ರಸ್ತೆ ಮೇಲೆ ಬಿದ್ದಿದ್ದ ಕೇಬಲ್‌ ವೈಯರ್‌ ದ್ವಿಚಕ್ರ ವಾಹನದ ಚಕ್ರಕ್ಕೆ ಸುತ್ತಿಕೊಂಡು ನಿಯಂತ್ರಣ ತಪ್ಪಿ ರಸ್ತೆ ಬಿದ್ದ ಸವಾರನ ಮೇಲೆ ಬಿಎಂಟಿಸಿ ಬಸ್‌ ಚಕ್ರ ಹರಿದು ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಎಚ್‌ಎಎಲ್‌ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

 ಬೆಂಗಳೂರು : ರಸ್ತೆ ಮೇಲೆ ಬಿದ್ದಿದ್ದ ಕೇಬಲ್‌ ವೈಯರ್‌ ದ್ವಿಚಕ್ರ ವಾಹನದ ಚಕ್ರಕ್ಕೆ ಸುತ್ತಿಕೊಂಡು ನಿಯಂತ್ರಣ ತಪ್ಪಿ ರಸ್ತೆ ಬಿದ್ದ ಸವಾರನ ಮೇಲೆ ಬಿಎಂಟಿಸಿ ಬಸ್‌ ಚಕ್ರ ಹರಿದು ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಎಚ್‌ಎಎಲ್‌ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೊಮ್ಮನಹಳ್ಳಿ ನಿವಾಸಿ ರೋಹಿತ್‌ ಆರ್‌.ಪಾಟೀಲ್‌ (23) ಮೃತ ಸವಾರ. ವೃತ್ತಿಯಲ್ಲಿ ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿದ್ದ ರೋಹಿತ್‌ ಶುಕ್ರವಾರ ಸಂಜೆ ಐಟಿಪಿಎಲ್‌ ರಸ್ತೆಯ ರಾಮೇಶ್ವರಂ ಕೆಫೆ ಸಮೀಪದ ಪಾಸ್‌ಪೋರ್ಟ್‌ ಕಚೇರಿ ಬಳಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಕೇಬಲ್‌ ವೈರ್‌ ದ್ವಿಚಕ್ರ ವಾಹನದ ಚಕ್ರಕ್ಕೆ ಸುತ್ತಿಕೊಂಡು ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ. ಇದೇ ಸಮಯಕ್ಕೆ ಹಿಂದಿನಿಂದ ಬರುತ್ತಿದ್ದ ಬಿಎಂಟಿಎಸ್‌ ಬಸ್‌ ಚಕ್ರ ರೋಹಿತ್‌ ಮೇಲೆಯೇ ಉರುಳಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸುದ್ದಿ ತಿಳಿದು ಸ್ಥಳಕ್ಕೆ ಬಂದ ಸಂಚಾರ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಶನಿವಾರ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ವಾರುಸುದಾರರಿಗೆ ಹಸ್ತಾಂತರಿಸಿದ್ದಾರೆ. ಎಚ್ಎಎಲ್‌ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.