ಸಾರಾಂಶ
ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ವೇಳೆ ಪೊಲೀಸರನ್ನು ನಿಂದಿಸಿ, ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ನಾಲ್ವರ ಬಂಧನ.
ಕನ್ನಡಪ್ರಭ ವಾರ್ತೆ ಬೆಂಗಳೂರು
‘ಡ್ರಂಕ್ ಆ್ಯಂಡ್ ಡ್ರೈವ್’ ತಪಾಸಣೆ ವೇಳೆ ಸಂಚಾರ ಪೊಲೀಸರೊಂದಿಗೆ ವಾಗ್ವಾದ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಾಲ್ವರನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಕೊಡಿಗೇಹಳ್ಳಿಯ ನವೀನ್ ಕುಮಾರ್, ಆದೇಶ್, ಅಬ್ದುಲ್, ಕಿರಣ್ ಬಂಧಿತರು. ಕಳೆದ ಶನಿವಾರ ಮಧ್ಯರಾತ್ರಿ 12 ಗಂಟೆಗೆ ಹೆಬ್ಬಾಳ ಸಂಚಾರ ಠಾಣೆ ಪೊಲೀಸರು ಹೆಬ್ಬಾಳದ ಸರ್ಕಲ್ನ ರಿಂಗ್ ರಸ್ತೆ ಬಳಿ ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದಿದ್ದ ನಾಲ್ವರು ಆರೋಪಿಗಳು ಪೊಲೀಸರ ಜತೆಗೆ ಅನುಚಿತವಾಗಿ ವರ್ತಿಸಿ, ಅವಾಚ್ಯಶಬ್ಧಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಈ ಸಂಬಂಧ ನೀಡಲಾದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ನಾಲ್ವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸಂಚಾರ ಪೊಲೀಸರು ಕಾರು ಚಾಲಕ ನವೀನ್ನನ್ನು ಆಲ್ಕೋ ಮೀಟರ್ನಲ್ಲಿ ತಪಾಸಣೆ ಮಾಡಿದಾಗ ಆತ ಮದ್ಯ ಸೇವಿಸಿರುವುದು ದೃಢಪಟ್ಟಿದೆ. ಈ ವೇಳೆ ಕಾರಿನಲ್ಲಿ ಕುಳಿತಿದ್ದ ಉಳಿದ ಮೂವರು ಸಂಚಾರ ಪೊಲೀಸರ ಜತೆಗೆ ವಾಗ್ವಾದಕ್ಕೆ ಮುಂದಾಗಿದ್ದಾರೆ. ಮದ್ಯದ ಅಮಲಿನಲ್ಲಿ ಪೊಲೀಸರನ್ನು ಅವಾಚ್ಯಶಬ್ಧಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ.ಬಳಿಕ ಸಂಚಾರ ಪೊಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ಕೊಡಿಗೇಹಳ್ಳಿ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಳಿಕ ಸಂಬಂಧ ಹೆಬ್ಬಾಳ ಸಂಚಾರ ಠಾಣೆ ಇನ್ಸ್ಪೆಕ್ಟರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.