ಸಾರಾಂಶ
ಬೆಂಗಳೂರು : ಮಾಜಿ ಸಂಸದ ಡಿ.ಕೆ.ಸುರೇಶ್ ತಂಗಿ ಎಂದು ನಂಬಿಸಿ ಚಿನ್ನದಂಗಡಿ ಮಾಲಕಿ ವನಿತಾ ಐತಾಳ್ ಅವರಿಂದ ಕೋಟ್ಯಂತರ ರು. ಮೌಲ್ಯದ ಚಿನ್ನಾಭರಣ ಸಾಲ ಪಡೆದು ವಂಚನೆ ಆರೋಪ ಪ್ರಕರಣದ ಆರೋಪಿಗಳಾದ ಐಶ್ವರ್ಯಾ ಗೌಡ ಮತ್ತು ಆಕೆಯ ಪತಿ ಹರೀಶ್ನನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು 8 ದಿನ ಕಸ್ಟಡಿಗೆ ಪಡೆದಿದ್ದಾರೆ.
ಇಬ್ಬರು ಆರೋಪಿಗಳು ಶನಿವಾರ ವಿಚಾರಣೆಗೆ ಹಾಜರಾಗಿದ್ದ ವೇಳೆ ಪೊಲೀಸರು ಬಂಧಿಸಿದ್ದರು. ನ್ಯಾಯಾಲಯವು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ವಶಕ್ಕೆ ನೀಡುವಂತೆ ಪೊಲೀಸರು 4ನೇ ಎಸಿಎಂಎಂ ನ್ಯಾಯಾಲಯಕ್ಕೆ ಸೋಮವಾರ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಮಾಡಿದ ನ್ಯಾಯಾಲಯವು ಇಬ್ಬರು ಆರೋಪಿಗಳನ್ನು ಜ.6ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ಸದ್ಯ ಆರೋಪಿಗಳನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಕರೆತಂದಿರುವ ಪೊಲಿಸರು ವಿಚಾರಣೆಗೆ ಒಳಪಡಿಸಿದ್ದಾರೆ.
ನಟ ಧರ್ಮನಿಗೆ ಮುಂದುವರೆದ ಶೋಧ: ಪ್ರಕರಣ ದಾಖಲಾದ ಬೆನ್ನಲ್ಲೇ ತಲೆಮರೆಸಿಕೊಂಡಿರುವ ಪ್ರಕರಣದ ಮತ್ತೊಬ್ಬ ಆರೋಪಿ ನಟ ಧರ್ಮೇಂದ್ರನ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ. ಆರೋಪಿ ಧರ್ಮೇಂದ್ರ ವಿರುದ್ಧ ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರಿನಲ್ಲಿ ವಾರಾಹಿ ವಲ್ಡ್ ಗೋಲ್ಡ್ ಚಿನ್ನದಂಗಡಿ ಮಾಲಕಿ ವನಿತಾ ಎಸ್.ಐತಾಳ್ ಜತೆಗೆ ಮೊಬೈಲ್ನಲ್ಲಿ ಮಾತನಾಡಿದ ಹಾಗೂ ಚಿನ್ನದಂಗಡಿಗೆ ಬಂದು ಬೆದರಿಕೆ ಹಾಕಿದ ಆರೋಪವಿದೆ.