ಸಿಎಲ್-೭ ಸನ್ನದು ಮಂಜೂರಾತಿಗೆ ೬೦ ಲಕ್ಷ ರು. ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಮೇರೆಗೆ ಮಂಡ್ಯ ಜಿಲ್ಲಾ ಅಬಕಾರಿ ಉಪ ಆಯುಕ್ತ ಆರ್.ನಾಗಶಯನ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.
ಕನ್ನಡಪ್ರಭ ವಾರ್ತೆ ಮಂಡ್ಯ
ಸಿಎಲ್-೭ ಸನ್ನದು ಮಂಜೂರಾತಿಗೆ ೬೦ ಲಕ್ಷ ರು. ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಮೇರೆಗೆ ಜಿಲ್ಲಾ ಅಬಕಾರಿ ಉಪ ಆಯುಕ್ತ ಆರ್.ನಾಗಶಯನ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.ಸುಂದರ್ ಎಂಬುವರಿಗೆ ಹೊಸದಾಗಿ ಸಿಎಲ್-೭ ಸನ್ನದು ಮಂಜೂರಾತಿ ನೀಡಲು ೬೦ ಲಕ್ಷ ರು.ಗೆ ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದೆ. ಅಧಿಕಾರಿಯವರ ಧ್ವನಿಯೆಂದು ಹೇಳಲಾದ ಸಂಭಾಷಣೆ ಆಡಿಯೋ ಖಾಸಗಿ ವಾಹಿನಿಗಳಲ್ಲಿ ಪ್ರಸಾರವಾಗಿದೆ. ಇದು ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಗಳ ಉಲ್ಲಂಘನೆಯಾಗಿದೆ ಎಂದು ಹೇಳಲಾಗಿದೆ.
ಈ ದುರ್ನಡತೆಗಾಗಿ ಶಿಸ್ತು ಕ್ರಮ ಜರುಗಿಸುವ ಸಂಬಂಧ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದನ್ವಯ ಆರ್.ನಾಗಶಯನ ಅವರಿಗೆ ಆಯುಕ್ತರ ಕಚೇರಿಯಿಂದ ಕಾರಣ ಕೇಳಿ ನೋಟಿಸ್ ಜಾರಿಯಾಗಿತ್ತು. ನಾಗಶಯನ ಅವರು ನೀಡಿರುವ ಸಮಜಾಯಿಷಿಯನ್ನು ಪರಿಶೀಲಿಸಿದಾಗ ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪ ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ಆರ್.ನಾಗಶಯನ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಆರ್ಥಿಕ ಇಲಾಖೆ (ಅಬಕಾರಿ) ಸರ್ಕಾರದ ಅಧೀನ ಕಾರ್ಯದರ್ಶಿ ಅಜಯ್ ಎಸ್.ಕೊರಡೆ ಆದೇಶಿಸಿದ್ದಾರೆ.ಅಮಾನತಿನ ಅವಧಿಯಲ್ಲಿ ಆರ್.ನಾಗಶಯನ ಅವರನ್ನು ಬೆಳಗಾವಿ ದಕ್ಷಿಣ ಜಿಲ್ಲೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಅಮಾನತಿನ ಸಮಯದಲ್ಲಿ ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಯ ನಿಯಮ ೯೮ರನ್ವಯ ಜೀವನಾಧಾರ ಭತ್ಯೆಯನ್ನು ಪಡೆಯಲು ಅರ್ಹರಿರುತ್ತಾರೆ. ಆರ್.ನಾಗಶಯನ ಅವರು ಅಮಾನತಿನ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೆ ಕೇಂದ್ರಸ್ಥಾನವನ್ನು ಬಿಡುವಂತಿಲ್ಲ ಎಂದು ಸ್ಪಷ್ಟವಾಗಿ ಆದೇಶದಲ್ಲಿ ತಿಳಿಸಿದ್ದಾರೆ.