ಹಾಸನದ ಸ್ನಾತಕೋತ್ತರ ಕಾಲೇಜಿನಲ್ಲಿ ಸಹಪಠ್ಯ ಚಟುವಟಿಕೆ ಕಾರ್ಯಕ್ರಮ । ಮಕ್ಕಳಿಗೆ ಸಲಹೆಯಿತ್ತ ಶಾಸಕ ಸ್ವರೂಪ್
ಪ್ರಸ್ತುತ ಎಲ್ಲ ಕ್ಷೇತ್ರಗಳಲ್ಲಿಯೂ ಸ್ಪರ್ಧೆಯಿದೆ. ಆದರೆ ಗುರಿ ಇಟ್ಟುಕೊಂಡು ಕಾರ್ಯ ಸಾಧಿಸಿದರೆ ಎಲ್ಲವನ್ನೂ ಸಾಧಿಸಬಹುದು ಎಂದು ಶಾಸಕ ಎಚ್.ಪಿ. ಸ್ವರೂಪ್ ಅಭಿಪ್ರಾಯಪಟ್ಟರು.
ನಗರದ ಸರ್ಕಾರಿ ಕಲಾ ವಾಣಿಜ್ಯ ಮತ್ತು ಸ್ನಾತಕೋತ್ತರ ಕಾಲೇಜು - ಸ್ವಾಯತ ಕಾಲೇಜಿನಲ್ಲಿ ಆಯೋಜಿಸಿದ್ದ ೨೦೨೩- ೨೪ ನೇ ಸಾಲಿನ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಲೇಜು ಜೀವನದಲ್ಲಿ ವಿದ್ಯಾರ್ಥಿಗಳು ಚಂಚಲ ಮನಸ್ಥಿತಿಯನ್ನಿಟ್ಟುಕೊಂಡಿರುವುದು ಸಹಜ. ಆದರೆ ಮುಂದಿನ ಜೀವನದ ಶೈಕ್ಷಣಿಕ ಅಭಿವೃದ್ಧಿಯೂ ಮುಖ್ಯವಾಗುತ್ತದೆ ಎಂಬುದನ್ನು ಮರೆಯಬಾರದು. ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಶಾಸಕರಾದ ರೇವಣ್ಣ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ಕೊಡುಗೆ ಸ್ಮರಿಸಿದ ಅವರು, ಮಾಜಿ ಶಾಸಕ ಎಚ್.ಎಸ್. ಪ್ರಕಾಶ್ ಅವರು ಜಿಲ್ಲಾ ಕಾಲೇಜುಗಳ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿದ್ದಾಗ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಕಾಯುತ್ತಿದ್ದರು ಎಂದು ತಿಳಿಸಿದರಲ್ಲದೇ ಕಾಲೇಜಿನ ಯಾವುದೇ ಸಮಸ್ಯೆಗಳಿದ್ದರೂ ಶೀಘ್ರವಾಗಿ ಬಗೆಹರಿಸುವುದಾಗಿ ಭರವಸೆ ನೀಡಿದರು.ಶೈಕ್ಷಣಿಕ ಡೀನ್ ಪ್ರೊ. ರಾಜು ಡಿ.ಎಸ್. ಕಾಲೇಜಿನ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡುವ ಮೂಲಕ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಪತ್ರಾಂಕಿತ ವ್ಯವಸ್ಥಾಪಕರಾದ ಕೆ.ಟಿ.ಸತ್ಯಮೂರ್ತಿ ಮಾತನಾಡಿ, ಕಾಲೇಜಿನಲ್ಲಿರುವ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಿಕೊಡುವಂತೆ ಶಾಸಕರಲ್ಲಿ ಮನವಿ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಎಂ.ಬಿ. ಇರ್ಷಾದ್, ವಿದ್ಯಾರ್ಥಿಗಳು ವಿದ್ಯೆಯನ್ನು ಅರ್ಜನೆ ಮಾಡಿಕೊಳ್ಳುವುದರ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಳ್ಳಬೇಕು. ಕಲಾ ಕಾಲೇಜಿನಲ್ಲಿ ಓದಿದ ಎಷ್ಟೋ ಜನರು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನಹರಿಸಿ ಕಾಲೇಜಿಗೆ ಕೀರ್ತಿ ತರಬೇಕಾಗಿ ತಿಳಿಸಿದರು.ಸಮಾರಂಭದಲ್ಲಿ ಸಾಂಸ್ಕೃತಿಕ ವೇದಿಕೆ ಸಂಚಾಲಕ ಶ್ರೀನಿವಾಸ್ ಬಿ.ಎಚ್ ಕಾಯಕ್ರಮದಲ್ಲಿ ಎಲ್ಲರನ್ನು ಸ್ವಾಗತಿಸಿದರು. ಯುವರೆಡ್ ಕ್ರಾಸ್ ಘಟಕದ ಸಂಚಾಲಕ ಎಚ್.ಡಿ. ದೇವರಾಜ್ ವಂದಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಘಟಕ-೧ ಸಂಚಾಲಕ ಪ್ರೊ. ಪಾರ್ಥೇಶ್ ಕೆ.ವಿ. ನಿರೂಪಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಘಟಕ-೨ ಸಂಚಾಲಕ ಪವನ್ ಜಿ.ಕೆ., ಸ್ಕೌಟ್ಸ್ ಅಂಡ್ ಗೈಡ್ಸ್ ಘಟಕ ಮತ್ತು ರೇಂಜರ್ಸ್ ಮತ್ತು ರೋವರ್ಸ್ ಘಟಕದ ಸಂಚಾಲಕ ಡಾ. ಸುರೇಶ್ ಮತ್ತು ಪ್ರೊ. ಪ್ರಮೀಳಾ, ಎನ್.ಸಿ.ಸಿ. ಅಧಿಕಾರಿ ಕ್ಯಾಪ್ಟನ್ ಶ್ರೀನಿವಾಸ್ ಎನ್.ವಿ., ಸಿಡಿಸ ಸಮಿತಿ ಸದಸ್ಯರಾದ ವಿಶ್ವನಾಥ್ ಚವಾಣ್, ಚಂದ್ರೇಗೌಡ ಹಾಜರಿದ್ದು, ವಿದ್ಯಾರ್ಥಿಗಳಾದ ಮನನ ಮತ್ತು ತಂಡದವರು ಪ್ರಾರ್ಥನೆ ಮಾಡಿದರು. ವಿವಿಧ ವಿಭಾಗಗಳ ಮುಖ್ಯಸ್ಥರು ,ಅಧ್ಯಾಪಕರು, ಉಪನ್ಯಾಸಕರು, ಆಡಳಿತ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.