- ಮಾಜಿ ಸಚಿವ ಜಿ.ಟಿ. ದೇವೇಗೌಡ ಅಭಿಮತ
ಕನ್ನಡಪ್ರಭ ವಾರ್ತೆ ಮೈಸೂರು
ಸಂಸತ್ತಿನ ಪ್ರೇಕ್ಷಕರ ಗ್ಯಾಲರಿಯಿಂದ ಜಿಗಿದ ಯುವಕರ ಮೇಲೆ ಮತ್ತು ಭದ್ರತಾ ಲೋಪ ಎಸಗಿದವರ ಮೇಲೆ ಕ್ರಮ ಕೈಗೊಳ್ಳಬೇಕೆ ಹೊರತು, ಪಾಸ್ ವಿತರಣೆ ಮಾಡಿದ್ದನ್ನೇ ಮುಂದಿಟ್ಟುಕೊಂಡು ಸಂಸದ ಪ್ರತಾಪ್ ಸಿಂಹ ರಾಜೀನಾಮೆ ಕೇಳುವುದು ಶೋಭೆಯಲ್ಲ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷರೂ ಆದ ಶಾಸಕ ಜಿ.ಟಿ. ದೇವೇಗೌಡ ಹೇಳಿದರು.ಭಾನುವಾರ ಸುದ್ದಿಗಾರರೊಡನೆ ಮಾತನಾಡಿದ ಅವರು, ಸಂಸತ್ ಭವನದಲ್ಲಿ ಭದ್ರತಾ ಲೋಪ ಆಗಿರುವುದು ನಿಜ. ಭದ್ರತಾ ಲೋಪ ಎಸಗಿರುವ ಅಧಿಕಾರಿಗಳಿಗೆ ಶಿಕ್ಷೆ ಆಗಬೇಕು. ಸಂಸತ್ ಭವನ ಪ್ರವೇಶ ಮಾಡಿ ಪ್ರೇಕ್ಷಕರ ಗ್ಯಾಲರಿಯಿಂದ ಓಡಿಬಂದು ದಾಂಧಲೆ ನಡೆಸಿರುವ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ಆಗಬೇಕು. ಭದ್ರತಾ ಲೋಪ ಎಸಗಿರುವ ಅಧಿಕಾರಿಗಳ ಮೇಲೂ ಕ್ರಮಕೈಗೊಳ್ಳಬೇಕು. ಅದನ್ನು ಬಿಟ್ಟು ಸಂಸದರನ್ನು ಗುರಿಯಾಗಿಸಿಕೊಂಡು ಮಾತನಾಡುವುದು ರಾಜಕೀಯ ಪ್ರೇರಿತ ಎಂದು ಹೇಳಿದರು.
ಶಾಸಕರು, ಸಂಸದರು ತಮ್ಮ ಕ್ಷೇತ್ರದ ಮತದಾರರಿಗೆ ಅಧಿವೇಶನ ನೋಡುವುದಕ್ಕೆ ಪಾಸ್ ಕೊಡುತ್ತಾರೆ. ಕೆಲವು ಸಂದರ್ಭದಲ್ಲಿ ಮುಖಂಡರು, ಕಾರ್ಯಕರ್ತರೂ ಕೇಳುತ್ತಾರೆ. ಕ್ಷೇತ್ರದ ಮತದಾರರು ಪಾಸ್ ಕೇಳಿದಾಗ ನಾವು ಕೊಡಲೇಬೇಕು ಎಂದು ಅವರು ಹೇಳಿದರು.
ಶಾಸಕ ಪ್ರಸಾದ್ ಅಬ್ಬಯ್ಯ ಅವರು ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವಂತೆ ಹೇಳಿರುವುದು ಸರಿಯಲ್ಲ. ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರೇ ಅಂತಿಮ. ಮೈಸೂರು ಕಟ್ಟಿ ಬೆಳೆಸಿ, ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಪ್ರಸಾದ್ ಅಬ್ಬಯ್ಯ ತಮ್ಮ ವೈಯಕ್ತಿ ಹೇಳಿಕೆಯನ್ನಷ್ಟೇ ನೀಡಿದ್ದಾರೆ. ಆ ಹೇಳಿಕೆಗೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಶಾಸಕರು ಬೆಂಬಲ ಸೂಚಿಸಿಲ್ಲ. ಸರ್ಕಾರ ಕೂಡ ಇದರ ಬಗ್ಗೆ ಪ್ರಸ್ತಾವನೆ ಇಟ್ಟಿಲ್ಲ ಎಂದು ಅವರು ತಿರುಗೇಟು ನೀಡಿದರು.