ವಾಲ್ಮೀಕಿ ನಿಗಮದ ಮಾಜಿ ಎಂಡಿ ಬಳಿ 3.6 ಕೋಟಿ ಜಪ್ತಿ

| Published : Jun 14 2024, 06:19 AM IST / Updated: Jun 14 2024, 06:20 AM IST

Indian Money

ಸಾರಾಂಶ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ  ಮಾಜಿ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ.ಪದ್ಮನಾಭನ ಬಳಿ 3.62 ಕೋಟಿ ರು. ನಗದು ಹಣ ಜಪ್ತಿ ಮಾಡಿದ್ದಾರೆ.

ಬೆಂಗಳೂರು :  ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಖಾತೆಯಿಂದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಎಸ್‌ಐಟಿ ಅಧಿಕಾರಿಗಳು ಹೈದರಾಬಾದ್‌ ಗ್ಯಾಂಗ್‌ನಿಂದ 8.21 ಕೋಟಿ ರು. ನಗದು ಹಣ ಜಪ್ತಿ ಮಾಡಿದ ಬೆನ್ನಲ್ಲೇ ಇದೀಗ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ.ಪದ್ಮನಾಭನ ಬಳಿ 3.62 ಕೋಟಿ ರು. ನಗದು ಹಣ ಜಪ್ತಿ ಮಾಡಿದ್ದಾರೆ.

ನಿಗಮದ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಸಂಬಂಧ ಎಸ್ಐಟಿ ಅಧಿಕಾರಿಗಳು ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ.ಪದ್ಮನಾಭನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ವೇಳೆ ಆತ ನೀಡಿದ ಮಾಹಿತಿ ಮೇರೆಗೆ 3.62 ಕೋಟಿ ರು. ಹಣ ಜಪ್ತಿ ಮಾಡಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಈವರೆಗೆ ಎಸ್ಐಟಿ ಅಧಿಕಾರಿಗಳು ಒಟ್ಟು ಸುಮಾರು 11.83 ಕೋಟಿ ರು. ನಗದು ಜಪ್ತಿ ಮಾಡಿದಂತಾಗಿದೆ.

\Bಮತ್ತೊಬ್ಬ ಆರೋಪಿ ಬಂಧನ:\B

ಈ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಹೈದರಾಬಾದ್‌ ಗ್ಯಾಂಗ್‌ನ ಮತ್ತೊಬ್ಬ ಸದಸ್ಯ ಎಸ್‌ಐಟಿ ಬಲೆಗೆ ಬಿದ್ದಿದ್ದಾನೆ. ಉಡುಪಿಯ ಜಗದೀಶ್‌ ಬಂಧಿತ. ಈತ ಹೈದರಾಬಾದ್‌ ಗ್ಯಾಂಗ್‌ನ ಚಂದ್ರಮೋಹನ್‌ ಸಹಚರನಾಗಿದ್ದಾನೆ. ಈತ ಹಣ ಅಕ್ರಮ ವರ್ಗಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿರುವುದು ಎಸ್ಐಟಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.