ಸಾರಾಂಶ
ಬೆಂಗಳೂರು : ಕರ್ತವ್ಯ ಲೋಪ ಆರೋಪದ ಮೇರೆಗೆ ಬಿಬಿಎಂಪಿಯ ಪಶ್ಚಿಮ ವಲಯದ ಉಪ ಹಣಕಾಸು ನಿಯಂತ್ರಕರ ಕಚೇರಿಯ ಪ್ರಥಮ ದರ್ಜೆ ಸಹಾಯಕಿ ಲೋಕೇಶ್ವರಿ ಹಾಗೂ ಪೌರಕಾರ್ಮಿಕ (ಪ್ರಭಾರಿ ಕಿರಿಯ ಆರೋಗ್ಯ ಪರಿವೀಕ್ಷಕ) ಕೃಷ್ಣ ಅವರನ್ನು ಅಮಾನತುಗೊಳಿಸಿ ಬಿಬಿಎಂಪಿಯ ಆಡಳಿತ ವಿಭಾಗದ ಉಪ ಆಯುಕ್ತರು ಆದೇಶಿಸಿದ್ದಾರೆ.
ಗಾಂಧಿನಗರ ವಿಭಾಗದಲ್ಲಿ ಘನತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣಿಕೆ ಬಿಲ್ ಪಾವತಿ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಕುರಿತು ಘನತ್ಯಾಜ್ಯ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತರ ವಿಚಾರಣೆ ವರದಿಯ ಉಲ್ಲೇಖದ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಇಲಾಖೆ ವಿಚಾರಣೆಗೆ ಆದೇಶಿಸಲಾಗಿದೆ.
ಪೌರ ಕಾರ್ಮಿಕ ಕೃಷ್ಣ ಎಂಬುವರು ಗಾಂಧಿನಗರದ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷದಿಂದ ಘನತ್ಯಾಜ್ಯ ಸಂಗ್ರಹ ಮತ್ತು ಸಾಗಾಣಿಕೆ ಗುತ್ತಿಗೆ ಪಡೆದುಕೊಂಡು ನಿರ್ವಹಣೆ ಮಾಡುತ್ತಿದ್ದಾರೆ. ಉಳಿದ ನಗರದ 26 ವಿಧಾನಸಭಾ ಕ್ಷೇತ್ರದಲ್ಲಿ ಘನತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಕಾರ್ಯಾದೇಶ ಪಡೆದುಕೊಂಡಿದ್ದಾರೆ. ಆದರೆ ಬಿಬಿಎಂಪಿಯ ಅಧಿಕಾರಿ, ಸಿಬ್ಬಂದಿ ಹಾಗೂ ಅವರ ರಕ್ತ ಸಂಬಂಧಿಯ ಹೆಸರಿನಲ್ಲಿ ಗುತ್ತಿಗೆ ಪಡೆಯುವುದು ಕಾನೂನು ಬಾಹಿರವಾಗಿದೆ. ಹೀಗಿರುವಾಗ ಗುತ್ತಿಗೆ ಪಡೆಯುವಲ್ಲಿ ಕೃಷ್ಣ ಅವರಿಗೆ ಸಹಕರಿಸಿದ ಲೋಕೇಶ್ವರಿ ಹಾಗೂ ಖಾಯಂ ಪೌರಕಾರ್ಮಿಕ ನಾರಾಯಣ್ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ದಾಖಲಾಗಿತ್ತು. ವಿಚಾರಣೆ ನಡೆಸಿ ಇದೀಗ ಅಮಾನತು ಪಡಿಸಲಾಗಿದೆ.