ಕೆ.ಜಿ.ಹಳ್ಳಿ, ಡಿಜೆ ಹಳ್ಳಿ ಪ್ರಕರಣದ 15 ಆರೋಪಿಗಳ ಅರ್ಜಿ ವಜಾ

| Published : May 28 2025, 02:06 AM IST

ಸಾರಾಂಶ

ಐದು ವರ್ಷಗಳ ಹಿಂದೆ ನಗರದ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ತಮ್ಮ ವಿರುದ್ಧದ ಆರೋಪಗಳನ್ನು ಕೈಬಿಡಲು ಆದೇಶಿಸುವಂತೆ ಕೋರಿ 15 ಮಂದಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಐದು ವರ್ಷಗಳ ಹಿಂದೆ ನಗರದ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ತಮ್ಮ ವಿರುದ್ಧದ ಆರೋಪಗಳನ್ನು ಕೈಬಿಡಲು ಆದೇಶಿಸುವಂತೆ ಕೋರಿ 15 ಮಂದಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಆರೋಪಿಗಳಾದ ಸೈಯದ್‌ ಅಬ್ಬಾಸ್‌ ಸೇರಿ 14 ಮಂದಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್‌ ಕುಮಾರ್‌ ಅವರ ನೇತೃತ್ವದ ವಿಭಾಗೀಯ ಪೀಠ ಆದೇಶಿಸಿದೆ.

ಆರೋಪ ಪಟ್ಟಿಯಲ್ಲಿನ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧದ ಆರೋಪಗಳು ಸಾರ್ವಜನಿಕರಲ್ಲಿ ಭೀತಿ ಉಂಟು ಮಾಡುವುದನ್ನು ತಡೆಯುವ ಉದ್ದೇಶದಿಂದ ಜಾರಿಗೊಳಿಸಿರುವ ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ (ಯುಎಪಿಎ) ಸೆಕ್ಷನ್ 15ರ ವ್ಯಾಪ್ತಿಗೆ ಬರಲಿದೆ. ಅರ್ಜಿದಾರರನ್ನು ಪ್ರಕರಣದಿಂದ ಕೈ ಬಿಡಬೇಕು ಎಂಬ ವಿಚಾರವನ್ನು ಅಧೀನ ನ್ಯಾಯಾಲಯ ಪರಿಗಣಿಸಲು ಅವಕಾಶವಿದೆ. ಹೀಗಾಗಿ, ಹೈಕೋರ್ಟ್‌ ಮಧ್ಯಪ್ರವೇಶಿಸುವ ಅಗತ್ಯ ಕಂಡು ಬರುತ್ತಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.

ಪ್ರಕರಣದ ಹಿನ್ನೆಲೆ:

2020ರ ಆ.11ರಂದು ಅಂದಿನ ಪುಲಕೇಶಿನಗರ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಸಂಬಂಧಿ ಮುಸ್ಲಿಂ ಸಮುದಾಯ ಕುರಿತು ವಿವಾದಾತ್ಮಕ ಅಂಶ ಒಳಗೊಂಡಿರುವ ಪೋಸ್ಟ್‌ ಅನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು ಎಂಬ ಆರೋಪ ಸಂಬಂಧ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಪೊಲೀಸ್‌ ಠಾಣೆಗಳ ಮೇಲೆ ದಾಳಿ ನಡೆಸಿದ ಆರೋಪ ಅರ್ಜಿದಾರರ ಮೇಲಿದೆ. ಅರ್ಜಿದಾರರ ವಿರುದ್ಧ ಯುಎಪಿಎ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣವನ್ನು ಎನ್‌ಐಎ ಅಧಿಕಾರಿಗಳು ತನಿಖೆ ನಡೆಸಿದ್ದರು. ಪ್ರಕರಣದಿಂದ ತಮಗೆ ಮುಕ್ತಿ ನೀಡಬೇಕು ಎಂದು ಕೋರಿ ಅರ್ಜಿದಾರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.