ಶ್ರೀರಂಗಪಟ್ಟಣದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ । ಸಮಾನತೆ, ಸಮಾನ ಕಾನೂನು ರಕ್ಷಣೆ, ಶೋಷಣೆ ರಹಿತ ಆರೋಗ್ಯ ಪ್ರತಿಯೊಬ್ಬರ ಹಕ್ಕು
ಸಮಾನತೆ, ಸಮಾನ ಕಾನೂನು ರಕ್ಷಣೆ, ಶೋಷಣೆ ರಹಿತ ಆರೋಗ್ಯ ಪಡೆಯುವುದು ಪ್ರತಿಯೊಬ್ಬರ ಹಕ್ಕಾಗಿದೆ ಎಂದು ಅಪರ ಹಿರಿಯ ಸಿವಿಲ್ ನ್ಯಾಯಾಧೀಶ ಎಚ್. ಮಹದೇವಪ್ಪ ಹೇಳಿದರು.
ಪಟ್ಟಣದ ಜ್ಯೋತಿನಿವಾಸ್ ಶಾಲೆಯಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಆಡಳಿತ, ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.1948ರ ಡಿ.10 ರಂದು ವಿಶ್ವಸಂಸ್ಥೆ ಸಭೆಯಲ್ಲಿ ತೀರ್ಮಾನವಾಗಿ ಅಂದಿನಿಂದ ಇಲ್ಲಿವರೆಗೆ 75 ವರ್ಷಗಳು ಕಳೆದಿವೆ. ಮಾನವ ಹಕ್ಕುಗಳಲ್ಲಿ 14 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯ ಶಿಕ್ಷಣ ನೀಡಬೇಕು. ವೈಚಾರಿಕ ಸ್ವಾತಂತ್ರ್ಯ, ಒಳ್ಳೆಯ ಆಹಾರ, ಒಳ್ಳೆಯ ಪರಿಸರದಲ್ಲಿ ಬದುಕುವುದು, ತಮ್ಮ ಆಯ್ಕೆ ವೃತ್ತಿ, ಕಲಿಕೆ ಹಕ್ಕು, ಭಾರತದ ಮಾನವ ಹಕ್ಕುಗಳ ಪರಿಧಿ ವ್ಯಾಪಕ ಸ್ವರೂಪದಲ್ಲಿದೆ. ಅದು ನಾಗರಿಕ, ರಾಜಕೀಯ, ಸಾಂಸ್ಕೃತಿಕ ಮತ್ತು ಆರ್ಥಿಕ ಹಕ್ಕುಗಳನ್ನು ಒಳಗೊಂಡಿದೆ ಎಂದರು.
ಪ್ರತಿಯೊಬ್ಬ ಮಾನವನ ಹಕ್ಕುಗಳನ್ನು ರಕ್ಷಿಸುವುದು ರಾಜ್ಯದ ಮತ್ತು ಇತರ ಎಲ್ಲಾ ಸಂಸ್ಥೆಗಳ ಆದ್ಯ ಕರ್ತವ್ಯ. ಯಾವುದೇ ಕಚೇರಿ ಅಥವಾ ಸಂಸ್ಥೆಯಿಂದಾಗಲಿ ಮಾನವ ಹಕ್ಕುಗಳ ಉಲ್ಲಂಘನೆಯಾದಲ್ಲಿ ಅಥವಾ ಮಾನವ ಹಕ್ಕುಗಳ ರಕ್ಷಣೆ ಮಾಡಲು ವಿಫಲವಾಗಿರುವ ಸಂದರ್ಭಗಳಲ್ಲಿ ಅವರ ಪರವಾಗಿ ಕುಂದು ಕೊರತೆಗಳನ್ನು ಪರಿಹರಿಸಲು, ನ್ಯಾಯ ದೊರಕಿಸಿ ಕೊಡುವುದೇ ಮಾನವ ಹಕ್ಕುಗಳಾಗಿದೆ ಎಂದರು.
ಶ್ರೀರಂಗಪಟ್ಟಣದ ಜ್ಯೋತಿ ನಿವಾಸ್ ಶಾಲೆಯಲ್ಲಿ ನಡೆದ ಕಾನೂನು ಅರಿವು ಕಾರ್ಯಕ್ರಮವನ್ನು ಅಪರ ಹಿರಿಯ ಸಿವಿಲ್ ನ್ಯಾಯಾಧೀಶ ಎಚ್. ಮಹದೇವಪ್ಪ ಉದ್ಘಾಟಿಸಿದರು.