ಕನ್ನಡಪ್ರಭ ವಾರ್ತೆ ಬೆಂಗಳೂರು
ವಿದ್ಯಾರಣ್ಯಪುರದಲ್ಲಿ ಪಿಯುಸಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರು ನಿಗೂಢವಾಗಿ ನಾಪತ್ತೆಯಾಗಿ 75 ದಿನಗಳೇ ಕಳೆದಿದ್ದು, ಇದುವರೆಗೂ ಯಾವುದೇ ಸುಳಿವು ಲಭ್ಯವಾಗಿಲ್ಲ. ಇವರ ಪತ್ತೆ ಕಾರ್ಯ ಪೊಲೀಸರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.ಈ ಇಬ್ಬರು ಹುಡುಗಿಯರ ಪತ್ತೆಗಾಗಿ ಪೊಲೀಸ್ ಇಲಾಖೆ 10 ಜನರ ವಿಶೇಷ ತಂಡವನ್ನು ರಚಿಸಿದ್ದು, ಈ ತಂಡವೂ ವಿದ್ಯಾರ್ಥಿನಿಯರಿಗಾಗಿ ಹಲವು ಕಡೆಗಳಲ್ಲಿ ಹುಡುಕಾಟ ನಡೆಸಿದ್ದು, ಇವರ ಬಗ್ಗೆ ಯಾವುದೇ ಸುಳಿವು ಸಿಗುತ್ತಿಲ್ಲ. ಇವರನ್ನು ಅರಸಿ ಪೊಲೀಸರು ಹೋಗದೆ ಇರುವ ಜಾಗವಿಲ್ಲ, ಹುಡುಕಾಡದ ಸ್ಥಳವಿಲ್ಲ. ಆದರೂ ಈ ಹುಡುಗಿಯರು ಎಲ್ಲಿ ಹೋದರು, ಏನಾದರೂ ಎಂಬ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಇದು ಕುಟುಂಬಸ್ಥರನ್ನು ಕಂಗಾಲಾಗುವಂತೆ ಮಾಡಿದೆ.
ಕಂಗಾಲಾದ ಪಾಲಕರು:ಈ ಇಬ್ಬರಿಗಾಗಿ ಕೇರಳದಲ್ಲಿಯೇ ಪೊಲೀಸ್ ತಂಡವೊಂದು ಬೀಡುಬಿಟ್ಟಿದ್ದು ಹುಡುಕಾಟ ನಡೆಸಿದೆ. ಇಬ್ಬರು ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದರು. ದ್ವಿತೀಯ ಪಿಯುಸಿ ಓದುತ್ತಿದ್ದ ತನಿಷ್ಕಾ ಹಾಗೂ ಆಕೆಯ ಜ್ಯೂನಿಯರ್ ತೇಜಸ್ವಿನಿ ನಾಪತ್ತೆಯಾಗಿದ್ದರು. ಇವರಿಗಾಗಿ ಮುಂಬೈ, ಚೆನೈ, ಕೊಯಮತ್ತೂರು, ದೆಹಲಿ, ಕಾಶಿ, ಕೇರಳ, ಚಾಮರಾಜನಗರ, ಮೈಸೂರು ಸೇರಿ ಸುಮಾರು 100 ಕ್ಕೂ ಹೆಚ್ಚು ಸ್ಥಳಗಳಲ್ಲಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.ವಿದ್ಯಾರ್ಥಿನಿಯರು ಪೋನ್ ಮತ್ತು ಎಟಿಎಂ ಕಾರ್ಡ್ ಕೂಡ ಬಳಸಿಲ್ಲ, ಸ್ನೇಹಿತರು ಹಾಗೂ ಕುಟುಂಬದ ಸಂಪರ್ಕವನ್ನು ಮಾಡಿಲ್ಲ, ಇವರು ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದವರೆಗೂ ಹೋಗಿದ್ದ ಸುಳಿವು ಸಿಕ್ಕಿತ್ತು. ಆದರೆ ಅಲ್ಲಿಗೆ ಹೋಗುವಷ್ಟರಲ್ಲಿ ಇವರು ಅಲ್ಲಿಂದಲೂ ನಾಪತ್ತೆಯಾಗಿದ್ದರು. ಅಲ್ಲಿಂದ ಎಲ್ಲಿ ಹೋದರು ಅನ್ನೋದೇ ಈಗ ಯಕ್ಷ ಪ್ರಶ್ನೆಯಾಗಿದೆ.
ವಿದ್ಯಾರ್ಥಿಗಳ ಪಾಲಕರು ಹೈಕೋರ್ಟ್ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ವಿದ್ಯಾರ್ಥಿನಿಯರನ್ನು ಹುಡುಕಲು ಪೊಲೀಸರಿಗೆ ಒಂದು ವಾರದ ಕಾಲಾವಕಾಶ ನೀಡಿತ್ತು. ಈ ಗಡುವು ಮುಗಿದು ಒಂದು ತಿಂಗಳೇ ಕಳೆದಿದೆ. ಆದರೂ ಈ ಬಾಲಕಿಯರ ಸುಳಿವು ಪತ್ತೆಯಾಗದೇ ಇರುವುದು ಪಾಲಕರನ್ನು ಕಂಗಾಲಾಗುವಂತೆ ಮಾಡಿದೆ.
