ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ಅಳವಡಿಸುವವರ ವಿರುದ್ಧ ಎಫ್ಐಆರ್ ದಾಖಲಿಸುವ ಜೊತೆಗೆ ತೆರವುಗೊಳಿಸುವ ವೇಳೆ ವ್ಯಯವಾಗುವ ವೆಚ್ಚವನ್ನು ವಸೂಲಿ ಮಾಡಲಾಗುವುದು ಮತ್ತು ದುಪ್ಪಟ್ಟು ದಂಡ ವಿಧಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಸಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಸೋಮವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಅನಧಿಕೃತ ಜಾಹೀರಾತುಗಳನ್ನು ಅಳವಡಿಸುವ ವಿಚಾರವಾಗಿ ಹೈಕೋರ್ಟ್, ಉಪಮುಖ್ಯಮಂತ್ರಿ ಅವರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರು. ಆದರೂ ಇತ್ತೀಚಿನ ದಿನಗಳಲ್ಲಿ ಉಲ್ಲಂಘನೆಗಳು ಹೆಚ್ಚಾಗಿವೆ. ಅದನ್ನು ಅಧಿಕಾರಿಗಳು ನಿಯಂತ್ರಿಸಬೇಕು ಎಂದು ತಿಳಿಸಿದರು.
ಹೊಸದಾಗಿ ಸುತ್ತೋಲೆ:
ನಗರದಲ್ಲಿ ಅನಧಿಕೃತ ಜಾಹೀರಾತು ಅಳವಡಿಸುವವರ ಮೇಲೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಹೊಸದಾಗಿ ಸುತ್ತೋಲೆ ಹೊರಡಿಸಲಾಗುತ್ತಿದೆ. ವಾರ್ಡ್ ವ್ಯಾಪ್ತಿಯಲ್ಲಿ ಬರುವ ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಹಾಯಕ ಎಂಜಿನಿಯರ್ ಹಾಗೂ ಕಿರಿಯ ಎಂಜಿನಿಯರ್ಗೆ ಅನಧಿಕೃತ ಜಾಹೀರಾತುಗಳನ್ನು ತೆರವುಗೊಳಿಸುವ ಅಧಿಕಾರವನ್ನು ನೀಡಿ ಎಫ್.ಐ.ಆರ್ ದಾಖಲಿಸಿ, ತೆರವುಗೊಳಿಸಲು ವ್ಯಯವಾಗುವ ವೆಚ್ಚವನ್ನು ವಸೂಲಿ ಮಾಡುವುದರ ಜೊತೆಗೆ ದುಪ್ಪಟ್ಟು ದಂಡ ವಿಧಿಸುವ ಜವಾಬ್ದಾರಿಯನ್ನು ನೀಡಲಾಗುವುದು ಎಂದು ತಿಳಿಸಿದರು.
ಮಳೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ:
ರಾಜಕಾಲುವೆಗಳಲ್ಲಿ ವಾರ್ಷಿಕ ನಿರ್ವಹಣೆ ಅಡಿ ಸ್ವಚ್ಛತೆ ಮಾಡುವ ಕಾರ್ಯವನ್ನು ಸಕ್ರಿಯವಾಗಿ ಮಾಡಿ ಹೂಳನ್ನು ತೆಗೆಸಬೇಕು. ವಾರ್ಡ್ ರಸ್ತೆ ಹಾಗೂ ಪ್ರಮುಖ ರಸ್ತೆಗಳಲ್ಲಿ ಬರುವ ಸೈಡ್ ಡ್ರೈನ್ಗಳನ್ನು ಹೂಳೆತ್ತುವ ಕೆಲಸ ಮಾಡಬೇಕು. ಮಳೆಗಾಲ ಪ್ರಾರಂಭಕ್ಕೂ ಮುಂಚಿತವಾಗಿ ಆದ್ಯತೆ ಮೇರೆಗೆ ಸ್ವಚ್ಛತಾ ಕಾರ್ಯ ನಡೆಸಿ ಎಲ್ಲಿಯೂ ಸಮಸ್ಯೆಯಾಗದಂತೆ ಕ್ರಮ ವಹಿಸಲು ಗಿರಿನಾಥ್ ಸೂಚಿಸಿದರು.
ರಸ್ತೆ ಗುಂಡಿಗಳನ್ನು ಮುಚ್ಚಿ:
ಬಿಬಿಎಂಪಿ ವ್ಯಾಪ್ತಿಯ ರಸ್ತೆ ಗುಂಡಿಗಳನ್ನು ಕೂಡ ಮುಚ್ಚಬೇಕಿದ್ದು, ಆಯಾ ವಲಯಗಳಲ್ಲಿ ರಸ್ತೆಗುಂಡಿಗಳನ್ನು ಗುರುತಿಸಿ ಕೂಡಲೇ ಮುಚ್ಚುವ ಕಾರ್ಯ ಮಾಡಲು ಸೂಚಿಸಿದರು.
ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಸುರಳ್ಕರ್ ವಿಕಾಸ್ ಕಿಶೋರ್, ಡಾ. ಕೆ. ಹರೀಶ್ ಕುಮಾರ್, ಅವಿನಾಶ್ ಮೆನನ್ ರಾಜೇಂದ್ರನ್, ವಲಯ ಆಯುಕ್ತರಾದ ಸತೀಶ್ ಉಪಸ್ಥಿತರಿದ್ದರು.