ಕನ್ನಡಪ್ರಭ ವಾರ್ತೆ ಬೆಂಗಳೂರು

ನಗರದಲ್ಲಿ ನಡೆದ ಐದು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಐವರು ಪುರುಷರು ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕ ಸುಬ್ಬಯ್ಯಪಾಳ್ಯದ ನಿವಾಸಿ ನಾಗರಾಜ್‌(25) ಮೃತಪಟ್ಟಿರುವ ಘಟನೆ ಕೆಂಗೇರಿ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೆಂಗೇರಿ ಸಮೀಪದ ಕಣಿಮಿಣಿಕೆ ಬಳಿ ಶುಕ್ರವಾರ ರಾತ್ರಿ 10 ಗಂಟೆಯ ಸುಮಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ನಾಗರಾಜ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ವಾಹನ ಡಿಕ್ಕಿ ಕಾರ್ಮಿಕ ಸಾವು: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ದಿನಗೂಲಿ ಕಾರ್ಮಿಕ ಕುಂಬಳಗೋಡಿನ ನಿವಾಸಿ ಮನು ಕುಮಾರ್ (25) ಮೃತಪಟ್ಟಿರುವ ಘಟನೆ ಕೆಂಗೇರಿ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು ರಸ್ತೆಯ ನೈಸ್ ರಸ್ತೆ ಜಂಕ್ಷನ್ ಬಳಿ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಮನುಕುಮಾರ್‌ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.

ಆ್ಯಂಬುಲೆನ್ಸ್‌ ಡಿಕ್ಕಿಗೆ ಪಾದಚಾರಿ ಸಾವು:


ವೇಗವಾಗಿ ಬಂದ ಆ್ಯಂಬುಲೆನ್ಸ್‌ ಡಿಕ್ಕಿಯಾಗಿ ಪಾದಚಾರಿ ಶ್ರೀನಿವಾಸ್(68) ಮೃತಪಟ್ಟಿರುವ ಪ್ರಕರಣ ಯಲಹಂಕ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶುಕ್ರವಾರ ರಾತ್ರಿ 11 ಗಂಟೆಯ ಸುಮಾರಿಗೆ ಯಲಹಂಕದ ಡೇರಿ ವೃತ್ತದ ಬಳಿ ವೇಗವಾಗಿ ಬಂದ ಆ್ಯಂಬುಲೆನ್ಸ್‌ ಡಿಕ್ಕಿ ಹೊಡೆದದೆ. ಗಾಯಗೊಂಡಿದ್ದ ಶ್ರೀನಿವಾಸ್‌ ಅವರನ್ನು ಅದೇ ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ವಾಹನ ಡಿಕ್ಕಿಯಾಗಿ ವ್ಯಕ್ತಿ ಸಾವು: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಪ್ರಕರಣ ಯಲಹಂಕ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶುಕ್ರವಾರ ರಾತ್ರಿ 11 ಗಂಟೆಯ ಸುಮಾರಿ ಕೋಗಿಲು ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಮೃತರು ಸುಮಾರು 35 ವರ್ಷದವರಾಗಿದ್ದು, ಅವರ ಹೆಸರು ವಿಳಾಸ ಪತ್ತೆಯಾಗಿಲ್ಲ. ಮೃತದೇಹವನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಆಸ್ಪತ್ರೆಯ ಸಿಬ್ಬಂದಿ ಸಾವು:

ಬೈಕ್‌ನಿಂದ ನಿಯಂತ್ರಣ ತಪ್ಪಿ ಬಿದ್ದು ಸವಾರ ಮೃತಪಟ್ಟಿರುವ ಘಟನೆ ಯಲಹಂಹ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಒಡಿಶಾ ಮೂಲದ ಕೆ.ಶಶಾಂಕ್‌(35) ಮೃತಪಟ್ಟವರು. ಖಾಸಗಿ ಆಸ್ಪತ್ರೆಯಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಶಶಾಂಕ್‌ ಅಟ್ಟೂರಿನಲ್ಲಿರುವ ತಮ್ಮ ನಿವಾಸಕ್ಕೆ ಹೋಗಲು ಬೈಕ್‌ನಲ್ಲಿ ಹೋಗುತ್ತಿರುವಾಗ ನಾಗೇನಹಳ್ಳಿ ಜಂಕ್ಷನ್‌ ಬಳಿ ಆಕಸ್ಮಿಕವಾಗಿ ನಿಯಂತ್ರಣ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.