನಖಚಿತ ಸಿಂಹಾಸನದ ಮೇಲೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವಿರಾಜಮಾನರಾಗಿ ಖಾಸಗಿ ದರ್ಬಾರ್ ನಡೆಸಲಿದ್ದಾರೆ. ರತ್ನ ಖಚಿತ ಸಿಂಹಾಸನವನ್ನು 8, ಬೆಳ್ಳಿಯ ಭದ್ರಾಸನವನ್ನು 6 ಬಿಡಿಭಾಗಗಳಾಗಿ ವಿಂಗಡಿಸಲಾಗಿರುತ್ತದೆ. ಸಿಂಹಾಸನದ ಬಿಡಿಭಾಗ, ಭದ್ರಾಸನ ಜೋಡಿಸಿದ ಬಳಿಕ, ಸಿಂಹಾಸನಕ್ಕೆ ಉಮಾಪಕ್ಷಿ, ಮುತ್ತಿನ ಜಾಲರಿ, ಮಕರ ತೋರಣ, 25 ಜೊತೆ ನಗಗಳು, 1 ಜೊತೆ ಚಿನ್ನದ ಕುದುರೆ, ತುರಾಯಿ ಜೋಡಿ, 1 ಜೊತೆ ಚಿನ್ನದ ಕಳಶ ಜೋಡಿಸಿ ಅಲಂಕರಿಸಲಾಗಿದೆ. -

PREV

Recommended Stories

ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಅತ್ಯಂತ ಮನಮೋಹಕ ಬೈಕ್‌ ರಾಯಲ್‌ ಎನ್‌ಫೀಲ್ಡ್‌ ಕ್ಲಾಸಿಕ್‌ 650