ಅಪಘಾತದಲ್ಲಿ ಗಾಯಗೊಂಡಿದ್ದ ಕೃಷಿ ಇಲಾಖೆ ಮಹಿಳಾ ಉದ್ಯೋಗಿ ಸಾವು

| Published : Nov 17 2025, 12:45 AM IST

ಅಪಘಾತದಲ್ಲಿ ಗಾಯಗೊಂಡಿದ್ದ ಕೃಷಿ ಇಲಾಖೆ ಮಹಿಳಾ ಉದ್ಯೋಗಿ ಸಾವು
Share this Article
  • FB
  • TW
  • Linkdin
  • Email

ಸಾರಾಂಶ

ಮದ್ದೂರು ಪಟ್ಟಣದ ಬೆಂಗಳೂರು- ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಕಳೆದ ನ.5ರಂದು ಸ್ಕೂಟರ್‌ಗೆ ಕಾರು ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡಿದ್ದ ಕೃಷಿ ಇಲಾಖೆ ಮಹಿಳಾ ಉದ್ಯೋಗಿ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ.

ಕನ್ನಡಪ್ರಭ ವಾರ್ತೆ ಮದ್ದೂರು

ಪಟ್ಟಣದ ಬೆಂಗಳೂರು- ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಕಳೆದ ನ.5ರಂದು ಸ್ಕೂಟರ್‌ಗೆ ಕಾರು ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡಿದ್ದ ಕೃಷಿ ಇಲಾಖೆ ಮಹಿಳಾ ಉದ್ಯೋಗಿ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ.

ಮೂಲತಃ ಸೋಮನಹಳ್ಳಿಯ ನಿವಾಸಿ ಎಸ್‌.ವಿ.ಶ್ವೇತ (38) ಮೃತಪಟ್ಟವರು. ಕಳೆದ ನ.5ರಂದು ಜೆಎಂಎಫ್‌ಸಿ ನ್ಯಾಯಾಲಯದ ಬೆಂಗಳೂರು-ಮೈಸೂರು ಹೆದ್ದಾರಿ ಸರ್ವಿಸ್ ರಸ್ತೆಯಲ್ಲಿ ಶ್ವೇತಾ ಚಾಲನೆ ಮಾಡುತ್ತಿದ್ದ ಸ್ಕೂಟರ್‌ಗೆ ಕಾರು ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು.

ಅಪಘಾತದಲ್ಲಿ ತಲೆ ಮತ್ತು ಕೈಗಳಿಗೆ ಗಾಯಗೊಂಡಿದ್ದ ಈಕೆಯನ್ನು ಮದ್ದೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಡಿಆರ್ ಎಂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗಿದೆ ಭಾನುವಾರ ಬೆಳಗಿನ ಜಾವ ಕೊನೆ ಉಸಿರೆಳೆದಿದ್ದಾರೆ.

ಈಕೆ ಪತಿ ನವೀನ ಮೈಸೂರಿನ ಆರ್‌ಟಿಓ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ದಂಪತಿಗೆ ಆರು ತಿಂಗಳ ಹೆಣ್ಣು ಮಗು ಇದ್ದು, ಹೆರಿಗೆ ರಜೆ ಮೇಲೆ ಇದ್ದರು. ಅಪಘಾತ ಸಂಬಂಧ ಮದ್ದೂರು ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮರಣೋತ್ತರ ಪರೀಕ್ಷೆ ನಂತರ ಶ್ವೇತಾಳ ಶವವನ್ನು ಸೋಮನಹಳ್ಳಿ ಗ್ರಾಮಕ್ಕೆ ತಂದು ಅಂತ್ಯಕ್ರಿಯೆ ನೆರವೇರಿಸಲಾಯಿತು. ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಪ್ರತಿಭಾ ಹಾಗೂ ಇಲಾಖೆ ಸಿಬ್ಬಂದಿ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದರು.