ನವದೆಹಲಿ: ಭಯೋತ್ಪಾದಕ ಸಂಘಟನೆಗಳಿಗೆ ವಿದೇಶಗಳಿಂದ ಹಣ ರವಾನೆ ಪ್ರಕರಣಗಳು ಹೆಚ್ಚಾದ ಬೆನ್ನಲ್ಲೇ, ಇಂಥ ಹಣದ ಹರಿವಿಗೆ ಕಡಿವಾಣ ಹಾಕುವ ಕ್ರಮವೊಂದನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. 50 ಸಾವಿರ ರು. ಮೀರಿದ ಎಲ್ಲಾ ಅಂತಾರಾಷ್ಟ್ರೀಯ ಹಣಕಾಸು ವ್ಯವಹಾರದ ಮೇಲೆ ಭಾರಿ ನಿಗಾ ವಹಿಸಲು ಸಂಬಂಧಪಟ್ಟ ಸಂಸ್ಥೆಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಈ ಕುರಿತು ಮಂಗಳವಾರ ಅಧಿಸೂಚನೆ ಹೊರಡಿಸಿದೆ. ಇದಕ್ಕಾಗಿ 2005ರ ಹಣ ವರ್ಗಾವಣೆ (ದಾಖಲೆಗಳ ನಿರ್ವಹಣೆ) ನಿಯಮಗಳಿಗೆ ತಿದ್ದುಪಡಿ ತಂದಿದ್ದು, 50 ಸಾವಿರ ರು. ಮೀರಿದ ಅಂತಾರಾಷ್ಟ್ರೀಯ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದಂತೆ ಕಳುಹಿಸಿದವರು ಮತ್ತು ಸ್ವೀಕರಿಸಿದವರ ಸಂಪೂರ್ಣ ಮಾಹಿತಿ ಸಂಗ್ರಹಿಸುವಂತೆ ಮಂಗಳವಾರ ಅಧಿಸೂಚನೆ ಹೊರಡಿಸಿದೆ. ‘ಪ್ರತಿ ಘಟಕವೂ ತನ್ನ ಗ್ರಾಹಕರ ಸಂಪೂರ್ಣ ಮಾಹಿತಿಯನ್ನು ಸಂಗ್ರಹ ಮಾಡಬೇಕು. ಅವರ ವ್ಯವಹಾರಗಳ ಕುರಿತಾಗಿಯೂ ಮಾಹಿತಿ ಸಂಗ್ರಹಿಸಬೇಕು’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.