ಬೆಂಗಳೂರು : ಮಾ.1ರಿಂದ 8ರವರೆಗೂ ನಗರದಲ್ಲಿ ‘ಸರ್ವ ಜನಾಂಗದ ಶಾಂತಿಯ ತೋಟ’ ವಿಷಯ ಆಧರಿಸಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 60ಕ್ಕೂ ಅಧಿಕ ದೇಶಗಳ 200 ಚಲನಚಿತ್ರಗಳು 13 ಪರದೆಗಳಲ್ಲಿ ಪ್ರದರ್ಶನಗೊಳ್ಳಲಿವೆ. ಒರಾಯನ್ ಮಾಲ್ನಲ್ಲಿ 11 ಪರದೆ, ಸುಚಿತ್ರಾ ಫಿಲಂ ಸೊಸೈಟಿ ಹಾಗೂ ಚಾಮರಾಜಪೇಟೆಯ ಡಾ.ಅಂಬರೀಷ್ ಆಡಿಟೋರಿಯಂನ ತಲಾ ಒಂದು ಪರದೆಯಲ್ಲಿ ಚಿತ್ರ ಪ್ರದರ್ಶನಗೊಳ್ಳಲಿವೆ. ಕನ್ನಡ ಸೇರಿದಂತೆ ಇತರೆ ಭಾಷೆಗಳ 400 ಚಿತ್ರಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ಕಳೆದ ವರ್ಷ ‘ಸಾಮಾಜಿಕ ನ್ಯಾಯ’ ವಿಷಯ ಆಧರಿಸಿ ಚಲನಚಿತ್ರೋತ್ಸವ ಆಯೋಜಿಸಲಾಗಿತ್ತು. ಈ ಸಲ ‘ಸರ್ವ ಜನಾಂಗದ ಶಾಂತಿಯ ತೋಟ’ ವಿಷಯವನ್ನು ಆಯ್ಕೆ ಮಾಡಲಾಗಿದೆ. ನಗರದ ಜನತೆ ಸೇರಿದಂತೆ ರಾಜ್ಯದ ಎಲ್ಲರಿಗೂ ವಿವಿಧ ದೇಶಗಳ ನಾಗರಿಕತೆಯನ್ನು ಕಾಣಲು ಅವಕಾಶ ಲಭಿಸಲಿದೆ. ಸಿನಿಮಾಸಕ್ತರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಸಮಯ ಸಿಕ್ಕರೆ ನಾನೂ ಸಿನಿಮಾಗಳನ್ನು ವೀಕ್ಷಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.
9 ಕೋಟಿ ರು. ಅನುದಾನ:
ಚಲನಚಿತ್ರೋತ್ಸವಕ್ಕೆ ಕಳೆದ ಬಾರಿ 7 ಕೋಟಿ ರು. ವೆಚ್ಚವಾಗಿತ್ತು. ಈ ವರ್ಷ ಸಮಿತಿಯು 12 ಕೋಟಿ ರುಪಾಯಿಗೆ ಬೇಡಿಕೆ ಇಟ್ಟಿದ್ದು 9 ಕೋಟಿ ರು. ವೆಚ್ಚದಲ್ಲಿ ಚಲನಚಿತ್ರೋತ್ಸವ ನಡೆಸಲು ತೀರ್ಮಾನಿಸಲಾಗಿದೆ. ಮಾ.1ರಂದು ತಾವು ಚಿತ್ರೋತ್ಸವ ಉದ್ಘಾಟಿಸಲಿದ್ದು, 8 ರಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ಪಾಲ್ಗೊಳ್ಳಲಿದ್ದಾರೆ. ಸಿನಿಮೋತ್ಸವದ ರಾಯಭಾರಿಯನ್ನು ಸಮಿತಿ ತೀರ್ಮಾನಿಸಲಿದೆ ಎಂದು ವಿವರಿಸಿದರು.
ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ, ನಟರಾದ ಡಾಲಿ ಧನಂಜಯ್, ನೀನಾಸಂ ಸತೀಶ್, ನಟಿ ಭಾವನಾ ರಾಮಣ್ಣ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಚಿತ್ರನಗರಿಗೆ ಜಮೀನು ಹಸ್ತಾಂತರ
ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಸರ್ಕಾರ ಈಗಾಗಲೇ 110 ಎಕರೆ ಜಮೀನನ್ನು ಹಸ್ತಾಂತರಿಸಿದೆ. ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಕನ್ನಡ ಚಲನಚಿತ್ರಗಳ ಉತ್ತೇಜನಕ್ಕೆ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಾ ಬಂದಿದೆ. ಕನ್ನಡ ಚಲನಚಿತ್ರಗಳಿಗೆ ಸಹಾಯಧನ ನೀಡಲು ಆಯ್ಕೆ ಸಮಿತಿ ರಚಿಸಲಾಗಿದ್ದು, ಸಮಿತಿ ಚಿತ್ರಗಳನ್ನು ವೀಕ್ಷಿಸುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.