ಓದಿನ ಖರ್ಚಿಗೆ ಗಾಂಜಾ ಮಾರಾಟಕ್ಕಿಳಿದಿದ್ದ ಕಾನೂನು ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಬೇಗೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಓದಿನ ಖರ್ಚಿಗೆ ಗಾಂಜಾ ಮಾರಾಟಕ್ಕಿಳಿದಿದ್ದ ಕಾನೂನು ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಬೇಗೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡು ಮೂಲದ ದೊರೈರಾಜು ಬಂಧಿತನಾಗಿದ್ದು, ಆರೋಪಿಯಿಂದ ₹2.5 ಲಕ್ಷ ಮೌಲ್ಯದ 4.800 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ದೇವರ ಚಿಕ್ಕನಹಳ್ಳಿ ಸಮೀಪ ಗಾಂಜಾ ಮಾರಾಟಕ್ಕೆ ಆತ ಯತ್ನಿಸಿದ್ದಾಗ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಮಿಳುನಾಡಿನ ಕೊಯಮತ್ತೂರಿನವನಾದ ದೊರೈರಾಜು ಒಡಿಶಾದ ಭುವನೇಶ್ವರನಗರದ ಖಾಸಗಿ ಕಾನೂನು ಕಾಲೇಜಿನಲ್ಲಿ ಎರಡನೇ ವರ್ಷದಲ್ಲಿ ಕಾನೂನು ಪದವಿ ಓದುತ್ತಿದ್ದಾನೆ. ಆತನ ಹೆತ್ತವರು ರೈತರಾಗಿದ್ದು, ಓದಿನ ಖರ್ಚು ವೆಚ್ಚಗಳಿಗೆ ರಾಜುಗೆ ಸಂಕಷ್ಟ ಎದುರಾಗಿತ್ತು. ಈ ಆರ್ಥಿಕ ಸಮಸ್ಯೆ ಹಿನ್ನೆಲೆಯಲ್ಲಿ ಹಣ ಸಂಪಾದನೆಗೆ ಆತ ಗಾಂಜಾ ಮಾರಾಟಕ್ಕಿಳಿದಿದ್ದ. ಈ ಮೊದಲು ನಗರದ ಕಾಮಾಕ್ಷಿಪಾಳ‍್ಯ ಸಮೀಪದ ಖಾಸಗಿ ಕಾಲೇಜಿನಲ್ಲಿ ರಾಜು ಪದವಿ ಓದಿದ್ದ. ಹೀಗಾಗಿ ಬೆಂಗಳೂರಿಗೆ ಒಡಿಶಾದಿಂದ ರೈಲಿನಲ್ಲಿ ಗಾಂಜಾ ತಂದು ಮಾರಾಟಕ್ಕೆ ಆತ ಯೋಜಿಸಿದ್ದ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಒಡಿಶಾ ರಾಜ್ಯದ ಗುಡ್ಡಗಾಡು ಪ್ರದೇಶದಲ್ಲಿ ಗಾಂಜಾ ಬೇಸಾಯ ನಡೆಯುತ್ತದೆ. ಅಲ್ಲಿನ ಅರಣ್ಯ ನಿವಾಸಿಗಳಿಂದ ಕಡಿಮೆ ಬೆಲೆಗೆ ಗಾಂಜಾ ತಂದು ನಗರದಲ್ಲಿ ದುಬಾರಿ ಬೆಲೆಗೆ ಮಾರಾಟಕ್ಕೆ ಆತ ಯತ್ನಿಸಿದ್ದ. ಇದೇ ಮೊದಲ ಬಾರಿಗೆ ಗಾಂಜಾ ತಂದಿದ್ದಾಗಿ ವಿಚಾರಣೆ ವೇಳೆ ವಿದ್ಯಾರ್ಥಿ ಹೇಳಿಕೆ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.