ದೀಪಾವಳಿ ಜಾತ್ರೆಯಲ್ಲಿ ಸೇರಿದ್ದ ಲಕ್ಷಾಂತರ ಭಕ್ತವರ್ಗ । ನೋಡುಗರ ಗಮನ ಸೆಳೆದ ಬಿಳಿಯಾನೆ, ಗುರುಬ್ರಹ್ಮೋತ್ಸವ
ಕನ್ನಡಪ್ರಭ ವಾರ್ತೆ ಹನೂರುಮಲೆ ಮಹದೇಶ್ವರ ಬೆಟ್ಟದಲ್ಲಿ ಬೆಳಕಿನ ಹಬ್ಬ ದೀಪಾವಳಿ ನಿಮಿತ್ತ ಸ್ವಾಮಿಯ ಮಹಾರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಂಗಳವಾರ ವಿಜೃಂಭಣೆಯಿಂದ ಜರುಗಿತು.
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕಳೆದ ಐದು ದಿನಗಳಿಂದ ನಡೆಯುತ್ತಿರುವ ದೀಪಾವಳಿ ಹಬ್ಬದ ಪ್ರಯುಕ್ತ ಹಲವು ವಿಶೇಷತೆಗಳೊಂದಿಗೆ ಮಂಗಳವಾರ ಬೆಳಗ್ಗೆ 8.50 ರಿಂದ 9.10 ರವರೆಗೆ ಸಾಲೂರು ಬೃಹತ್ ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿ ನೇತೃತ್ವದಲ್ಲಿ ಮಹಾರಥೋತ್ಸವವು ವಿಜೃಂಭಣೆಯಿಂದ ಜರುಗಿತು.ರಥೋತ್ಸವ ವಿಶೇಷತೆ:
ರಥೋತ್ಸವಕ್ಕೂ ಮುನ್ನ ಬೆಳಗ್ಗೆ 7 ಗಂಟೆಗೆ ಕೆಂಪು ಅನ್ನ ತಯಾರಿಸಿ(ಬಲಿ ಅನ್ನ ) ಮಲೆ ಮಹದೇಶ್ವರ ಉತ್ಸವ ಮೂರ್ತಿಗೆ ಪೂಜಿಸಿ ನಂತರ ಬೇಡಗಂಪಣ ಸ್ವಾಮಿಗಳ ನೇತೃತ್ವದಲ್ಲಿ ರಥಕ್ಕೆ ಪೂಜೆ ಸಲ್ಲಿಸಲಾಯಿತು. ರಥದ ಚಕ್ರಗಳಿಗೆ ಬಲಿ ಅನ್ನ ಇಟ್ಟು, ಮಹಾ ಮಂಗಳಾರತಿ, ಬೆಲ್ಲದ ಆರತಿ ನಂತರ ಶ್ರೀಗಳು ಬೂದುಗುಂಬಳಕಾಯಿ ಹಾಗೂ ತೆಂಗಿನಕಾಯಿ ಒಡೆಯುವ ಮೂಲಕ ಮಹಾರಥೋತ್ಸವಕ್ಕೆ ಚಾಲನೆ ನೀಡಿದರು.ಬಿಳಿ ಆನೆ ಉತ್ಸವ:
ಮಹಾ ರಥೋತ್ಸವ ನಂತರ ಪಾರ್ವತಿ ಪರಮೇಶ್ವರರ ಉತ್ಸವ ಮೂರ್ತಿಯನ್ನು ಬಿಳಿ ಆನೆಯ ಮೇಲೆ ಪ್ರತಿಷ್ಠಾಪಿಸಿ ದೇವಾಲಯದ ಸುತ್ತಲೂ ವಾದ್ಯಗಳೊಂದಿಗೆ ಪ್ರದಕ್ಷಣೆ ಹಾಕಿ, ಮಹಾಮಂಗಳಾರತಿ ಪೂಜೆಯ ಮೂಲಕ ಬಿಳಿ ಆನೆ ಉತ್ಸವ ನಡೆಸಲಾಯಿತು.ಗುರು ಬ್ರಹ್ಮೋತ್ಸವ:
ಮಲೆ ಮಹದೇಶ್ವರ ಉತ್ಸವಮೂರ್ತಿಗೆ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಟ್ಯಾಕ್ಟರ್ ನಲ್ಲಿ ಪಲ್ಲಕ್ಕಿಯನ್ನಿಟ್ಟು ಗುರು ಬ್ರಹ್ಮೋತ್ಸವ ಉತ್ಸವ ಮೂರ್ತಿಯನ್ನು ವಾದ್ಯಗಳ ಜೊತೆ ದೇವಾಲಯದ ಸುತ್ತಲೂ ಪ್ರದಕ್ಷಿಣೆ ಹಾಕಲಾಯಿತು.ಹಬ್ಬಕ್ಕೆ ಮೆರಗು ತಂದ ದೀಪಾಲಂಕಾರ:
ಮಲೆ ಮಹದೇಶ್ವರ ಬೆಟ್ಟದಲ್ಲಿ ಕಳೆದ ಐದು ದಿನಗಳಿಂದ ದೀಪಾವಳಿ ಜಾತ್ರೆ ಮಹೋತ್ಸವದ ಅಂಗವಾಗಿ ವಿವಿಧ ಬಣ್ಣಗಳಿಂದ ಕೂಡಿರುವ ವಿದ್ಯುತ್ ದೀಪಾಲಂಕಾರ ನೋಡುಗರನ್ನು ಆಕರ್ಷಿಸಿತ್ತು.ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ನಡೆದ ಮಹಾರಥೋತ್ಸವಕ್ಕೆ ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಪಾಲ್ಗೊಂಡಿದ್ದರು.
ದಾಸೋಹ ವ್ಯವಸ್ಥೆ: ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಮಾದಪ್ಪನ ಭಕ್ತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಶೇಷ ದಾಸೋಹ ವ್ಯವಸ್ಥೆ ಕಲ್ಪಿಸಿದೆ. ಜೊತೆಗೆ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಗೂ ದಾಸೋಹ ವ್ಯವಸ್ಥೆಯನ್ನು ಪ್ರಾಧಿಕಾರದ ವತಿಯಿಂದ ಕುಡಿಯುವ ನೀರು, ಶೌಚಾಲಯಗಳ ವ್ಯವಸ್ಥೆ ಹಾಗೂ ಪೊಲೀಸ್ ಬಂದ ಬಸ್ತ್ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಸರಸ್ವತಿ, ಉಪ ಕಾರ್ಯದರ್ಶಿ ಚಂದ್ರಶೇಖರ್, ಅಧಿಕಾರಿ ವರ್ಗ ಹಾಗೂ ಬೇಡಗಂಪಣರ ಅರ್ಚಕರ ತಂಡ ಹಾಗೂಅಪಾರ ಭಕ್ತವರ್ಗ ವಿಶೇಷ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.
-------15ಸಿಎಚ್ಎನ್12
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ವಾಮಿಯ ಮಹಾರಥೋತ್ಸವವು ಅಪಾರ ಭಕ್ತರ ಸಮ್ಮುಖದಲ್ಲಿ ನಡೆಯಿತು.