ಸಾರಾಂಶ
ಅರಣ್ಯ ಇಲಾಖೆಯ ಬೇಜವಾಬ್ದಾರಿತನದಿಂದ ಚಿರತೆಯೊಂದು ಬೆಂಕಿಯಲ್ಲಿ ಸುಟ್ಟು ಸಾವನ್ನಪ್ಪಿರುವ ಘಟನೆ ಬುಧವಾರ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಮದ್ಲೇಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಿಪಟೂರು (ತುಮಕೂರು) : ಅರಣ್ಯ ಇಲಾಖೆಯ ಬೇಜವಾಬ್ದಾರಿತನದಿಂದ ಚಿರತೆಯೊಂದು ಬೆಂಕಿಯಲ್ಲಿ ಸುಟ್ಟು ಸಾವನ್ನಪ್ಪಿರುವ ಘಟನೆ ಬುಧವಾರ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಮದ್ಲೇಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮದ್ಲೇಹಳ್ಳಿ ಗ್ರಾಮ ಸೇರಿ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಮದ್ಲೇಹಳ್ಳಿಯ ಜಮೀನೊಂದರಲ್ಲಿ ಚಿರತೆ ಸೆರೆಗಾಗಿ ಬೋನ್ ಇರಿಸಿತ್ತು. ಬೋನಿನೊಳಗೆ ಚಿರತೆ ಸೆರೆಯಾಗಿದ್ದರೂ, ಇದನ್ನು ಗಮನಿಸದೆ ಅರಣ್ಯ ಇಲಾಖೆ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ.
ಬಳಿಕ ಈ ಪ್ರದೇಶದಲ್ಲಿ ಆಕಸ್ಮಿಕ ಅಗ್ನಿ ಅವಘಡ ಉಂಟಾಗಿದ್ದು, ಬೋನಿನಲ್ಲಿದ್ದ ಚಿರತೆ ಬೆಂಕಿಯ ಕೆನ್ನಾಲಿಗೆಗೆ ಬೆಂದು ಸಾವನ್ನಪ್ಪಿದೆ. ಇದನ್ನು ಗಮನಿಸಿದ ಸಾರ್ವಜನಿಕರು, ವಿಷಯ ತಿಳಿಸಿದ ಮೇಲೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಕಿಬ್ಬನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ತನಿಖೆ ನಡೆಸಿ ವರದಿ ನೀಡುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶಿಸಿದ್ದಾರೆ.